ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಚರ್ಮಗಂಟು ರೋಗವು ಪೂರ್ತಿಯಾಗಿ ಹತೋಟಿಗೆ ಬಾರದೇ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ The Prevention and control of infectious and Contagious Diseases in Animals Act-2009 Section-12 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಾನುವಾರುಗಳಿಗೆ ಚರ್ಮಗಂಟು ರೋಗ(Lumpy Skin disease) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ 2023ರ ಫೆಬ್ರವರಿ 28 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ, ಸಂತೆ, ಸಾಗಾಣಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧ ಮುಂದುವರೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಈವರೆಗೂ 2370 ಜಾನುವಾರುಗಳಲ್ಲಿ ಈ ರೋಗವು ಕಂಡುಬಂದಿದ್ದು, 206 ಜಾನುವಾರುಗಳು ಮರಣಹೊಂದಿರುತ್ತವೆ. ಇದು ಒಂದು ವೈರಾಣುನಿಂದ ಹರಡುವ ರೋಗವಾಗಿದೆ.
ಪ್ರಮುಖವಾಗಿ ಸೊಳ್ಳೆ, ನೊಣ, ಉಣ್ಣೆ ಇತ್ಯಾದಿ ಕೀಟಗಳಿಂದ ಹರಡುತ್ತದೆ. ಈ ರೋಗವು ಕಾಣಿಸಿಕೊಂಡ ಜಾನುವಾರುಗಳು ರೋಗದಿಂದ ಸಾಕಷ್ಟು ಬಳಲುವುದರಿಂದ ಉತ್ಪಾದನೆ ಕಡಿಮೆಯಾಗುವುದಲ್ಲದೆ, ಕೆಲವೊಮ್ಮೆ ಮರಣ ಹೊಂದುತ್ತವೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 1,60,087 ಜಾನುವಾರುಗಳಿಗೆ ಲಸಿಕೆಯನ್ನು ನೀಡಲಾಗಿದ್ದು, ರೋಗ ಪೀಡಿತ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ.
ಜಿಲ್ಲೆಯಲ್ಲಿ ಹಲವೆಡೆ ಜಾನುವಾರು ಸಂತೆ/ಜಾತ್ರೆಗಳು ನಡೆಯಲಿದ್ದು, ಇವುಗಳಿಂದ ಜಾನುವಾರುಗಳ ಸಾಗಾಣಿಕೆ/ಚಲನವಲನದಿಂದ ಹಾಗೂ ಹಲವಾರು ಜಾನುವಾರುಗಳನ್ನು ಒಂದೆಡೆ ಸೇರಿಸುವುದರಿಂದ ರೋಗೋದ್ರೇಕವು ಹೆಚ್ಚಾಗುವ ಸಾಧ್ಯತೆ ಇರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ 1,62,980 ದನ/ಎಮ್ಮೆಗಳಿದ್ದು, ರೋಗೋದ್ರೇಕವನ್ನು ನಿಯಂತ್ರಿಸದಿದ್ದಲ್ಲಿ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುವ ಸಂಭವವಿರುವುದರಿಂದ ಜಿಲ್ಲೆಯಾದ್ಯಂತ ಜಾನುವಾರು ಜಾತ್ರೆ/ಸಂತೆಗಳನ್ನು ಎರಡು ತಿಂಗಳ ಅವಧಿಗೆ Karnataka Animal Diseases (Control Act), 1961 ರಡಿ ಮತ್ತು ಸಿಆರ್ಪಿಸಿ ಕಲಂ 144 ರ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.