ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ದುರಸ್ತಿಯಾಗಬೇಕಾಗಿರುವ ಶುದ್ಧ ನೀರಿನ ಘಟಕಗಳನ್ನು (ಆರ್.ಒ ಪ್ಲಾಂಟ್) ಈ ವರ್ಷ ಆದ್ಯತೆಯ ಮೇಲೆ ಸರಿಪಡಿಸಲು ಉದ್ದೇಶಿಸಿದ್ದು, ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಿ ವರದಿಯನ್ನು ಸಿದ್ಧಪಡಿಸಿ ಕಳುಹಿಸುವಂತೆ ಎಲ್ಲ ಸಿಇಒಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಈಗಾಗಲೇ ನೀಡಿರುವ ಸೂಚನೆಗಳಂತೆ ಕ್ರಮಕೈಗೊಳ್ಳಲು ನಿರ್ದೇಶಿಸಲಾಗಿದೆ. ಬೇಸಿಗೆ ಎದುರಿಸಲು ಜಿಲ್ಲೆಗಳಿಗೆ ವಿಶೇಷ ಅನುದಾನ ನೀಡಲಾಗಿದ್ದು, ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಬಹುತೇಕ ಕಡೆ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕಗಳು ನೀರಿನ ಮೂಲಗಳಿಲ್ಲದ ಕಾರಣ ಸ್ಥಗಿತಗೊಂಡಿವೆ. ಘಟಕಗಳನ್ನು ನಿರ್ವಹಣೆ ಮಾಡುವ ಹೊಣೆಗಾರಿಕೆಯನ್ನು ನಿಗದಿ ಪಡಿಸದಿರುವುದು ಸೇರಿದಂತೆ, ಹಲವು ಕಾರಣಗಳಿಂದ ಕಾರ್ಯನಿರ್ವಹಿಸದಿರುವ ಘಟಕಗಳನ್ನು ದುರಸ್ತಿಗೊಳಿಸುವ ಮುನ್ನ ಸಾಧಕ-ಬಾಧಕಗಳನ್ನು ಪರಿಶೀಲಿಸಬೇಕು. ಈ ಸಂಬಂಧ ವಿವರವಾದ ನೀಲನಕ್ಷೆಯನ್ನು ಸಿದ್ಧಪಡಿಸಿ, ವಾಸ್ತವಿಕ ವರದಿಯನ್ನು ಕಳುಹಿಸುವಂತೆ ತಿಳಿಸಲಾಗಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ಸಲ್ಲಿಸುವ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಉತ್ತರ ನೀಡುವ ಮೂಲಕ ಅಧಿಕಾರಿಗಳು ಉತ್ತರದಾಯಿಗಳಾಗಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಳೆದ ವರ್ಷದಂತೆ ಈ ವರ್ಷವೂ ತಾಲ್ಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಗಳನ್ನು ಆಲಿಸುವ ಸಹಾಯವಾಣಿಗಳನ್ನು ತೆರೆಯಬೇಕೆಂದು ನಿರ್ದೇಶಿಸಲಾಗಿದೆ ಎಂದು ಹೇಳಿದರು.

ಬೇಸಿಗೆ ಅವಧಿಯಲ್ಲಿ ಬಾಡಿಗೆಗೆ ಪಡೆಯುವ ಟ್ಯಾಂಕರ್‌ಗಳಿಗೆ ಹಾಗೂ ಖಾಸಗಿ ಕೊಳವೆಬಾವಿಗಳಿಗೆ ಹಣ ಪಾವತಿ ಮಾಡುವಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜಿನಿಯರ್‌ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!