ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಾವು ಸತ್ಯ ಹೇಳಿ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು. ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರು ಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದಿದ್ದಾರೆ.
ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಬೇಕು. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯಲು ಸಾಧ್ಯವೇ? ನಮ್ಮವರೇ ವಿರೋಧ ಪಕ್ಷಗಳ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು. ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2000 ರೂ. ವರೆಗೆ ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿಯವರು ಬರಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 25 ಸಂಸದರು ರಾಜ್ಯದಿಂದ ಇದ್ದರೂ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆ ಮಾಡಿದರು. 1ಲಕ್ಷ 66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ? ಎಂದು ಪ್ರಶ್ನೆ ಮಾಡದ್ದಾರೆ.
2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು. 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ. ಸೆಸ್, ಸರ್ಚಾರ್ಜ್ ನಲ್ಲಿ ನಮಗೆ ಪಾಲಿಲ್ಲ. 4 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯದಿಂದ ಸಂಗ್ರಹ ಮಾಡುತ್ತಾರೆ. 52 ಸಾವಿರ ಕೋಟಿ ರೂ.ಗಳನ್ನು ಮಾತ್ರ ಕೊಡುತ್ತಾರೆ. ಎಲ್ಲಾ ಶಾಸಕರು, ಸಂಸದರು ಇದನ್ನು ಹೇಳಬೇಕು ಎಂದು ಒತ್ತಾಯಿಸಿದ್ದಾರೆ.
ಈ 10 ವರ್ಷಗಳಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಜಿಎಸ್ಟಿ ಇಂದಾಗುವ ನಷ್ಟವನ್ನು ಭರಿಸುವುದಾಗಿ ಹೇಳಿದ್ದರೂ, ನಮಗೆ ಹಣವನ್ನು ಕೊಟ್ಟಿಲ್ಲ. ರಾಜ್ಯದ ಸಂಸದರೂ ತುಟಿಕ್ ಪಿಟಿಕ್ಕೆನ್ನದೇ ಇದ್ದಾರೆ. ಆರ್ಥಿಕವಾಗಿ ಸ್ವಲ್ಪ ಭಾರವಾದರೂ ಗ್ಯಾರಂಟಿಗಳು ಜನರಿಗೆ ಮುಂದಿನ ದಿನಗಳಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುತ್ತದೆ ಎಂದು ಹೇಳಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ ಕಳಿಸಿಕೊಟ್ಟು ಅದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ತಲುಪಿಸಬೇಕು ಎಂದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…