ಗ್ರಾ.ಪಂ ಮಟ್ಟದಲ್ಲಿಯೇ ಜನ ಸ್ವಂದನಾ ಕಾರ್ಯಕ್ರಮ: ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಕ್ರಮ: ಕೊತ್ತೂರು ಮಂಜುನಾಥ್

ಕೋಲಾರ: ಗ್ರಾಮೀಣ ಪ್ರದೇಶದ ಜನರು ಸಮಸ್ಯೆಗಳನ್ನು ಹೊತ್ತು ತಾಲೂಕು ಕೇಂದ್ರಕ್ಕೆ ಬರಲು ಕಷ್ಟವಾಗಿದ್ದು, ಈ ತಿಂಗಳಲ್ಲೇ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜನ ಸ್ವಂದನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಾ ಇದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ ವತಿಯಿಂದ ತಾಲೂಕು ಮಟ್ಟದ ಜನ ಸ್ವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾರದಲ್ಲಿ ಕನಿಷ್ಠ ಎರಡು ದಿನಗಳ ಕಾಲ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿಯೇ ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು, ಪಿಡಿಒ, ಕಾರ್ಯದರ್ಶಿ ಒಳಗೊಂಡಂತೆ ದಿನಕ್ಕೆ ನಾಲ್ಕು ಪಂಚಾಯತಿಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಜನಕ್ಕೆ ಒಳ್ಳೆಯ ಕೆಲಸಗಳನ್ನು ಮಾಡಿಕೊಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಮುಖವಾಗಿ ಕಂದಾಯ ಸೇರಿದಂತೆ ಇತರೆ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನ ಸ್ವಂದನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅವುಗಳಲ್ಲಿ ಸುಮಾರು 750 ಕ್ಕೂ ಹೆಚ್ಚು ಸಮಸ್ಯೆಗಳಿಗೆ ಪರಿಹಾರವು ನೀಡಲಾಗಿದೆ. ಯಾವ ಇಲಾಖೆಯಿಂದ ಸಮಸ್ಯೆಯಾಗಿದೆ ಎಂಬುದರ ಆಧಾರದಲ್ಲಿ ಅ ಇಲಾಖೆಗೆ ಅರ್ಜಿಯನ್ನು ವರ್ಗಾವಣೆ ಮಾಡಿ ಸಮಸ್ಯೆ ಇತ್ಯರ್ಥ ಪಡಿಸಲಾಗುತ್ತದೆ ಎಂದರು.

ಕಾಂಗ್ರೆಸ್ ಸರಕಾರ ಬಂದ ನಂತರ ರಾಜ್ಯದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಸೀಮಿತವಾಗಿದೆ ಎಂದು ನಮ್ಮ ವಿರೋಧಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದರಾಮಯ್ಯ ನವರು ರಾಜ್ಯದಲ್ಲಿ ಸುಮಾರು 14 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಅಂತಹವರಿಗೆ ರಾಜ್ಯವನ್ನು ಹೇಗೆ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು, ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬಹುದು ಎಂಬುದು ಗೊತ್ತಿದೆ. ವಿರೋಧಿಗಳ ಮಾತುಗಳಿಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಹಳ್ಳಿಗಳಿಂದ ನೇರವಾಗಿ ಪಂಚಾಯತಿ ಕೇಂದ್ರಗಳಿಗೆ ರಸ್ತೆಗಳು ನಿರ್ಮಾಣ, ಅರೋಗ್ಯ ಇನ್ನಿತರ ಕಾರ್ಯಕ್ರಮಗಳಿಗೆ ಬುಧವಾರವೇ 25 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಕೋಲಾರ ನಗರದ ಹೊರವಲಯದ ವರ್ತುಲ ರಸ್ತೆ ಸೇರಿದಂತೆ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರಕಾರವು ಬಂದ ನಂತರ ಗ್ಯಾರಂಟಿ ಯೋಜನೆಗಳ ಜಾರಿಯ ಜೊತೆಗೆ ಅಭಿವೃದ್ಧಿ ಕೆಲಸಗಳೊಂದಿಗೆ ಜನರ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ಸರಕಾರದ ಮೇಲಿದೆ. ತಳ ಮಟ್ಟದ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ನೀಡಲು ಜನ ಸ್ವಂದನಾ ಕಾರ್ಯಕ್ರಗಳು ಸಹಕಾರಿಯಾಗಲಿವೆ. ಯಾವುದೇ ಕಚೇರಿಗಳಲ್ಲಿ ಆಗಲಿ ಮಧ್ಯವರ್ತಿಗಳನ್ನು ದೂರವಿಟ್ಟಾಗ ಮಾತ್ರವೇ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಅವಾಗ ಮಾತ್ರವೇ ರಾಮರಾಜ್ಯವಾಗಿರಲು ಸಾಧ್ಯ ಎಂದರು

ಈ ಸಂದರ್ಭದಲ್ಲಿ ಸುಮಾರು 83 ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲೂಕಿನ ಸಾರ್ವಜನಿಕರು ಅರ್ಜಿಗಳನ್ನು ನೀಡಿದರು. ಕೆಲವರಿಗೆ ಸಾಂಕೇತಿಕವಾಗಿ ಹಕ್ಕು ಪತ್ರ ಹಾಗೂ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಿಸಿದರು.

ವೇದಿಕೆಯಲ್ಲಿ ಎ.ಸಿ ವೆಂಕಟಲಕ್ಷ್ಮೀ, ತಹಶಿಲ್ದಾರ್ ಹರ್ಷವರ್ಧನ್, ತಾಪಂ ಇಒ ಮುನಿಯಪ್ಪ, ನಗರಸಭೆ ಆಯುಕ್ತ ಶಿವಾನಂದ್, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

Leave a Reply

Your email address will not be published. Required fields are marked *