Categories: ಕೋಲಾರ

ಜಲಾವೃತಗೊಂಡ ಜಮೀನು ವೀಕ್ಷಿಸಿದ ಸಂಸದ, ಶಾಸಕ: ಕೆ.ಸಿ.ವ್ಯಾಲಿ ಕಾಲುವೆ ದುರಸ್ತಿಗೆ ಒತ್ತಾಯ

ಕೋಲಾರ: ಕೆ.ಸಿ.ವ್ಯಾಲಿ ಕಾಲುವೆಯಲ್ಲಿ ಹರಿಯುತ್ತಿರುವ ನೀರು ಅವೈಜ್ಞಾನಿಕ ಕಾಮಗಾರಿಯಿಂದ ಉಕ್ಕಿ ಹರಿದು ಬೆಳೆಗಳು ನಾಶವಾಗಿದ್ದು ಕೂಡಲೇ ‌ಕಾಲುವೆ ನವೀಕರಣಗೊಳಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಒತ್ತಾಯಿಸಿದರು.

ತಾಲ್ಲೂಕಿನ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಡುವನಹಳ್ಳಿ ಗ್ರಾಮದಲ್ಲಿ‌ ಜಲಾವೃತವಾಗಿರುವ ಜಮೀನುಗಳನ್ನು ಭಾನುವಾರ ವೀಕ್ಷಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು‌.

ಎಸ್.ಅಗ್ರಹಾರ, ಮುದುವಾಡಿ ಕೆರೆಯಿಂದ ಮಣಿಘಟ್ಟವರೆಗೆ ಕೆ.ಸಿ.ವ್ಯಾಲಿ ನೀರು ಹರಿಯುವ ಕಾಲುವೆಯನ್ನು ನವೀಕರಣ‌ ಮಾಡಬೇಕು‌. ಕಾಲುವೆಗೆ 8 ಅಡಿ ಎತ್ತರದ‌ ತಡೆಗೋಡೆ ಹಾಗೂ ನೀರು ಸರಾಗವಾಗಿ ಹರಿಯಲು 30 ಅಡಿ ಅಗಲ ಮಾಡಬೇಕು ಎಂದು ಹೇಳಿದರು.

ಸಣ್ಣ ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಹೇಳಿದ್ದಾರೆ. ಶೀಘ್ರದಲ್ಲಿಯೇ ರೈತರಿಗೆ‌ ಆಗಿರುವ ಹಾನಿಯನ್ನು ಸರಿಪಡಿಸಿಕೊಡುತ್ತೇವೆ ಎಂದು ಭರವಸೆ‌ ನೀಡಿದರು‌.

ಶ್ರೀನಿವಾಸಪುರ‌ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ಅನುದಾನದಲ್ಲಿ ತಾರತಮ್ಯ ಮಾಡಿದೆ. ಕಾಂಗ್ರೆಸ್ ಶಾಸಕರಿಗೆ ₹ 50 ಕೋಟಿ ಅನುದಾನ ₹ 25 ಕೊಡುವಿದಾಗಿ ಹೇಳಿದ್ದಾರೆ. ಹೀಗಾಗಿಯೇ, ನ್ಯಾಯಾಲಯ‌ ಮೊರೆ ಹೋಗಿದ್ದೇವೆ. ಕ್ಷೇತ್ರಕ್ಕೆ ₹ 100 ಕೋಟಿ ಬರಬೇಕು. ಈವರೆಗೆ ಒಂದೂ ಮನೆಯನ್ನೂ ಕೊಟ್ಟಿಲ್ಲ. ಅನುದಾನ ಬಿಡುಗಡೆ ಆದರೆ ಪ್ರತಿ ಗ್ರಾಮಕ್ಕೆ ಸೌಕರ್ಯ ಕಲ್ಪಿಸಲಾಗುವುದು. ನಾನು ಯಾವತ್ತೂ‌ ನಾಯಕ ಅಲ್ಲ; ಸೇವಕ‌ ಎಂದರು.

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ, ಕೆ.ಸಿ.ವ್ಯಾಲಿ ನೀರಿನಿಂದ ಹಾನಿಗೆ ಒಳಗಾಗಿರುವ ಜಮೀನು ಪರಿಶೀಲನೆ ಮಾಡಿದ್ದೇವೆ. ಕೆ.ಸಿ ವ್ಯಾಲಿ ನೀರು‌ ಹರಿಯಲು ಕಾಲುವೆ ಸರಿಪಡಿಸಬೇಕಿದೆ.‌ ಕಾಲುವೆ ಹದಗೆಟ್ಟಿರುವುದರ ಜೊತೆಗೆ ಮಳೆ ಬಂದು ಉಕ್ಕಿ ಜಮೀನಿಗೆ ಹರಿದಿದೆ. ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆ ಕಾಮಗಾರಿಯಲ್ಲಿ ಎಡವಟ್ಟಾಗಿದೆ ಎಂದು ಹೇಳಿದರು.

ಇದೇ 13ಕ್ಕೆ ದಿಶಾ ಸಭೆ ಇದೆ‌‌. ಅಷ್ಟರೊಳಗೆ ಅಧಿಕಾರಿಗಳು ಪರಿಶೀಲನೆ ಮಾಡಿ ವರದಿ ಕೊಡಬೇಕು. ವೆಂಕಟಶಿವಾರೆಡ್ಡಿ ಈ ವಿಚಾರದಲ್ಲಿ ಗಭೀರವಾಗಿ ಕೆಲಸ‌ ಮಾಡುತ್ತಿದ್ದಾರೆ ಈ ಭಾಗದಲ್ಲಿ ಹದೆಗೆಟ್ಟಿರುವ ರಸ್ತೆಗಳನ್ನು ಮೂರು ತಿಂಗಳಲ್ಲಿ ಸರಿಪಡಿಸಲಾಗುವುದು ಎಂದು ಭರವಸೆ ‌ನೀಡಿದರು.

ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಕೆ.ಸಿ.ವ್ಯಾಲಿಯಿಂದ ರೈತರ ಜಮೀನಿಗೆ‌ ಆಗಿರುವ ಹಾನಿಯನ್ನು ನೇರವಾಗಿ ಪರಿಶೀಲನೆ ನಡೆಸಲಾಗಿದೆ. ನೀರು ಹರಿಸುವ ಮುನ್ನ ಸಾಧಕ ಬಾಧಕ ಬಗ್ಗೆ ಗಮನ ಹರಿಸಬೇಕಿತ್ತು. ಸರಿಯಾದ ಕಾಲುವೆ ಇಲ್ಲದೆ ಹರಿಸಿ ರೈತರಿಗೆ ಸಮಸ್ಯೆ ತಂದೊಡ್ಡಿದ್ದಾರೆ. ನೀರು ರೈತರ ಜಮೀನುಗಳಿಗೆ‌ ನುಗ್ಗಿ ಅಪಾರ ನಷ್ಟಕ್ಕೆ ಕಾರಣವಾಗಿದೆ ಎಂದರು.

ಕೆ.ಸಿ ವ್ಯಾಲಿಗೆ ವಿರೋಧ ಇಲ್ಲ. ಆದರೆ,‌ ಮೂರನೇ ಹಂತದ ಶುದ್ಧೀಕರಣ ಮಾಡಿ ಹರಿಸಬೇಕಿತ್ತು. ಶುದ್ಧೀಕರಣ ‌ಮಾಡದೆ ಹರಿಸಿ ಸಮಸ್ಯೆ ಉಂಟಾಗಿದೆ. ಕಲುಷಿತ ನೀರು ಸೇವಿಸಿ ಜನ,‌ ಜಾನುವಾರು,‌‌ ಪಕ್ಷಿ,‌ ಕೀಟಗಳಿಗೆ ಸಮಸ್ಯೆ ಉಂಟಾಗುತ್ತಿದೆ.‌ ರೋಗಗಳು ಬರುತ್ತಿವೆ. ಬೆಳೆ‌ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಮೂರನೇ ಹಂತದ ಶುದ್ಧೀಕರಣ ಮಾಡಬೇಕು. ಕಾಲುವೆ‌ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಮಳೆ ಬಂದಿದ್ದರಿಂದ ಬಹುತೇಕ ಕೆರೆಗಳು ಉಕ್ಕಿ ಹರಿಯುತ್ತಿವೆ‌. ಯರಗೋಳ್ ಜಲಾಶಯಕ್ಕೆ ಕೆ.ಸಿ ವ್ಯಾಲಿ ನೀರು ಹರಿಯುತ್ತಿದೆ‌. ಆ ನೀರನ್ನು ಜನರು ಕುಡಿಯುತ್ತಿದ್ದು ಏನಾದರೂ ಸಮಸ್ಯೆ‌ ಉಂಟಾದರೆ ಯಾರು ಗತಿ? ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದರು.

ಶಾಸಕರು ‌ನ್ಯಾಯಾಲಯಕ್ಕೆ‌ ಹೋಗಿ ಅನುದಾನ ಪಡೆಯುವಂಥ ಪರಿಸ್ಥಿತಿಯನ್ನು ಈ ಕಾಂಗ್ರೆಸ್ ಸರ್ಕಾರ ತಂದೊಡ್ಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಶೇಷಾಪುರ ಗೋಪಾಲ್ ಮಾತನಾಡಿ, ಅವೈಜ್ಞಾನಿಕವಾಗಿ ಕಾಲುವೆ ನಿರ್ಮಿಸಿ ನಾವೇ ಸೃಷ್ಟಿ ಮಾಡಿಕೊಂಡ ಸಮಸ್ಯೆ ಇದು. ಜವಾಬ್ದಾರಿಯಿಂದ ಕೆಲಸ ಮಾಡಿದ್ದರೆ‌ ಅನಾಹುತ ಆಗುತ್ತಿರಲಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳಷ್ಟೇ ಸಾರ್ವಜನಿಕರು ಜವಾಬ್ದಾರರು. ಕೆಲವರ ಸ್ವಾರ್ಥಕ್ಕಾಗಿ ಯೋಜನೆ ಮೂಲ ಸ್ವರೂಪ ಬದಲಾಯಿಸಿದ್ದೇ ಕಾರಣ‌. ಮುದುವಾಡಿ ಕೆರೆಯಿಂದ ನೂರು ವರ್ಷಗಳಿಂದ ಕೆರೆ ತುಂಬಿ‌ ಹರಿದಿದೆ. ಅವೈಜ್ಞಾನಿಕವಾಗಿ ಚೆಕ್ ಡ್ಯಾಮ್ ನಿರ್ಮಿಸಲಾಗಿದೆ . ಕಮಿಷನ್ ಗಾಗಿ ಮನಬದಂತೆ ಕಾಮಗಾರಿ ನಡೆಸಲಾಗಿದೆ ಎಂದು ದೂರಿದರು.

ಈ ಸಂಬಂಧ‌ ಶಾಸಕ, ಸಂಸದರು ಸಣ್ಣ‌ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ಮಾತನಾಡಿದ್ದು, ಸಮಸ್ಯೆ ಸರಿ ಹೋಗುವ ವಿಶ್ವಾಸವಿದೆ ಎಂದು ‌ಹೇಳಿದರು.

ಕಾರ್ಯಕ್ರಮ ಆಯೋಜಕ ಶ್ರೀನಿವಾಸ್ ಮಾತನಾಡಿ, ಕೆ.ಸಿ.ವ್ಯಾಲಿ ನೀರು‌ ಉಕ್ಕಿ ಹರಿದು ರೈತರಿಗೆ ಆಗಿರುವ ಸಮಸ್ಯೆ ವಿವರಿಸಿದರು ಕೆ.ಸಿ.ವ್ಯಾಲಿ ಹೆಸರಲ್ಲಿ ರಮೇಶ್ ಕುಮಾರ್ ವಿನಾಕಾರಣ ರಾಜಕಾರಣ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಶಕ್ತಿ ಏನೆಂಬುದನ್ನು ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ತೋರಿಸುತ್ತೇವೆ.‌ ಮುಂದೆ ಸಮ್ಮಿಶ್ರ ಸರ್ಕಾರ ‌ಬರಲಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ, ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಕಾರ್ಯಾಧ್ಯಕ್ಷ ಜನಪನಹಳ್ಳಿ ಆನಂದ್, ನಗರಸಭೆ ಸದಸ್ಯ ರಾಕೇಶ್, ಮುಖಂಡರಾದ ದಿಂಬ ನಾಗರಾಜಗೌಡ, ವಿಶ್ವನಾಥ್ ಗೌಡ, ರಾಮಚಂದ್ರೇಗೌಡ, ಕುಮಾರ್, ಶ್ರೀನಿವಾಸ್, ತಾ.ಪಂ ಮಾಜಿ ಅಧ್ಯಕ್ಷ ಬಂಡಪಲ್ಲಿ ಕೃಷ್ಣಾರೆಡ್ಡಿ, ಪ್ರಸನ್ನ,‌ ವೆಂಕಟೇಶ್ ಗೌಡ, ಕೇಶವ, ವೆಂಕಟೇಶ್, ರಘುನಾಥ್, ಮನೋಹರ್, ಸೋಮಣ್ಣ, ಸಂತೋಷ್ ಇದ್ದರು.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

3 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

6 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

11 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

11 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 day ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 day ago