ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು- ಸಿಎಂ ಸಿದ್ದರಾನಯ್ಯ ಸೂಚನೆ

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ. ಸದಾ ಇಷ್ಟೇ ಪಾರದರ್ಶಕ ನೇಮಕಾತಿ ನಡೆದರೆ ಅರ್ಹರಿಗೆ ಉದ್ಯೋಗ ದೊರೆಯುತ್ತದೆ, ಯೋಗ್ಯರು ಸರ್ಕಾರಿ ಸೇವೆಗೆ ದೊರೆತು ಸಮಾಜದ ಏಳಿಗೆ ಸಾಧ್ಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ ಮಾಡಿ, ಮಾತನಾಡಿದರು.

ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9,834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ. ಇಂದು ಆಯ್ಕೆಯಾದವರು ಸಾಧ್ಯವಾದಷ್ಟು ಮಟ್ಟಿಗೆ ಕೆಲಸ ಮಾಡುವ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದು ತಿಳಿಸಿದರು.

ನಮ್ಮ ದೇಶ ಗ್ರಾಮಗಳ ದೇಶ. ಕೃಷಿ ಪ್ರಮುಖವಾದ ಉದ್ಯೋಗವಾಗಿದ್ದು, ಶೇ.60 ಕ್ಕೂ ಹೆಚ್ಚು ಜನ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಜಮೀನುಗಳ ಲೆಕ್ಕ ಇಡುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ. ಹಳ್ಳಿಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಲು ದಾಖಲಾತಿಗಳು ಸರಿಯಾಗಿರಬೇಕು. ದಾಖಲೆಗಳನ್ನು ಬಹಳ ಕರಾರುವಾಕ್ಕಾಗಿ ಇಡುವುದು ಅವಶ್ಯಕ. ಆಧುನಿಕ ಕಾಲದಲ್ಲಿ ತಂತ್ರಜ್ಞಾನ, ವಿಜ್ಞಾನ ಬೆಳೆದಿದೆ. ಈಗ ಪ್ರತಿಯೊಂದೂ ಡಿಜಿಟಲೀಕರಣವಾಗಿದೆ. ಆನ್ ಲೈನ್ ನಲ್ಲಿ ದಾಖಲಾತಿಗಳನ್ನು ಪಡೆಯುವ ವ್ಯವಸ್ಥೆ ಬಂದ ನಂತರ ನಾವು ಯಾವುದೇ ಕಾರಣಕ್ಕೂ ತಪ್ಪುಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದರು.

ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ ಬಹಳ ಮಹತ್ವದ್ದು. ರೈತರಿಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಹತ್ತಿರದ ಸಂಬಂಧವಿದ್ದು, ಪ್ರತಿಯೊಬ್ಬ ರೈತರ ಪರಿಚಯ ಅವರಿಗಿರುತ್ತದೆ. ಅವರ ಭೂಮಿಯ ಕುರಿತು ಮಾಹಿತಿ ಗೊತ್ತಿರುತ್ತದೆ. ಅವರ ಪರಿಚಯವಿಟ್ಟುಕೊಂಡು ಅಗತ್ಯ ದಾಖಲಾತಿಗಳನ್ನು ಒದಗಿಸುವುದು ನಿಮ್ಮ ಕೆಲಸ ಎಂದರು.

ಗ್ರಾಮ ಆಡಳಿತಾಧಿಕಾರಿಗಳು ಉತ್ತಮ ನಡತೆ, ಸಂಪರ್ಕವನ್ನು ಹೊಂದಿದ್ದರೆ ರೈತರು ನಿಮ್ಮ ಮಾತನ್ನು ಕೇಳುತ್ತಾರೆ. ಗ್ರಾಮ ಆಡಳಿತಾಧಿಕಾರಿಗಳು ಒಳ್ಳೆ ರೀತಿಯ ಕೆಲಸ ಮಾಡಿಕೊಟ್ಟರೆ ಅವರ ಮೇಲೂ ಗೌರವವಿರುತ್ತದೆ. ಜನರ ಕೆಲಸ ದೇವರ ಕೆಲಸ ಎಂದು ನೆನೆಪಿಟ್ಟುಕೊಳ್ಳಬೇಕು. ನಾವಿರುವುದೇ ಜನರ ಸೇವೆಗಾಗಿ ಎನ್ನುವುದನ್ನು ಮರೆಯಬಾರದು. ಆರು ಲಕ್ಷ ಜನ ಸರ್ಕಾರಿ ನೌಕರರು ಅವರಿಗಾಗಿಯೇ ಇರುವುದು. ರಾಜಕಾರಣಿಗಳು ಜನರಿಂದ ಆಯ್ಕೆಯಾದರೆ, ಸರ್ಕಾರದಿಂದ ಆಯ್ಕೆಯಾದ ಸರ್ಕಾರಿ ನೌಕರರು ಜನಸೇವೆಯನ್ನು ಧ್ಯೇಯವಾಗಿಸಿಕೊಳ್ಳಬೇಕು ಎಂದು ಹೇಳಿದರು.

ಕಂದಾಯ ಇಲಾಖೆಯದ್ದು ಅತ್ಯಂತ ಜವಾಬ್ದಾರಿಯುತ ಕೆಲಸ. ಇಲ್ಲಿ ಬಹಳಷ್ಟು ಸುಧಾರಣೆಗಳನ್ನು ತರಬೇಕೆಂದು ಕೃಷ್ಣಬೈರೇಗೌಡರಿಗೆ ಸೂಚಿಸಿದ್ದೆ, ಅವರು ಈಗಾಗಲೇ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಅವರಿಗೆ ಇನ್ನಷ್ಟು ಸುಧಾರಣೆಗಳನ್ನು ತರುವ ಶಕ್ತಿ ಇದೆ ಎಂದು ನಂಬಿದ್ದೇನೆ ಎಂದು ತಿಳಿಸಿದರು.

ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿರುವುದರಿಂದ ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಲು ಸಾಧ್ಯವಾಗುತ್ತದೆ. ರೈತರ ಮನೆಮನೆಗೆ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು. ಗ್ರಾಮ ಆಡಳಿತಾಧಿಕಾರಿಗಳ 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4,000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು. ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರಿಗೆ ಅನುಕೂಲ ಕಲ್ಪಿಸುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದರು.

ಕೃಷಿ ಲಾಭದಾಯಕ ವೃತ್ತಿಯಾಗಿ ಉಳಿದುಕೊಂಡಿಲ್ಲ. ಅನ್ನದಾತರು ನಾಡಿನ ಒಳಿತಿಗೆ ಕೆಲಸ ಮಾಡುತ್ತಿರುವವರು ಎಂಬ ಅರಿವಿರಬೇಕು. ರೈತರಿಗೆ ಭೂಮಿ ಬೀಟ್ ಕಾರ್ಯಕ್ರಮ ಸರ್ಕಾರ ಜಾರಿಗೆ ತಂದಿದೆ. ವಿದ್ಯಾರ್ಥಿದೆಸೆಯಲ್ಲಿ ವ್ಯವಸಾಯ ಕೈಗೊಂಡ ಸಂದರ್ಭದಲ್ಲಿ ಪಕ್ಕದ ರೈತನೊಬ್ಬ ನಮ್ಮ ಜಮೀನನ್ನು ಅತಿಕ್ರಮಣ ಮಾಡಿದ್ದರು. ಈ ಬಗ್ಗೆ ಕೊನೆಗೆ ಪಂಚಾಯತಿ ನಡೆಸಿದ್ದರು. ಜಮೀನುಗಳ ಅತಿಕ್ರಮಣದ ಇಂತಹ ಸಮಸ್ಯೆಗಳನ್ನು ನಿವಾರಿಸಲು ಭೂಮಿ ಬೀಟ್ ಕಾರ್ಯಕ್ರಮ ಅನುಕೂಲ ಕಲ್ಪಿಸಿದೆ ಎಂದು ಹೇಳಿದರು.

ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ. ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ತಿಳಿಸಿದರು.

ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ನೋಡಿಕೊಳ್ಳುತ್ತಿದ್ದರು. ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು. ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ. 1978 ರಲ್ಲಿ ತಾಲ್ಲೂಕು ಮಂಡಳಿ ಚುನಾವಣೆಗೆ ನಿಂತಾಗ ನನ್ನ ತಂದೆ ಶಾನುಬೋಗರ ಬಳಿ ನನ್ನನ್ನು ಚುನಾವಣೆಗೆ ನಿಲ್ಲಿಸಬೇಕೋ ಬೇಡವೋ ಎಂದು ಕೇಳಿ ನಿಲ್ಲಬಾರದು ಎಂದು ಹಠ ಮಾಡಿದ್ದರು, ನಂತರ ನಾನು ಅವರ ಮಾತು ಕೇಳದೆ ಸ್ಪರ್ಧಿಸಿ ಗೆದ್ದಿದ್ದೆ. ಚುನಾವಣೆಗೆ ಆಗ ₹3,500 ಮಾತ್ರ ವೆಚ್ಚವಾಗಿತ್ತು ಎಂದರು.

Ramesh Babu

Journalist

Recent Posts

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

17 minutes ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

1 hour ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

6 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

12 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago