ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಸ್ಮಶಾನ ಭೂಮಿ ಸಮಸ್ಯೆ ಇದೆ- ಇದಕ್ಕೆ ತಹಶಿಲ್ದಾರರು ಸೂಕ್ತ ಕ್ರಮ ಕೈಗೊಳ್ಳಬೇಕು- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ

ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅಭಿವೃದ್ಧಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ 2023- 24 ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳು (ಕೆ.ಡಿ.ಪಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿವೃದ್ದಿಪರ ಕಾರ್ಯಕ್ರಮಗಳಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಪ್ರತಿ ಇಲಾಖೆಯಡಿ ಬರುವ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಹಳ್ಳಿ ಹಳ್ಳಿಗೂ ಜಾಗೃತಿ ಮೂಡಿಸುವ ಮೂಲಕ ಮಾಹಿತಿ ನೀಡಬೇಕು. ಇದರಿಂದ ಸಾರ್ವಜನಿಕರು ಯೋಜನೆ ಬಗ್ಗೆ ತಿಳಿದು ಸೌಲಭ್ಯ ಪಡೆಯುವಂತೆ ಆಗುತ್ತದೆ. ಜನಸಾಮಾನ್ಯರಿಗೆ ಸೌಲಭ್ಯಗಳು ತಲುಪಿಸಲು ಪಾರದರ್ಶಕವಾಗಿ, ಜವಾಬ್ದಾರಿಯುತವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಸ್ಮಶಾನ ಭೂಮಿ ಸಮಸ್ಯೆ, ಸ್ಮಶಾನ ದುರಸ್ತಿ ಕಾರ್ಯ, ಸ್ಮಶಾನಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದು, ಸ್ಮಶಾನ ಜಾಗವನ್ನು ಸೂಕ್ತ ರೀತಿಯಲ್ಲಿ ಬೇಲಿ ನಿರ್ಮಿಸಿ ಹದ್ದುಬಸ್ತು ಮಾಡಬೇಕು. ಸ್ಮಶಾನದ ಅವಶ್ಯಕತೆ ಇರುವ ಭಾಗದಲ್ಲಿ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ ಅವಶ್ಯವಿದ್ದಲ್ಲಿ ಖಾಸಗಿ ಜಮೀನಿಗೆ ಪ್ರಸ್ತಾವನೆ ಸಲ್ಲಿಸಿ ಎಂದರು. ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಪ್ರತಿ ತಾಲೂಕಿನಲ್ಲಿ ಒಂದು ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಲು ಸಲಹೆ ನೀಡಿದರು.

*ಆಶ್ರಯ ಯೋಜನೆ*

ವಸತಿ ಯೋಜನೆಯಡಿ ನಿವೇಶನ ರಹಿತ ಕುಟುಂಬಗಳನ್ನು ಈಗಾಗಲೇ ಗುರುತಿಸಿದ್ದು, ಬಡವರಿಗೆ ನಿವೇಶನ ಹಂಚಲು ಕ್ರಮ ವಹಿಸಲಾಗಿದ್ದು ಈಗಾಗಲೇ ಜಿಲ್ಲೆಯ ಹಲವು ಭಾಗಗಳಲ್ಲಿ ಸುಮಾರು 400 ಎಕರೆ ಸರ್ಕಾರಿ ಭೂಮಿ ನಿವೇಶನಕ್ಕಾಗಿ ಗುರ್ತಿಸಲಾಗಿದೆ. ಶೀಘ್ರವಾಗಿ ರಾಜೀವ್ ಗಾಂಧಿ ಕಾರ್ಪೋರೇಶನ್ ಗೆ ಪ್ರಸ್ತಾವನೆ ಸಲ್ಲಿಸಲು ಕ್ರಮ ವಹಿಸಿ ಎಂದರು.

ಜಿಲ್ಲೆಯಲ್ಲಿ 1,87,000 ಜಾನುವಾರುಗಳಿದೆ. ಪಶುಪಾಲನೆ ಇಲಾಖೆಯಿಂದ ಅಂದಾಜು 60,000 ಮೇವಿನ ಕಿರು ಪೊಟ್ಟಣ ಹಾಗೂ ಕೆ.ಎಂ.ಎಪ್‌ ನಿಂದ 40,000 ಮೇವಿನ ಕಿರು ಪೊಟ್ಟಣಗಳನ್ನು ನೀರಾವರಿ ಹೊಂದಿರುವ ರೈತರಿಗೆ ಉಚಿತವಾಗಿ ವಿತರಿಸಲಾಗಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಹಾಗೂ ಪ್ರತಿ ತಾಲ್ಲೂಕಿಗೂ 25.00 ಲಕ್ಷ ರೂ ಗಳ ಕೊಳವೆ ಬಾವಿ ಕೊರೆಯಲು ಕ್ರಿಯಾ ಯೋಜನೆ ಅನುಮೋದನೆಯಾಗಿದ್ದು ಅಗತ್ಯ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

*ವಸತಿ ಯೋಜನೆ (ಗ್ರಾಮೀಣ)*

2010-11 ಸಾಲಿನಿಂದ 2022-23 ನೇ ಸಾಲಿನ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವಿವಿಧ ವಸತಿ ಯೋಜನೆಗಳ ಅನುಷ್ಟಾನಕ್ಕಾಗಿ ಒಟ್ಟು 35770 ಮನೆಗಳು ಮಂಜೂರಾಗಿದ್ದು, ಇಲ್ಲಿಯವರೆಗೆ 29534 ಮನೆಗಳನ್ನು ಪೂರ್ಣಗೊಳಿಸಿ ಶೇ.82.27 ರಷ್ಟು ಸಾಧನೆ ಮಾಡಲಾಗಿದೆ ಎಂದರು.

*ಕೃಷಿ ಇಲಾಖೆ:*
ಕೃಷಿ ಚಟುವಟಿಕೆಗಳು ಜುಲೈ ತಿಂಗಳಿಂದ ಆಗಸ್ಟ್ ತಿಂಗಳವರೆಗೆ ಹೆಚ್ಚಾಗಿರುತ್ತದೆ. ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಸಲು ಕ್ರಮ ವಹಿಸಿ ಎಂದರು. ಬೆಳೆ ವಿಮೆಗೆ ಮಾಡಿಸಲು ರೈತರಿಗೆ ಜಾಗೃತಿ ಮೂಡಿಸಿ,, ರೈತರು ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ಸುರಕ್ಷಿತ ಬೇಲಿ ನಿರ್ಮಿಸಲು ಅಧಿಕಾರಿಗಳು ರೈತರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಅಧಿಕಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಹೇಳಿದರು.

*ಪೋಡಿಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿ*
ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು. ಸಂಬಂಧಪಟ್ಟ ಅಧಿಕಾರಿಗಳನ್ನು ಒಳಗೊಂಡ ನಾಲ್ಕು ತಾಲೂಕುಗಳಲ್ಲಿ ತ೦ಡಗಳನ್ನು ರಚಿಸಬೇಕು. ಪೂರಕ ದಾಖಲೆಗಳ ಇರುವ ಜಮೀನುಗಳನ್ನು ಮೊದಲು ಸರ್ವೆ ಕಾರ್ಯ ನಡೆಸಿ ಹದ್ದುಬಸ್ತು ಮಾಡಬೇಕು. ಕೆಲವು ಭಾಗಗಳಲ್ಲಿ ಕಡತಗಳು ನಾಪತ್ತೆ ಆಗಿರುವುದರಿಂದ ಹಿನ್ನಡೆ ಆಗುತ್ತಿದೆ. ಕಡತ ಇರುವ ಪ್ರಕರಣಗಳಲ್ಲಿ ಪೋಡಿಮುಕ್ತ ಮಾಡಲು ಆದ್ಯತೆ ಮೇರೆಗೆ ಮಾಡಲಾಗುತ್ತಿದೆ. ಸಾಗುವಳಿ ಚೀಟಿ ಇರುವ ಪ್ರಕರಣಗಳನ್ನು ಎರಡನೇ ಹoತದಲ್ಲಿ ಮಾಡಲಾಗುವುದು. ತಹಶೀಲ್ದಾರ್ ಗಳಿಗೆ ಗುರಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಆರು ತಿಂಗಳಲ್ಲಿ ಒಂದು ಹಂತಕ್ಕೆ ಪೋಡಿ ಕಾರ್ಯ ಪೂರ್ಣಗೊಳ್ಳಬೇಕು ಎಂದು ಸಚಿವರು ಹೇಳಿದರು.

ಜಿಲ್ಲೆಯಲ್ಲಿ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಾರದಲ್ಲಿ ಒಂದು ಶಾಲೆಗೆ ಕಡ್ಡಾಯವಾಗಿ ಭೇಟಿ ನೀಡಿ, ಅಲ್ಲಿನ ಶೈಕ್ಷಣಿಕ ಪ್ರಗತಿ ಪರಿಶೀಲಿಸುವ ಜತೆಗೆ ಕುಂದುಕೊರತೆಗಳನ್ನು ಆಲಿಸುವ ಕೆಲಸ ಮಾಡಬೇಕು. ಅಲ್ಲದೇ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಪ್ರತಿ ವಿದ್ಯಾರ್ಥಿ ಶೇ. 70 ರಿಂದ ಶೇ. 80 ಕ್ಕೂ ಹೆಚ್ಚು ಅಂಕದೊಂದಿಗೆ ತೇರ್ಗಡೆಯಾಗುವಂತೆ ಭೋಧನೆಗೆ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಕಳೆದ ವರ್ಷದ ಫಲಿತಾಂಶಕ್ಕಿಂತ ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಯಲ್ಲಿ ಹಾಗೂ ಪಿ.ಯು.ಸಿ ಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಕ್ರಮ ವಹಿಸಿ ತಾಲ್ಲೂಕು ಹೋಬಳಿವಾರು ಶಿಕ್ಷಕರ ಸಭೆ ನಡೆಸಿ ಎಂದರು.

*ಡೆಂಗಿ ನಿಯಂತ್ರಣಕ್ಕೆ ಕ್ರಮವಹಿಸಿ*

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು‌ ದಿನದಿಂದ ದಿನಕ್ಕೆ ‌ಏರುತ್ತಲೇ ಇದೆ. ಜಿಲ್ಲೆಯಲ್ಲೂ ಕೂಡ ಡೆಂಗೆ ನಿಯಂತ್ರಣದ ಬಗ್ಗೆ ‌ಜಿಲ್ಲಾಡಳಿತ, ಆರೋಗ್ಯ ಇಲಾಖೆ ,ಸ್ಥಳೀಯ ಸಂಸ್ಥೆಗಳು ಮುನ್ನೆಚ್ಚರಿಕೆ ವಹಿಸಬೇಕಾಗಿದೆ.
ಜನಸಂಖ್ಯಾ ಒತ್ತಡ ಹೆಚ್ಚಿರುವ ನಗರ ಪ್ರದೇಶಗಳಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ‌ ನೀಡಬೇಕು. ಚರಂಡಿಗಳ ಸ್ವಚ್ಚತೆಯ ಜತೆಗೆ ನೀರು‌ ನಿಲ್ಲದಂತೆ ಕ್ರಮವಹಿಸುವುದು. ಸೊಳ್ಳೆ ಲಾರ್ವಾ ನಾಶ ಮಾಡಲು ಕೂಡ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

ಜನಸಂಖ್ಯೆ ಆಧಾರದಲ್ಲಿ ಅವೈಜ್ಞಾನಿಕವಾಗಿರುವ ಪಿಎಚ್ ಸಿಗಳ ಬಗ್ಗೆ ಮಾಹಿತಿ ಪಡೆದು ಈ ಬಗ್ಗೆ ಕ್ರಮವಹಿಸಬೇಕು.
ಹೊಸ ರಾಷ್ಟ್ರೀಯ ಹೆದ್ದಾರಿಗಳು ನಿರ್ಮಿಸುವ ಸಂದರ್ಭದಲ್ಲಿ ಯಾವ ಹಳ್ಳಿಗೂ ತೊಂದರೆ ಆಗದಂತೆ ಪ್ರತಿ ಹಳ್ಳಿಗೂ ಹಾದು ಹೋಗುವ ರಸ್ತೆಗಳ ಸಮೀಪದಲ್ಲಿಯೇ ಕೆಳ ಸೇತುವೆ(ಅಂಡರ್ ಪಾಸ್) ನಿರ್ಮಿಸಬೇಕು. ರಸ್ತೆ ನಿರ್ಮಿಸುವ ಸಂದರ್ಭದಲ್ಲಿ ರಾಜ ಕಾಲುವೆ, ನದಿ, ಕೆರೆ ಕಟ್ಟೆ ಗಳ ಗುರುತನ್ನು ನಿಖರವಾಗಿ ಗುರ್ತಿಸಿ ರಸ್ತೆ ನಿರ್ಮಿಸಬೇಕು ಎಂದರು.

ಸಭೆಯಲ್ಲಿ ಹೊಸಕೋಟೆ ಶಾಸಕರು ಹಾಗೂ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಕುಮಾರ್ ಬಚ್ಚೇಗೌಡ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ(ಬಯಪ್ಪ) ಅಧ್ಯಕ್ಷರಾದ ಶಾಂತಕುಮಾರ್, ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ರಾಜಣ್ಣ, ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ನೆಲಮಂಗಲ ಶಾಸಕರಾದ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್. ನಟರಾಜ್ ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಸ್ಥಳೀಯ ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

8 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

10 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

11 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

19 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

22 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

1 day ago