ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಲಿ- ಸಿಎಂ ಸಿದ್ದರಾಮಯ್ಯ

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ಎಂದು ತಿಳಿಸಿದ್ದಾರೆ.

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ ಎಂದು ಹೇಳಿದರು.

ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು ತಿಳಿಸಿದರು.

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ ಎಂದರು.

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ.

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನುಬಲವಾಗಿ ನಂಬಿದವನು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ದಿ ಹೇಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಹೇಳಿದ್ದಾರೆ.

ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

4 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

10 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

11 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

23 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

23 hours ago