ಕೋಲಾರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ನಿರ್ಣಾಯಕವಾಗಿದ್ದು, ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ನಿಮ್ಮೊಂದಿಗೆ ಇರುತ್ತವೆ ಯಾವುದೇ ಕಾರಣಕ್ಕೂ ಈ ವಿಷಯದಲ್ಲಿ ಹಿಂದೆ ಸರಿಯಲ್ಲ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಭರವಸೆ ನೀಡಿದರು.
ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಸೋಮವಾರ ನೂತನ ಗ್ರಾಮ ಪಂಚಾಯತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಕಟ್ಟಡ ಜನರ ಸ್ವತ್ತು. ತಮ್ಮ ಗ್ರಾಮಗಳಲ್ಲಿ ಯಾವುದೇ ಸಮಸ್ಯೆ ಇದ್ದರೂ ಪಂಚಾಯತಿ ಗಮನಕ್ಕೆ ತಂದು ಪರಿಹರಿಸಿಕೊಳ್ಳಬಹುದಾಗಿದೆ ಆ ನಿಟ್ಟಿನಲ್ಲಿ ನೂತನ ಕಟ್ಟಡವು ಸಾರ್ವಜನಿಕರಿಗೆ ಸದುಪಯೋಗವಾಗಬೇಕಾಗಿದೆ ಎಂದರು.
ಮಹಾತ್ಮ ಗಾಂಧೀಜಿಯವರ ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದರು. ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರವೇ ದೇಶವು ಅಭಿವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಗ್ರಾಪಂ ಯಲ್ಲಿ ಚುನಾಯಿತ ಪ್ರತಿನಿಧಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಅಭಿವೃದ್ಧಿಗೆ ಏನು ಬೇಕಾದರೂ ಕೇಳಿ ಅನುದಾನ ನೀಡಲು ಸಿದ್ಧವಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ಹಿಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆಯಡಿಯಲ್ಲಿ ಸಾಕಷ್ಟು ಅನುದಾನವನ್ನು ಗ್ರಾಮ ಪಂಚಾಯತಿಗಳಿಗೆ ಒದಗಿಸುವಂತೆ ಮಾಡಿದ್ದಾರೆ. ಚುನಾಯಿತರಾದ ಜನಪ್ರತಿನಿಧಿಗಳು ಒಂದು ಕುಟುಂಬದ ರೀತಿಯಲ್ಲಿ ಇರಬೇಕು ಯಾವುದಾದರೂ ಸಣ್ಣ ಪುಟ್ಟ ತಪ್ಪುಗಳು ಇದ್ದರೆ ತಿದ್ದಿಕೊಂಡು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ನಿಮ್ಮಗಳ ತೆರಿಗೆ ಹಣವನ್ನು ಅಭಿವೃದ್ಧಿಗಾಗಿಯೇ ಸರಕಾರಗಳು ಮತ್ತೆ ನಿಮಗೆ ವಾಪಾಸು ಕೊಡಬೇಕು ಎಂದು ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಈಗಾಗಲೇ ಕೋಲಾರ ನಗರದ ರಿಂಗ್ ರಸ್ತೆ ನಿರ್ಮಿಸಲು ಈಗಾಗಲೇ 100 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಗೆ 10 ಕೋಟಿ ಸೇರಿದಂತೆ ತಾಲೂಕಿನ ಹೋಬಳಿ ಮಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಮುಂದೆ ಕೂಡ ಮಾದರಿ ಗ್ರಾಮ ಪಂಚಾಯಿತಿಯಾಗಿ ಮಾಡಲು ಅನುದಾನ ನೀಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಸುಮಾರು 1000 ಅಡಿಗಳಿಗೂ ಹೆಚ್ಚು ಆಳದಿಂದ ನೀರು ತಂದು ಕೃಷಿ ಮಾಡುವ ಜನರೇ ಹೆಚ್ಚು ಆದರೆ ಇತ್ತೀಚಿಗೆ ಟಮೋಟ ಸೇರಿದಂತೆ ತರಕಾರಿ ಬೆಳೆಗಳಲ್ಲಿ ಇಳುವರಿ ಇಲ್ಲವಾಗಿದೆ. ನೂರಿತ ವಿಜ್ಞಾನಿಗಳಿಂದ ಈ ಮಣ್ಣಿನ ಮತ್ತು ನೀರಿಗೆ ಸಂಬಂಧಿಸಿದಂತೆ ಪರೀಕ್ಷೆ ಮಾಡಿಸಿ ಸಮಸ್ಯೆ ಗುರುತಿಸಲು ವಿಧಾನ ಮಂಡಲದ ಅಧಿವೇಶನದಲ್ಲಿ ಜಿಲ್ಲೆಯ ಧ್ವನಿಯಾಗಿ ಮಾತಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಂಎಲ್ಸಿ ಇಂಚರ ಗೋವಿಂದರಾಜು, ಗ್ರಾಪಂ ಅಧ್ಯಕ್ಷೆ ರೇಣುಕಾಂಭ ಮುನಿರಾಜು, ಉಪಾಧ್ಯಕ್ಷ ನಾಗೇಂದ್ರ, ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ತಾಪಂ ಇಒ ಮುನಿಯಪ್ಪ, ಗ್ರಾಪಂ ಸದಸ್ಯರಾದ ನಂಜುಂಡಗೌಡ, ಗೋಪಾಲಕೃಷ್ಣ, ಪಿಲ್ಲಚ್ಚಪ್ಪ, ಪಿಡಿಒ ಶಾಲಿನಿ, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ವೈ ಶಿವಕುಮಾರ್, ಖಾಜಿಕಲ್ಲಹಳ್ಳಿ ಮುನಿರಾಜು, ಅಂಬರೀಶ್, ಶ್ರೀಧರ್ ಮುಂತಾದವರು ಇದ್ದರು.