ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯೂ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎನ್ನುವುದು ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.
ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸುವಂತೆ ಅವರು ಹಿಂದಿನಿಂದಲೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದರು.
ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದರು.
ಈ ರೀತಿ 2015 ರಲ್ಲಿಯೇ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ 192 ಕೋಟಿ ವೆಚ್ಚ ಮಾಡಿ 1. 33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಿದೆ. ಇದರಿಂದ ಪ್ರೇರಿತವಾಗಿ ಮತ್ತು ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಈಗ ಸಮೀಕ್ಷೆಗೆ ಮುಂದಾಗಿದೆ ಎಂದು ಹೇಳಿದರು.
ಪ್ರಸಕ್ತ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ವರದಿಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಮೀಸಲಾತಿ ಏರಿಕೆಯಾಗಬೇಕಾದರೆ ಸಂವಿಧಾನಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಎಷ್ಟು ಪ್ರಮಾಣದಲ್ಲಿ ಏರಿಕೆ ಮಾಡಬೇಕೆಂದು ತಿಳಿಸಬಹುದು. ಆಗ ಸಂವಿಧಾನ ತಿದ್ದುಪಡಿ ಮಾಡಿ ಏರಿಕೆ ಮಾಡಬಹುದು ಎಂದರು.
ಮುಂದಿನ ಸಚಿವ ಸಂಪುಟದಲ್ಲಿ ಅಭಿಪ್ರಾಯ ಪಡೆದು ಚರ್ಚೆ ಮಾಡಿ, ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಬಜೆಟ್ ರೂಪಿಸುವಾಗ ಇದನ್ನು ಆಧಾರವಾಗಿಟ್ಟುಕೊಂಡು ಅನುದಾನ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು.
ಕೇವಲ ಜಾತಿಗಣತಿಯ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74 ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ ಎಂಬುದರ ಅರಿವಾಗುತ್ತದೆ. ಕೂಡಲೇ ಯಾವ ದಿನಾಂಕದಿಂದ ಜನಗಣತಿ, ಜಾತಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿ ಗಣತಿ ಮಾಡುವಾಗ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ ಎಂದರು.
ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದಾಗ ಕೇಂದ್ರ ಸರ್ಕಾರ ಅದನ್ನು ವಿರೋಧಿಸಿ, ಟೀಕಿಸಿತ್ತು. ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ಅವರೂ ಅಳವಡಿಸಿಕೊಳ್ಳುತ್ತಿದ್ದಾರೆ. ಜಾತಿ ಗಣತಿ ವಿಚಾರದಲ್ಲಿ ಕೂಡ ಹಾಗೆಯೇ ಮಾಡಿದ್ದಾರೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ 5.90 ಕೋಟಿ ಜನರನ್ನು ಒಳಪಡಿಸಲಾಗಿದೆ. ಶೇ 93% ಜನಸಂಖ್ಯೆ ಸಮೀಕ್ಷೆಗೆ ಒಳಪಟ್ಟಿದ್ದು, 100% ಸಮೀಕ್ಷೆ ನಡೆಸಲು ಯಾವ ಸರ್ಕಾರಗಳಿಂದಲೂ ಸಾಧ್ಯವಿಲ್ಲ ಎಂದರು.
ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗಶೆಟ್ಟಿ ಅವರು ಹಿಂದುಳಿದ ವರ್ಗಗಳ ಸಚಿವರಾಗಿದ್ದಾಗ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ವರದಿ ಪಡೆಯಲು ದಿನಾಂಕ ನಿಗದಿ ಮಾಡಿದಾಗ ಅವರನ್ನು ಅಮಾನತು ಮಾಡುವುದಾಗಿ ಹೆದರಿಸಿದ್ದ ಕುಮಾರಸ್ವಾಮಿ ಅವರು, ಕೊನೆಗೂ ವರದಿಯನ್ನು ಪಡೆಯಲಿಲ್ಲ. ಈಗ ನೋಡಿದರೆ ಕೇಂದ್ರದ ನಿರ್ಧಾರವನ್ನು ಹೊಗಳುತ್ತಿದ್ದಾರೆ. ಇದೆಂಥಾ ಇಬ್ಬದಿತನ? ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಸಮೀಕ್ಷೆಯ ವರದಿಯನ್ನು ಪಡೆಯಲಿಲ್ಲ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ದೊರಕಿಸಲು, ಸಮಾನತೆ ತರಲು ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ, ಸಾಮಾಜಿಕವಾಗಿ ಪಾಲಿರಬೇಕು ಎಂಬ ಉದ್ದೇಶದಿಂದ ಸಮೀಕ್ಷೆ ನಡೆಸಲಾಗಿತ್ತು ಎಂದು ಹೇಳಿದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…