
ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ದೇವನಹಳ್ಳಿ ಟೌನ್ ಪಾರಿವಾಳ ಗುಟ್ಟದ ಸಮೀಪದಲ್ಲಿ 1.20 ಎಕರೆ ಜಾಗವನ್ನು ಗುರ್ತಿಸಿಲಾಗಿದ್ದು, ಭವನ ನಿರ್ಮಾಣಕ್ಕೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.
ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ 70 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವರು
ನಮ್ಮ ಜಿಲ್ಲೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮದ್, ಪ್ರಖ್ಯಾತ ಗಾಯಕ ಸಿ ಅಶ್ವತ್ಥ್, ಕಮಲಾ ಹಂಪನಾ, ವಿ ಸೀತಾರಾಮಯ್ಯ, ತಾಪು ವೆಂಕಟರಾಮ್, ಸಮೇತನಹಳ್ಳಿ ರಾಮಯ್ಯ ಸೇರಿದಂತೆ ಇನ್ನೂ ಹಲವಾರು ಸಾಹಿತಿಗಳು, ಕಲಾವಿದರು ಹಾಗೂ ಸಮಾಜ ಸೇವಕರು ಆಯಾ ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ ಎಂದು ತಮ್ಮ ಕನ್ನಡಿಭಿಮಾನವನ್ನು ವ್ಯಕ್ತಪಡಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಲವಾರು ಜನಪ್ರಿಯ, ಜನಪರ, ಜನಾನುರಾಗಿ ಕಾರ್ಯಗಳನ್ನು ಮಾಡಿತ್ತಿದ್ದೇವೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನುಡಿದಂತೆ ನಡೆಯುವ ಮೂಲಕ ಜನರಿಗೆ ಹತ್ತಿರವಾಗಿದ್ದೇವೆ, ಒಂದು ರೀತಿ ಮಾತೃ ಹೃದಯಿ ಸರಕಾರಕ್ಕೆ ಅಪಾರ ಜನಬೆಂಬಲ ವ್ಯಕ್ತವಾಗುತ್ತಿದೆ.
ನುಡಿದಂತೆ ನಡೆಯುವ ಮೂಲಕ ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯನ್ನು 2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಜಾರಿಗೆ ತಂದ ಕೀರ್ತಿ ನಮ್ಮದು. ಇದರ ಮುಖ್ಯ ಉದ್ದೇಶ ರಾಜ್ಯದಲ್ಲಿ ಹಸಿವು ಮುಕ್ತ ವಾಗಿಸುವುದು ನಮ್ಮ ಗುರಿಯಾಗಿದ್ದು, ಇದು ನಮ್ಮ ಸರ್ಕಾರದ ಹೆಮ್ಮೆಯ ಕ್ಷಣವಾಗಿದೆ.
ಜಿಲ್ಲೆಯಲ್ಲಿ 2,29,651 ಬಿಪಿಎಲ್ ಪಡಿತರ ಚೀಟಿದಾರರಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ರಾಜ್ಯ ಸರ್ಕಾರದ ಹೆಚ್ಚುವರಿ 5 ಕೆ.ಜಿ ಅಕ್ಕಿಯೊಂದಿಗೆ ಒಟ್ಟು 10 ಕೆ.ಜಿ ಅಕ್ಕಿಯನ್ನು ನೀಡಲಾತ್ತಿದ್ದು, 5 ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್ ನೀಡಲಾಗುವುದು. ಇದರಲ್ಲಿ ತೊಗರಿ ಬೇಳೆ, ಹೆಸರು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಒಳಗೊಂಡ ಪೋಷಕಾಂಶಯುಕ್ತ ವಸ್ತುಗಳನ್ನು ಒಳಗೊಂಡಿರುತ್ತದೆ.
ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ರಾಜ್ಯಾದ್ಯಂತ 500 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣ ಮಾಡಿದ್ದು, ಗಿನ್ನಿಸ್ ದಾಖಲೆಗೆ ಭಾಜನವಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 79,27,058 ಮಹಿಳೆಯರು ಪ್ರಯಾಣಿಸಿದ್ದಾರೆ.
ಹಾಗೇ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ದೇವನಹಳ್ಳಿಯಲ್ಲಿ ಆಯೋಜಿಸಲಾಗಿತ್ತು, ಇದರಲ್ಲಿ ಭಾಗವಹಿಸಿದ್ದ 4 ಸಾವಿರಕ್ಕೂ ಹೆಚ್ಚುಮಂದಿ ಈಗಾಗಲೇ ವಿವಿಧ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇನ್ನೂ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ವಿವಿಧ ಯೋಜನೆ, ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿಯ ಕೆಲಸಗಳು ನಡೆಯುತ್ತಿವೆ. ವಸತಿ ಯೋಜನೆ ಮತ್ತು ಮುಖ್ಯಮಂತ್ರಿ ಆಶ್ರಯ ನಿವೇಶನ ಯೋಜನೆಯಡಿ ಜಿಲ್ಲೆಯ ನಿವೇಶನ ಅಭಿವೃದ್ಧಿಗೆ 354.12 ಎಕರೆ ಜಮೀನು ಯೋಗ್ಯವಾಗಿದ್ದು, ಇದರಲ್ಲಿ 294.08 ಎಕರೆ ಜಮೀನಿನಲ್ಲಿ 8260 ನಿವೇಶನಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈ ಪೈಕಿ ಈಗಾಗಲೇ ಒಟ್ಟು 1361 ನಿವೇಶನ ರಹಿತ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಸತಿ ನಿಗಮದಿಂದ ಪಡೆಯಲಾಗಿದೆ.
ಪ್ರಗತಿ ಕಾಲೋನಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಪರಿಶಿಷ್ಠ ಜಾತಿ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರೂ.316.40 ಲಕ್ಷಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

*ಜಿಲ್ಲೆಯ ನಾಲ್ವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗರಿ*
ಶಿಕ್ಷಣ ಕ್ಷೇತ್ರದಲ್ಲಿ ಹೊಸಕೋಟೆ ತಾಲ್ಲೂಕಿನ ಬಿ.ಸಿ ಶ್ರೀನಿವಾಸಯ್ಯ, ಕನ್ನಡಪರ ಸೇವೆಗೆ ನೆಲಮಂಗಲ ತಾಲ್ಲೂಕಿನ ಉಮೇಶ್ ಗೌಡ ಜಿ, ಕೃಷಿ ಕ್ಷೇತ್ರದಲ್ಲಿ ದೇವನಹಳ್ಳಿ ತಾಲ್ಲೂಕಿನ ಬಿ.ಆರ್ ಮಂಜುನಾಥ್, ತೋಟಗಾರಿಕೆ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಹಳ್ಳಿ ರೈತ ಅಂಬರೀಶ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
*ಮನಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು*
ಕನ್ನಡ ನಾಡು ನುಡಿ, ಸಂಸ್ಕೃತಿ, ಸಾಹಿತ್ಯವನ್ನು ಪ್ರತಿಬಿಂಬಿಸುವ ಜಾನಪದ ಗೀತೆ, ಕವನ, ಕವಿತೆಗಳ ವೈಶಿಷ್ಟ್ಯ ಪೂರ್ಣ ಸಂಗೀತ ನೃತ್ಯ, ಭರತನಾಟ್ಯ, ಯಕ್ಷಗಾನದ ಶಾಲಾ ವಿದ್ಯಾರ್ಥಿಗಳ ಅಭಿನಯಗಳು ನೋಡುಗರ ಕಂಗಳಿಗೆ ಮನಸೂರೆಗೊಂಡಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿ.ಕೆ ಬಾಬಾ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ ರಾಜಣ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.