ಗಣರಾಜ್ಯೋತ್ಸವ 2025 : ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ: ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು.

ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ.

ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು.

ನಿಗದಿತ ರೂಪು ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದ್ದು ವಿಶೇಷ ಎನಿಸಿದೆ.

ಅಹಿಂಸಾವಾದಿಯ ನೆಲೆಬೀಡು,ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿದ್ದು, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಉಸ್ತುವಾರಿಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಕಲಾ ನಿರ್ದೇಶಕ ಶಶಿಧರ ಅಡಪ ಅವರು ಕಲಾ ನಿರ್ದೇಶನ ಮಾಡಿದ್ದಾರೆ.

ಸಂಗೀತ ನಿರ್ದೇಶಕ ಪ್ರವೀಣ್ ಡಿ.ರಾವ್ ಅವರು ಕನ್ನಡ ಸಾಹಿತ್ಯ ಇರುವ ಸುಮಧುರವಾದ ಸಂಗೀತ ಕರ್ತವ್ಯಪಥದಲ್ಲಿ ನಿನಾದಿಸಿ ಕೇಳುಗರ ಮನಸೂರಗೊಂಡಿತು. ಮೈಸೂರು,ಬೆಂಗಳೂರು,ಗದಗ ಮತ್ತು ಧಾರವಾಡದಿಂದ ಆಗಮಿಸಿದ 18 ಜನ ಕಲಾವಿದರಿರುವ ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ,ಸಾಂಪ್ರದಾಯಿಕ ಉಡುಪಿನಲ್ಲಿ

ಕರ್ತವ್ಯಪಥದಲ್ಲಿ ಕಂಗೊಳಿಸಿದರು. ಇನ್ನುಳಿದ 10 ಜನ ಕಲಾವಿದರು ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಗಮನಸೆಳೆದರು.

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು,ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.
ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸಿತು.

2022ರ ಇಲಾಖೆಯು ಪ್ರದರ್ಶಿಸಿದ್ದ ʼಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್‍ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು.

2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್‍ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

17 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago