Categories: ಲೇಖನ

ಜೂನ್ 25, 1975….ತುರ್ತು ಪರಿಸ್ಥಿತಿ (ಎಮರ್ಜೆನ್ಸಿ) ಜಾರಿಯಾದ ದಿನ…ತುರ್ತು ಪರಿಸ್ಥಿತಿ ಒಂದು ಪಾಠ ಮತ್ತು ಎಚ್ಚರಿಕೆ

ಸ್ವತಂತ್ರ ಭಾರತದ, ಸಂಸದೀಯ ಪ್ರಜಾಪ್ರಭುತ್ವದ ರಾಜಕೀಯ ಇತಿಹಾಸದಲ್ಲಿ ಕೆಲವೇ ಅತ್ಯಂತ ಕಹಿ ಘಟನೆಗಳಲ್ಲಿ ರಾಷ್ಟ್ರಪತಿಗಳು ಸಹಿ ಹಾಕಿದ ಈ ದಿನವೂ ಒಂದು. ಅಂದಿನ ಭಾರತದ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಗೆ ಅಪಾಯವಿದೆ ಎಂಬ ನೆಪದಿಂದ, ತಮ್ಮ ಅಧಿಕಾರ ಉಳಿಸಿಕೊಳ್ಳಲು ಈ ದೇಶದ ಮೇಲೆ ತುರ್ತುಪರಿಸ್ಥಿತಿಯನ್ನು ಹೇರಿದರು…..

ಅಂದಿನ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಸದಸ್ಯರುಗಳು ಅತ್ಯಂತ ಗಂಭೀರವಾಗಿ ಒಂದು ವಿಷಯವನ್ನು ಸಂವಿಧಾನದಲ್ಲಿ ಸೇರಿಸಿರುತ್ತಾರೆ. ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆಗೆ ನಿಜವಾಗಲೂ ದುಷ್ಟ ಶಕ್ತಿಗಳಿಂದ ಅತ್ಯಂತ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾದಾಗ ದೇಶವನ್ನು ರಕ್ಷಿಸಲು ಈ ಒಂದು ಸಂವಿಧಾನಾತ್ಮಕ ಅವಕಾಶವನ್ನು ನೀಡಲಾಗಿರುತ್ತದೆ. ದುರಾದೃಷ್ಟವಶಾತ್ ಅಂತಹ ಸಂದರ್ಭ ಸೃಷ್ಟಿಯಾಗದಿದ್ದರೂ ಇಂದಿರಾಗಾಂಧಿಯವರು ಸಂವಿಧಾನದ ಆ ವಿಧಿಯನ್ನು ದುರುಪಯೋಗಪಡಿಸಿಕೊಂಡಿದ್ದು ಅಕ್ಷರ ಸಹ ಸತ್ಯ…….

ಆ ಕಾಲಘಟ್ಟದ ಭಾರತದ ರಾಜಕೀಯ ಪರಿಸ್ಥಿತಿ ಇಷ್ಟೊಂದು ಸಂಕೀರ್ಣವಾಗಿರಲಿಲ್ಲ. ಹಾಗೆಯೇ ಅಪಮೌಲ್ಯಗೊಂಡಿರಲಿಲ್ಲ. ಇದ್ದುದರಲ್ಲಿ ಒಂದಷ್ಟು ಮೌಲ್ಯಯುತ ರಾಜಕಾರಣ ನಡೆಯುತ್ತಿದ್ದ ದಿನಗಳಾವು, ಆದರೂ ಸ್ವಾತಂತ್ರ್ಯ ಲಭಿಸಿದ 28 ವರ್ಷಗಳ ನಂತರ ಇಂದಿರಾಗಾಂಧಿಯವರು ಈ ಕಲಂ ಅನ್ನು ದೇಶದ ಮೇಲೆ ಹೇರಿದ್ದಲ್ಲದೆ ಅನೇಕ ಅನೈತಿಕ, ಅಸಂಸದೀಯ, ಹಿಂಸಾತ್ಮಕ ಘಟನೆಗಳಿಗೂ, ರಾಜಕೀಯ ವಿರೋಧಿಗಳ ಬದುಕಿನ ದುರಂತಕ್ಕೂ ಕಾರಣರಾಗುತ್ತಾರೆ……

50 ನೇ ವರ್ಷದ ನೆನಪಿನ ಆ ಘಟನೆ ಬಹುತೇಕ ಜನರ ಮನಸ್ಸಿನಿಂದ ಮರೆಯಾಗಿದೆ. ಅಂದಿನ ಹೋರಾಟಗಾರರಲ್ಲಿ ಅನೇಕರು ಇಂದು ಅಷ್ಟಾಗಿ ಸಕ್ರಿಯವಾಗಿ ಉಳಿದಿಲ್ಲ. ಕೆಲವರು ಮಾತ್ರ ಈಗಲೂ ಆ ಕಹಿ ದಿನಗಳನ್ನು ನೆನಪಿಸಿಕೊಂಡು ಬೆಚ್ಚುತ್ತಾರೆ. ಹಲವರು ಆ ಘಟನೆಯ ಮುಖಾಂತರವೇ ರಾಜಕೀಯ ಮುನ್ನಡೆಗೆ ಬಂದು ದೊಡ್ಡ ದೊಡ್ಡ ಹುದ್ದೆಗೂ ಏರುತ್ತಾರೆ…..

ತುರ್ತು ಪರಿಸ್ಥಿತಿ ಒಂದು ಪಾಠ ಮತ್ತು ಎಚ್ಚರಿಕೆ. 21 ತಿಂಗಳ ಆ ಭಯಂಕರ ಐತಿಹಾಸಿಕ ತಪ್ಪು ನಂತರ ನಲವತ್ತು ವರ್ಷಗಳವರೆಗೆ ಮರುಕಳಿಸುವ ಆತಂಕ ಅಷ್ಟಾಗಿ ಯಾರನ್ನು ಕಾಡಲಿಲ್ಲ. ಆದರೆ, ಅದರ ಮುಂದಿನ ಅಂದರೆ ಈಗಿನ ನರೇಂದ್ರ ಮೋದಿಯವರ 10 ವರ್ಷಗಳ ಆಡಳಿತ ಆಗಾಗ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುತ್ತದೆ ಮತ್ತು ಇಂದಿರಾಗಾಂಧಿ ಆಡಳಿತದ ಕೆಲವು ಲಕ್ಷಣಗಳನ್ನು ಹೋಲುತ್ತದೆ ಎಂದು ಇತಿಹಾಸದ ಅಧ್ಯಯನಕಾರರು, ರಾಜಕೀಯ ಚಿಂತಕರು, ಮೋದಿಯವರ ಪ್ರಬಲ ವಿರೋಧಿಗಳು ಸಾಕಷ್ಟು ಉದಾಹರಣೆಗಳೊಂದಿಗೆ ಮಾತನಾಡುತ್ತಾರೆ……

ಅಂದಿನ ಆ ನೇರ ತುರ್ತು ಪರಿಸ್ಥಿತಿ ಮತ್ತು ಸರ್ಕಾರಗಳನ್ನು ಬೇಕಾಬಿಟ್ಟಿ ವಜಾ ಮಾಡುತ್ತಿದ್ದ ರೀತಿ ಈಗ ಇಲ್ಲದಿದ್ದರೂ ಅದೇ ರೀತಿಯ ಆದರೆ ಪರೋಕ್ಷವಾಗಿ ಸಂವಿಧಾನದ ಕಲಂಗಳನ್ನೇ ಉಪಯೋಗಿಸಿಕೊಂಡು ಚುನಾಯಿತ ಸರ್ಕಾರಗಳನ್ನು ಬೀಳಿಸುವುದು, ಇಡಿ, ಐಟಿ, ಸಿಬಿಐ ಮುಂತಾದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದು, ಚುನಾವಣಾ ಆಯೋಗ, ರಾಜಭವನ ರಾಷ್ಟ್ರಪತಿಗಳು ಮತ್ತು ನ್ಯಾಯಾಂಗದ ಕೆಲವು ವಿಭಾಗಗಳಲ್ಲಿ ಒಂದಷ್ಟು ನಿಯಂತ್ರಣ ಪಡೆದು ವಿರೋಧಿಗಳನ್ನು ಹಣಿಯಲು ಉಪಯೋಗಿಸಿಕೊಳ್ಳುತ್ತಾರೆ ಎಂದು ಬಲವಾಗಿ ಆರೋಪಿಸಲಾಗುತ್ತಿದೆ……

ಇದು ನರೇಂದ್ರ ಮೋದಿಯವರಿಗೆ ಮಾತ್ರ ವಿಶೇಷವಾಗಿ ಅನ್ವಯಿಸುತ್ತದೆ. ಏಕೆಂದರೆ ಅದರ ಹಿಂದಿನ 40 ವರ್ಷಗಳ ಯಾವುದೇ ಪಕ್ಷದ ಪ್ರಧಾನಮಂತ್ರಿಗಳ ಮೇಲೂ ಈ ರೀತಿಯ ಆರೋಪ ಕೇಳಿ ಬರಲಿಲ್ಲ……

ತುರ್ತು ಪರಿಸ್ಥಿತಿ ಎಂದರೆ ಬಹುತೇಕ ದೇಶದ ಪ್ರಜೆಗಳ ಎಲ್ಲಾ ಮೂಲಭೂತ ಹಕ್ಕುಗಳನ್ನು ಸರ್ಕಾರ ರದ್ದು ಪಡಿಸುತ್ತದೆ. ಯಾವುದೇ ವ್ಯಕ್ತಿಯನ್ನು ಕಾರಣ ನೀಡದೆ ವಿಚಾರಣೆಗೊಳಪಡಿಸಲು ಬಂಧಿಸಬಹುದು. ಮಾಧ್ಯಮಗಳಿಗೇ ಆಗಲಿ ಅಥವಾ ಇನ್ಯಾವುದೇ ಸ್ವಾಯುತ್ತ ಸಂಸ್ಥೆಗಳಿಗೆ ಇರುವ ಸ್ವಾತಂತ್ರ್ಯವನ್ನು ಸಂಪೂರ್ಣ ನಿರ್ಬಂಧಿಸಲಾಗುತ್ತದೆ. ಕೇವಲ ಸರ್ಕಾರಕ್ಕೆ ಮಾತ್ರ ಸಂಪೂರ್ಣ ಪರಮಾಧಿಕಾರವಿರುತ್ತದೆ. ಬಹುತೇಕ ಸರ್ವಾಧಿಕಾರಿ ಆಡಳಿತಕ್ಕೆ ಅತ್ಯಂತ ಸಮೀಪ ಆಡಳಿತ ವ್ಯವಸ್ಥೆ. ಅದು ತಾತ್ಕಾಲಿಕ ಮತ್ತು ಸಂಸತ್ತಿನ ಹಾಗೂ ರಾಷ್ಟ್ರಪತಿಗಳ ಅನುಮೋದನೆ ಪಡೆದಿರಬಹುದು. ಅದರೂ ಪ್ರಜಾಪ್ರಭುತ್ವಕ್ಕೆ ಅದು ದ್ರೋಹ ಬಗೆದಂತೆ…..

ಆದ್ದರಿಂದ, ಯಾವುದೇ ಕಾರಣಕ್ಕೂ ಆಗಿನ ತುರ್ತು ಪರಿಸ್ಥಿತಿಯನ್ನು ಸಮರ್ಥಿಸುವುದು ಒಳ್ಳೆಯದಲ್ಲ. ನೇರ ಮಾತುಗಳಲ್ಲೇ ಅದನ್ನು ಖಂಡಿಸಬೇಕು. ಹಾಗೆಯೇ ಈಗಿನ ಒಂದು ರೀತಿಯ ಅಘೋಷಿತ ಸರ್ವಾಧಿಕಾರಿ ಮನೋಭಾವವನ್ನು ಸಹ ಅದೇ ಧ್ವನಿಯಲ್ಲಿ ಟೀಕಿಸಬೇಕಾಗುತ್ತದೆ. ಇಲ್ಲದಿದ್ದರೆ ನಮ್ಮದು ಪಕ್ಷಪಾತ ದೃಷ್ಟಿಕೋನದ ನಿಲುವಾಗಿರುವ ಸಾಧ್ಯತೆ ಇದೆ……

ಭಾರತದಂತಹ ಬೃಹತ್ ವೈವಿಧ್ಯಮಯ ದೇಶದಲ್ಲಿ ಸಂವಿಧಾನಾತ್ಮಕ ನೀತಿ ನಿಯಮಗಳನ್ನು ಏಕಪ್ರಕಾರವಾಗಿ ರೂಪಿಸುವುದು ಅಷ್ಟು ಸುಲಭವಲ್ಲ. ಬಾಬಾ ಸಾಹೇಬ್ ಅವರಂತಹ ಅದ್ಭುತ ಪ್ರತಿಭೆಯಿಂದ ಮಾತ್ರ ಈ ರೀತಿಯ ಸಂವಿಧಾನ ರಚಿಸಲು ಸಾಧ್ಯವಾಯಿತು. ಅವರು ಸಹ ತುಂಬಾ ದೂರ ದೃಷ್ಟಿಯಿಂದ ಮತ್ತು ದೇಶದ ಹಿತಾಸಕ್ತಿಗಾಗಿ ಕೆಲವು ಕಾನೂನುಗಳನ್ನು ವಿಮಾನದ ಪ್ಯಾರಾಚೂಟ್ ರೀತಿಯಲ್ಲಿ ಅತ್ಯಂತ ತುರ್ತು ಮತ್ತು ಅನಿವಾರ್ಯ ಸಂದರ್ಭದಲ್ಲಿ ರಕ್ಷಣೆಗಾಗಿ ಮಾತ್ರ ಎಂದು ಒಂದು ವಿವೇಚನಾ ಅಧಿಕಾರ ಆಡಳಿತದ ಮುಖ್ಯಸ್ಥರಿಗೆ ಇರಲಿ ಎನ್ನುವ ಸದಾಶಯದಿಂದ ಸಂವಿಧಾನದಲ್ಲಿ ಸೇರಿಸಲಾಯಿತು……

ಆದರೆ ಬಾಬಾ ಸಾಹೇಬರೇ ಸ್ವತಃ ಹೇಳಿದಂತೆ ಸಂವಿಧಾನ ಎಷ್ಟೇ ಬಲವಾದ ನೀತಿ ನಿಯಮಗಳನ್ನು ಹೊಂದಿದ್ದರೂ ಅದನ್ನು ಜಾರಿಗೆ ತರುವವರು ಪ್ರಾಮಾಣಿಕರಲ್ಲದಿದ್ದರೆ ಸಂವಿಧಾನದ ಆಶಯ ಈಡೇರುವುದು ಸಾಧ್ಯವಿಲ್ಲ. ಈಗಲೂ ಅನೇಕ ಘಟನೆಗಳನ್ನು ನೋಡಿದಾಗ ಆ ಮಾತು ನಿಜವೆನಿಸುತ್ತದೆ. ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎನ್ನುವ ಮಹೋನ್ನತ, ಉದಾತ್ತ ಆಶಯ ಇಂದು ನಿಜವಾಗಿಯೂ ನಿರಪರಾಧಿಗೆ ಬಿಡುಗಡೆಯಾಗುತ್ತದೋ ಇಲ್ಲವೋ ಆದರೆ ಅಪರಾಧಿಗಳು ಮಾತ್ರ ತಪ್ಪಿಸಿಕೊಂಡು ಹೋಗಲು ಈ ಒಂದು ವಿವೇಚನಾ ಅಧಿಕಾರವು ಸಹ ಮುಖ್ಯ ಕಾರಣವಾಗಿದೆ. ಅಷ್ಟು ಖಚಿತ ಸಾಕ್ಷಿಗಳು ಸಿಗುವುದು ಕಷ್ಟ ಮತ್ತು ನಿಷ್ಣಾತರ ವಕೀಲರು ಅದರ ಲಾಭ ಪಡೆಯುತ್ತಾರೆ…..

ಆದ್ದರಿಂದಲೇ ಪ್ರತಿಬಾರಿಯೂ ಮೌಲ್ಯಗಳ ಬಗ್ಗೆ ಮತ್ತೆ ಮತ್ತೆ ಪ್ರಸ್ತಾಪ ಮಾಡಲಾಗುತ್ತದೆ ನೈತಿಕತೆ ಮತ್ತು ಮೌಲ್ಯಗಳಿಲ್ಲದ ಯಾವ ಜಾತಿ, ಧರ್ಮ, ಭಾಷೆ, ಕಾನೂನು, ವ್ಯಕ್ತಿ ಎಲ್ಲವೂ ಬಹುತೇಕ ವಿಫಲವಾದಂತೆ ಮತ್ತು ಮೌಲ್ಯಗಳ ದುರುಪಯೋಗವಾದಂತೆ ಎಂದು ಎಚ್ಚರಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago