ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫ್ತಿಯಾರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆಯ ಮೂಲಕ ಭಗವಂತನನ್ನು ಪ್ರಾರ್ಥಿಸಲಾಗುತ್ತದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆಯನ್ನು ನಡೆಸಿ, ಹಬ್ಬದ ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.
ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವುದೇ ಧರ್ಮದ ಹಬ್ಬ ಹರಿದಿನವಾಗಲಿ, ಮತ್ತೊಂದು ಧರ್ಮದವರಿಗೆ ತೊಡಕು ಉಂಟಾಗದ ರೀತಿಯಲ್ಲಿ ಆಚರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.
ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಿಂದಿನಿಂದಲೂ ಎಲ್ಲಾ ಮಸೀದಿಗಳಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕೃತಿ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.
ಈ ವೇಳೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.