
ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿ ಆಗಿದ್ದು, ಯುವ ಸಮೂಹಕ್ಕೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಹೇಳಿದರು.
ದೇವನಹಳ್ಳಿ ಟೌನ್ ನ ಬೊಮ್ಮವಾರ ಗ್ರಾಮದಲ್ಲಿರುವ ಗಾಂಧೀ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ನಿಯಂತ್ರಣ ಕುರಿತು ಅರಿವು, ಮಾಸ್ಟರ್ ತರಬೇತಿದಾರರಿಗೆ ತರಬೇತಿ ಕಾರ್ಯಾಗಾರನ್ನು ಉದ್ದೇಶಿಸಿ ಅವರು ಮಾತನಾಡಿದರು,
ಮಾದಕ ವ್ಯಸನವು ಸಮಾಜದ ಒಂದು ಪಿಡುಗಾಗಿ ಪರಿಣಮಿಸಿದೆ. ಪೋಷಕರು ತಮ್ಮ ಮಕ್ಕಳ ಚಲನವಲನ ಬಗ್ಗೆ ನಿತ್ಯ ಮತ್ತು ಗಮನಹರಿಸಬೇಕು, ಶಿಕ್ಷಕರು ಕೂಡ ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸಬೇಕು. ಸಾಕಷ್ಟು ಯುವಕ ಯುವತಿಯರು ಹೆಚ್ಚಾಗಿ ಮಾದಕ ವ್ಯಸನಿಗಳಾಗುತ್ತಾರೆ. ಹಾಗಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವ್ಯಸನಗಳಿಂದಾಗುವ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ಮೂಡಿಸುವುದು, ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ನೀವು ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತಹ ಕೆಲಸ ಮಾಡಿ, ಮಾದಕ ವ್ಯಸನ ಮುಕ್ತ ಸಮಾಜಕ್ಕೆ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಬೇಕು ಎಂದರು.

ಎಸ್ಪಿ ಸಿಕೆ ಬಾಬಾ ಅವರು ಮಾತನಾಡಿ ತರಬೇತಿಗೆ ಶಿಕ್ಷಕರನ್ನು ಆಯ್ಕೆ ಮಾಡಿರುವ ಉದ್ದೇಶ ಶಿಕ್ಷಕರು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು. ಯುವ ಸಮೂಹವನ್ನು ಮಾದಕ ವ್ಯಸನದಿಂದ ದೂರ ಇಡಬೇಕು. ಮಾದಕ ವಸ್ತುಗಳ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಇದು ಒಂದು ಯುದ್ಧ, ಪ್ರತಿಯೊಬ್ಬ ವಿದ್ಯಾರ್ಥಿಗೆ ಅರಿವು ತಲುಪಬೇಕು. ಡ್ರಗ್ಸ್ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಉಪನ್ಯಾಸಕರಿಂದ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಟ, ಬಳಕೆ ಕುರಿತು ಶಾಲಾ ಕಾಲೇಜಿನ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಲಾಗಿದೆ. ಈ ಸೂಪರ್ವೈಸರ್ ಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜುಗಳಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಿದ್ದು ಮಾದಕ ವಸ್ತುಗಳ ನಿಯಂತ್ರಣಕ್ಕೆ ಸಹಕಾರಿ ಆಗಲಿದೆ.

ಕಾರ್ಯಾಗಾರದಲ್ಲಿ ಅಬಕಾರಿ ಇಲಾಖೆ ಜಿಲ್ಲಾಧಿಕಾರಿ ರವೀಂದ್ರ, ಪೊಲೀಸ್ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಸೈಯದ್ ತಬ್ಸಿವುಲ್ಲಾ, ದೊಡ್ಡಬಳ್ಳಾಪುರ ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ಎನ್ಸಿಬಿ ಸೂಪರಿಂಟೆಂಡೆಂಟ್ ರತನ್, ಆರೋಗ್ಯ ಇಲಾಖೆಯ ಮನೋವೈದ್ಯರಾದ ಡಾ.ಗರೀಶ್ ಕುಮಾರ್, ಇಶಾ ವಾಲೆಂಟಿರಿ ಮನು, ಡಾ ಪ್ರಮೋದ್, ಸೇರಿದಂತೆ ಶಿಕ್ಷಕರು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.