
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ ಅಂಬುಲೆನ್ಸ್ಗಳ ಸುಲಿಗೆ ಹಾಗೂ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕುವುದು ಸೇರಿದಂತೆ ಆಸ್ಪತ್ರೆಯ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹಮದ್ ಷರೀಪ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದ ಹೆರಿಗೆ, ಅಪಘಾತ ಹಾಗೂ ತುರ್ತು ಆರೋಗ್ಯ ಸಮಸ್ಯೆಗಳಿಗೆ ಜಿಲ್ಲಾಸ್ಪತ್ರೆಗೆ ಬರುವ ಬಡವರಿಗೆ ಕನಿಷ್ಠ ಪ್ರಾಥಮಿಕ ಚಿಕಿತ್ಸೆ ನೀಡದೆ ವಿವಿಧ ಕಾರಣಗಳನ್ನು ನೀಡಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದರು.
ಆಸ್ಪತ್ರೆಯ ಸುತ್ತಮುತ್ತ ಖಾಸಗಿ ಅಂಬುಲೆನ್ಸ್ಗಳು ಹಾಗೂ ದಲ್ಲಾಳಿಗಳ ಹಾವಳಿ ಹೆಚ್ಚಿದೆ. ತುರ್ತು ಸಂದರ್ಭದಲ್ಲಿ ಸರ್ಕಾರಿ 108 ಅಂಬುಲೆನ್ಸ್ ಸೇವೆ ಸಮರ್ಪಕವಾಗಿ ದೊರೆಯದ ಕಾರಣ ಬಡ ರೋಗಿಗಳು ದುಬಾರಿ ಶುಲ್ಕ ಪಾವತಿಸುವಂತಾಗಿದೆ. ಎಂಆರ್ಐ, ಸಿಟಿ ಸ್ಕ್ಯಾನ್ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ತ್ವರಿತವಾಗಿ ಮಾಡಿಸಿಕೊಡುವುದಾಗಿ ಹೇಳಿ ದಲ್ಲಾಳಿಗಳು ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿರುವ ದೂರುಗಳಿವೆ. ಹೀಗಾಗಿ ಆಸ್ಪತ್ರೆ ಆವರಣದಲ್ಲಿ ವಿಶೇಷ ತಂಡ ರಚಿಸಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ರೋಗಿಗಳಿಗೆ ಪೂರೈಸುವ ಆಹಾರದ ಗುಣಮಟ್ಟದ ಬಗ್ಗೆಯೂ ಪ್ರಶ್ನಿಸಿದ ಅವರು, ಲಕ್ಷಾಂತರ ರೂಪಾಯಿ ಬಿಲ್ ಪಡೆಯುವ ಗುತ್ತಿಗೆದಾರರು ಕಳಪೆ ಆಹಾರ ಪೂರೈಸುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಕಳಪೆ ಆಹಾರ ಪೂರೈಸುವ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದರು.
ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ, ಕೇಂದ್ರಸ್ಥಾನದಲ್ಲಿ ವಾಸ, ಗುರುತಿನ ಚೀಟಿ ಮತ್ತು ಸಮವಸ್ತ್ರ ಧರಿಸುವಿಕೆ ಸೇರಿದಂತೆ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ ಕೈಗೊಳ್ಳಬೇಕು. ಗುತ್ತಿಗೆ ಸಿಬ್ಬಂದಿಗೆ ವೇತನ ವಂಚಿಸುವ ಗುತ್ತಿಗೆದಾರರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಯುವ ರೈತ ಮುಖಂಡ ಯಾರಂಘಟ್ಟ ಗಿರೀಶ್ ಮಾತನಾಡಿ, ಜಿಲ್ಲಾಸ್ಪತ್ರೆಯ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿರುವ ಖಾಸಗಿ ಕ್ಲಿನಿಕ್, ಲ್ಯಾಬ್ ಮತ್ತು ರಕ್ತ ಪರೀಕ್ಷಾ ಕೇಂದ್ರಗಳ ಕಾರ್ಯವೈಖರಿ ಪರಿಶೀಲಿಸಬೇಕು. ಆಸ್ಪತ್ರೆ ಆವರಣದಲ್ಲಿರುವ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದರು.
ಸರ್ಕಾರದಿಂದ ಪೂರೈಕೆಯಾಗುವ ಔಷಧಿಗಳ ವಿತರಣೆ ಮತ್ತು ಬಳಕೆಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಔಷಧಿಗಳನ್ನು ಅಕ್ರಮವಾಗಿ ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸಬೇಕು. ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ತರಬೇತಿ, ರೋಗಿಗಳ ಆರೈಕೆ, ರಕ್ತ ಪರೀಕ್ಷೆ ಹಾಗೂ ಔಷಧಿ ವಿತರಣಾ ವ್ಯವಸ್ಥೆಯ ಮೇಲ್ವಿಚಾರಣೆಯನ್ನು ಕಟ್ಟುನಿಟ್ಟುಗೊಳಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹಮದ್ ಷರೀಪ್, ಆಸ್ಪತ್ರೆಯಲ್ಲಿ ಕೆಲವು ಅವ್ಯವಸ್ಥೆಗಳಿರುವುದು ಗಮನಕ್ಕೆ ಬಂದಿದೆ. ಊಟದ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಸಿಬ್ಬಂದಿ ಕೊರತೆ ಇರುವ ಕುರಿತು ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಗಸಂದ್ರ ತಿಮ್ಮಣ್ಣ, ಮುದುವಾಡಿ ಚಂದ್ರಪ್ಪ, ಸುಪ್ರಿಮ್ ಚಲ, ಗಣೇಶ್, ಯಲ್ಲಣ್ಣ, ಅಪ್ಪೋಜಿರಾವ್, ಸಂತೋಷ್, ವಕ್ಕಲೇರಿ ಹುನುಮಯ್ಯ, ಶೈಲಜ, ರತ್ನಮ್ಮ, ವೆಂಕಟಮ್ಮ, ಮುನಿರತ್ನಮ್ಮ, ಗೌರಮ್ಮ ಇದ್ದರು.