Categories: ಲೇಖನ

ಗುರು ಪೂರ್ಣಿಮೆ…ಗುರುವೆಂದರೆ…?

ಗುರು ಪೂರ್ಣಿಮೆ…

ಅರಿವೇ ಗುರು……

ಅರಿತವಂಗೆ ಎಲ್ಲವೂ – ಎಲ್ಲರೂ ಗುರುಗಳೇ…..

ಅರಿಯದವಂಗೆ ಅಹಂಕಾರ ಅಜ್ಞಾನವೇ ಗುರು…..

ಅರಿವೆಂಬುದು ಒಂದು ಪ್ರಜ್ಞೆ. ಆದರೆ ಆ ಅರಿವು ಎಷ್ಟು ಆಳವಾದದ್ದು, ಎಷ್ಟು ತೀವ್ರವಾದದ್ದು, ಎಷ್ಟು ವಿಶಾಲವಾದದ್ದು, ಎಷ್ಟು ಸಹಜವಾದದ್ದು, ಎಷ್ಟು ಸ್ಥಿತಿಸ್ಥಾಪಕ ಗುಣವುಳ್ಳದ್ದು, ಎಷ್ಟು ಬಾಲಿಶವಾದದ್ದು, ಎಷ್ಟು ಸತ್ಯವಾದದ್ದು, ಎಷ್ಟು ವಾಸ್ತವವಾದದ್ದು, ಎಷ್ಟು ಪ್ರಯೋಜನಕಾರಿಯಾದದ್ದು, ಎಷ್ಟು ಅಪಾಯಕಾರಿಯಾದದ್ದು, ಎಷ್ಟು ಮಾನವೀಯವಾದದ್ದು, ಎಷ್ಟು ಸಂಕುಚಿತವಾದದ್ದು ಎಂಬ ಅನೇಕ ಅಂಶಗಳನ್ನು ಒಳಗೊಂಡಿರುತ್ತದೆ…

ಅರಿವೇ ಗುರು, ಅರಿವೇ ಜ್ಯೋತಿರ್ಲಿಂಗ, ನಾನೆಂಬುದು ಅರಿವಿ ನೆಂಜಲು ಮುಂತಾದ ಅರಿವಿನ ವಿಮರ್ಶೆಗಳು ಅರಿವಿನ ಅರಿವನ್ನು ತಿಳುವಳಿಕೆ, ಜ್ಞಾನಾರ್ಜನೆಯ ಮಾರ್ಗ ಮತ್ತು ಗುರಿ ಮುಂತಾದ ರೀತಿಯಲ್ಲಿ ವ್ಯಾಖ್ಯಾನಿಸುತ್ತದೆ. ಈ ಅರಿವು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮುಂತಾದ ಎಲ್ಲಾ ಕ್ಷೇತ್ರಗಳಿಗೆ ಅನ್ವಯಿಸಿ ಒಟ್ಟು ವ್ಯಕ್ತಿತ್ವ ಮತ್ತು ಸಾಮಾಜಿಕ ಹಾಗೂ ವೈಯಕ್ತಿಕ ಜೀವನದ ಗುಣಮಟ್ಟವನ್ನು ನಿರ್ಧರಿಸುತ್ತದೆ…

ಅರಿವು ಕೇವಲ ಸಕಾರಾತ್ಮಕ ಮಾತ್ರವಲ್ಲದೆ ನಕಾರಾತ್ಮಕವೂ ಆಗಿರಬಹುದು. ಆದರೆ ಸಾಮಾನ್ಯವಾಗಿ ಅರಿವನ್ನು ತಿಳುವಳಿಕೆಯ ಉತ್ಕೃಷ್ಟ ಮಟ್ಟ ಎಂದೇ ಉಪಯೋಗಿಸಲಾಗುತ್ತದೆ ಅಥವಾ ಭವಬಂಧನಗಳಿಂದ ಮುಕ್ತವಾಗುವ ಪ್ರಕ್ರಿಯೆ ಅಥವಾ ನೆಮ್ಮದಿಯಿಂದ ಸ್ವಾತಂತ್ರ್ಯದಿಂದ ಬದುಕುವ ಪ್ರಜ್ಞೆ ಎಂಬಂತೆಯೂ ಅರ್ಥೈಸಿಕೊಳ್ಳಬಹುದು.

ಅರಿವೆಂಬುದು ಭಾವನಾತ್ಮಕವಾಗಬಾರದು, ಮೌಢ್ಯವಾಗಬಾರದು. ಅದೊಂದು ಸಮಗ್ರತೆಯ ಮತ್ತು ವೈಚಾರಿಕ ಪ್ರಜ್ಞೆಯಾದರೆ ಹೆಚ್ಚು ಉಪಯುಕ್ತವಾಗುತ್ತದೆ, ಮುಕ್ತವಾಗುತ್ತದೆ. ಇಲ್ಲದಿದ್ದರೆ ಜ್ಞಾನದ ಮಿತಿಗೆ ಒಳಪಟ್ಟು ಕೇವಲ ಸಾಹಿತ್ಯಕ ಪರಿಭಾಷೆಯಾಗಿ ಉಳಿದುಬಿಡುತ್ತದೆ.

ನನ್ನ ದೇಹವೇ ನನ್ನ ಗುರು………

ಪಂಚೇಂದ್ರಿಯಗಳನ್ನು ಒಳಗೊಂಡ ಇಡೀ ಶರೀರವೇ ನನ್ನ ಗುರು,

ನನ್ನ ತಂದೆ ತಾಯಿ ಬಂಧು ಬಳಗವೇ ನನ್ನ ಗುರುಗಳು,

ಶಿಕ್ಷಕ, ಗೆಳೆಯ, ವೈದ್ಯ, ಚಾಲಕ, ಕ್ಷೌರಿಕ, ಅಗಸ, ಚಮ್ಮಾರ, ಪೂಜಾರಿ, ರೈತ, ದಾದಿ, ಪೋಲೀಸ್ ಮುಂತಾದ ಎಲ್ಲರೂ ಗುರುಗಳೇ,

ಪುಸ್ತಕ, ಬಳಪ, ವಾಹನ, ಪ್ರಾಣಿ, ಪಕ್ಷಿ, ಆಕಾಶ, ಭೂಮಿ, ನೀರು, ಕಾಡುಗಳು ಇತ್ಯಾದಿಗಳು ಗುರುಗಳೇ,

ಊಟ, ಬಟ್ಟೆ, ಜಗಳ, ಕೋಪ, ಜ್ವರ, ನೋವು, ಪ್ರೀತಿ, ಪ್ರೇಮ, ಪ್ರಣಯ, ಕಷ್ಟ, ಸುಖ ಎಲ್ಲವೂ ಗುರುಗಳೇ,

ಧರ್ಮ, ಕಾನೂನು, ಇತಿಹಾಸ, ವಿಜ್ಞಾನ, ಸಂಘರ್ಷ, ಟೀಕೆ, ಹೊಗಳಿಕೆಗಳು ಗುರುಗಳೇ,

ಕೊಲೆ, ಸುಲಿಗೆ, ವಂಚನೆ, ಅತ್ಯಾಚಾರ, ತ್ಯಾಗ, ಸೌಹಾರ್ದ, ಸಹಕಾರಗಳು ಗುರುಗಳೇ,

ಎಲ್ಲಾ ರೀತಿಯ ಸಾಮಾಜಿಕ ಜಾಲತಾಣಗಳು ಗುರುಗಳೇ,

ನೀವು, ನಿಮ್ಮ ಅಭಿಪ್ರಾಯಗಳು, ಸಲಹೆಗಳು ಎಲ್ಲವೂ ಗುರುಗಳೇ,

ಇಡೀ ಸಮಾಜವೇ ನನ್ನ ಗುರು………

ನನ್ನ ಅನುಭವವೇ ನನ್ನ ಗುರು………

ಗುರುವೆಂದರೆ,
ಅದೊಂದು, ವ್ಯಕ್ತಿ, ಶಕ್ತಿ, ಅರಿವು, ಗ್ರಹಿಕೆ, ದಾರಿ, ಮಾರ್ಗದರ್ಶನ ಹೀಗೆ ಎಲ್ಲವೂ ಹೌದು, ರೂಪಗಳು ಬೇರೆ ಬೇರೆ,

ಗುರು ಪೂರ್ಣಿಮೆ ಕೇವಲ ಒಂದು ಸಾಂಕೇತಿಕ ದಿನ ಮಾತ್ರ, ಪ್ರತಿಕ್ಷಣವೂ ಗುರು ನಮ್ಮೊಂದಿಗೆ ಇರುತ್ತಾರೆ.

ಇಂದು ಭಯ ಭಕ್ತಿಗಳಿಂದ, ನಿರೀಕ್ಷೆಗಳಿಂದ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಪ್ರಾರ್ಥಿಸಿ ಪ್ರಸಾದ ತಿಂದು ಬರುವುದರ ಜೊತೆಗೆ ಅರಿವಿನ, ಗುರುವಿನ ಬಗ್ಗೆ ಆತ್ಮಾವಲೋಕನವಾಗಲಿ. ಏಕೆಂದರೆ ನಮ್ಮ ತಿಳಿವಳಿಕೆಗಳು ನಡವಳಿಕೆಗಳಾಗದೆ ಕೇವಲ ಆಚರಣೆಗಳಿಗೆ ಮಾತ್ರ ಸೀಮಿತವಾದರೆ ಇಂತಹ ಹಬ್ಬಗಳಿಗೆ ಅರ್ಥವೇ ಇರುವುದಿಲ್ಲ.

ಈ ಹಬ್ಬಗಳಲ್ಲಿ, ಈ ಸಂಭ್ರಮಗಳಲ್ಲಿ ನಮ್ಮ ಅಂತರಂಗದ ಶುದ್ಧೀಕರಣವಾದರೆ, ಆ ಮೂಲಕ ನಮ್ಮ ಸಾಮಾಜಿಕ ವ್ಯವಸ್ಥೆ ಒಳ್ಳೆಯ ಹಾದಿಯಲ್ಲಿ ಪರಿವರ್ತನೆ ಹೊಂದಿದರೆ ಗುರು ಪೂರ್ಣಿಮಾ ಎಂಬ ಹಬ್ಬಕ್ಕೆ ಸಾರ್ಥಕತೆ ಸಿಗುತ್ತದೆ. ಕೇವಲ ಅದ್ದೂರಿತನದ ಪ್ರದರ್ಶನವಾಗಲಿ , ಭಕ್ತಿಯ ಪ್ರದರ್ಶನವಾಗಲಿ, ಸಂಭ್ರಮವಾಗಲಿ ಮೌಡ್ಯವಾಗದೆ ಜ್ಞಾನವಾಗುವ, ಗುರುವಾಗುವ ಪ್ರಕ್ರಿಯೆ ಹೆಚ್ಚು ಅರ್ಥಪೂರ್ಣ.

ಈ ಸಂದರ್ಭದಲ್ಲಿ ಎಲ್ಲಾ ಗುರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ನಾವೂ ಗುರುವಾಗುವತ್ತ ಮುನ್ನಡೆಯೋಣ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

8 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

18 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

19 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago