ಜೆ.ಜೆ.ಎಂ ಕಾಮಗಾರಿಗೆ 968 ಕೋಟಿ ಅನುದಾನ – ಸಂಸದರಾದ ಡಾ.ಕೆ.ಸುಧಾಕರ್

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಮೊದಲನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕವಾಗಿ ಬೆಂಬಲವಾಗಿ ನಿಲ್ಲಲು ವಾರ್ಷಿಕ 6000 ರೂಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 1,70, 000 ರೈತರಿದ್ದು ಕಳೆದ ಸಾಲಿನಲ್ಲಿ 63,375 ರೈತರು ಮಾತ್ರ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದಾರೆ. ಈ ಯೋಜನೆಯ ಬಗ್ಗೆ ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಕೈಗೊಳ್ಳುವ ಮೂಲಕ ಕ್ಷೇತ್ರ ಭೇಟಿ ನೀಡಿ ಸೌಲಭ್ಯ ವಂಚಿತ ರೈತರ ಸಮಸ್ಯೆ ಆಲಿಸಿ, ಅದನ್ನು ಬಗೆ ಹರಿಸುವ ಮೂಲಕ ಅರ್ಹ ಪ್ರತಿಯೊಬ್ಬ ರೈತನಿಗೂ ಈ ಯೋಜನೆಯ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆ ಮಾಡಿಸುವುದರಿಂದ ಬೆಳೆ ನಷ್ಟವನ್ನು ವಿಮೆ ಮೂಲಕ ಪಡೆಯಬಹುದು. ಈ ಬಗ್ಗೆ ರೈತರಿಗೆ ಮನವರಿಕೆ ಮಾಡುವ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು ನೋಂದಣಿ ಹೆಚ್ಚಿಸಿ ಎಂದರು.

*ಕಿಸಾನ್ ಕ್ರೆಡಿಟ್ ಕಾರ್ಡ್ ನ ಸದುಉಪಯೋಗ ಪಡೆಯಿರಿ*

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯು ರೈತರಿಗೆ ಕೃಷಿ ಮತ್ತು ಕೃಷಿ ಆಧಾರಿತ ಚಟುವಟಿಕೆ ಕೈಗೊಳ್ಳಲು ಬ್ಯಾಂಕಿಂಗ್ ವ್ಯವಸ್ಥೆಯಿಂದ ಸಾಕಷ್ಟು ಮತ್ತು ಸಕಾಲಿಕ ಸಾಲ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ.

ರೈತರಿಗೆ ಅವರ ಕೃಷಿ ಕಾರ್ಯಾಚರಣೆಗಳಿಗೆ ಸಾಕಷ್ಟು ಮತ್ತು ಸಕಾಲಿಕ ಸಾಲವನ್ನು ಒದಗಿಸುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯೋಜನೆಯನ್ನು ಪರಿಚಯಿಸಲಾಯಿತು. ಕೇಂದ್ರ ಸರ್ಕಾರವು ರೈತರಿಗೆ 2% ಬಡ್ಡಿ ಸಬ್ವೆನ್ಷನ್ ಮತ್ತು 3% ತ್ವರಿತ ಮರುಪಾವತಿ ಪ್ರೋತ್ಸಾಹವನ್ನು ನೀಡುತ್ತದೆ, ಹೀಗಾಗಿ ಸಾಲವು ವಾರ್ಷಿಕ 4% ಸಬ್ಸಿಡಿ ದರದಲ್ಲಿ ಲಭ್ಯವಾಗುತ್ತಿದೆ. ಈ ಯೋಜನೆ ಬಗ್ಗೆ ರೈತರಿಗೆ ಹೆಚ್ಚಿನ ಜಾಗೃತಿ ಮೂಡಿಸಿ ಹೆಚ್ಚು ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಮಾಡಿಸಲು ಅಗತ್ಯ ಕ್ರಮ ವಹಿಸಿ ಎಂದು ಅಧಿಕಾರಿಗಳು ಸೂಚಿಸಿದರು.

*ಜೆ.ಜೆ.ಎಂ ಕಾಮಗಾರಿಗೆ 968 ಕೋಟಿ ಅನುದಾನ*

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಕಲ್ಪಿಸುವ ದೃಷ್ಟಿಯಿಂದ ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದೆ. ಜಿಲ್ಲೆಗೆ 968.15 ಕೋಟಿ ಅನುದಾನ ಬಿಡುಗಡೆ ಆಗಿದೆ. 616 ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿದೆ. ಕಾಮಾಗಾರಿ ಪೂರ್ಣಗೊಂಡಿರುವ ಗ್ರಾಮಗಳಲ್ಲಿ ಖುದ್ದು ಪರಿಶೀಲನೆ ನೆಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿ 770 ಶುದ್ಧ ಕುಡಿಯುವ ನೀರು ಘಟಕಗಳಿದ್ದು 4 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿ ಬಂದಿದೆ. 1000 ಕ್ಕಿಂತ ಅಧಿಕ ಜನ ವಾಸಿಸುವ ಗ್ರಾಮಗಳಲ್ಲಿ ಹೆಚ್ಚುವರಿಯಾಗಿ ಇನ್ನೊಂದು ಘಟಕ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿ. ಅಂಗನವಾಡಿ, ಶಾಲಾ ಕಾಲೇಜು, ಆಸ್ಪತ್ರೆ, ಹಾಸ್ಟೆಲ್, ಸಾರ್ವಜನಿಕ ಪ್ರದೇಶಗಳಲ್ಲಿನ ಶುದ್ಧ ಕುಡಿಯುವ ನೀರು ಘಟಕಗಳನ್ನು ಖಡ್ಡಾಯವಾಗಿ ಕಾಲಕಾಲಕ್ಕೆ ಪರೀಕ್ಷೆ ನಡೆಸಿ ಎಂದರು.

ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ ಬಹುದಿನಗಳಿಂದ ಸಮಸ್ಯೆ ಆಗಿಯೇ ಉಳಿದಿದೆ. ಕೊಳವೆ ಬಾವಿಗಳಲ್ಲಿ ನೀರು ಕಡಿಮೆ ಆಗಿದೆ. ವಾರಕ್ಕೆ 15 ದಿನಕ್ಕೊಮ್ಮೆ ನೀರು ಸಿಗುತ್ತಿದ್ದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಪರಿಹಾರ ಕಂಡುಹಿಡಿದು ನೀರಿನ ಬವಣೆ ನೀಗಿಸಲು ಕ್ರಮ ವಹಿಸಿ ಎಂದರು.

ಆಯುಷ್ಮಾನ್ ಕಾರ್ಡ್ ಪ್ರತಿಯೊಬ್ಬರಿಗೂ ತಲುಪವಂತೆ ಕ್ರಮ ವಹಿಸಿ. ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿ ವ್ಯಕ್ತಿಗೆ 5 ಲಕ್ಷ ರೂಪಾಯಿಗಳ ಉಚಿತ ವೈದ್ಯಕೀಯ ಸೌಲಭ್ಯ ಸಿಗುತ್ತದೆ. ಪ್ರತಿಯೊಬ್ಬರಿಗೂ ಈ ಸೌಲಭ್ಯ ಸಿಗುವಂತಾಗಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಬಗ್ಗೆ ದೂರು ಬಂದಿದ್ದು ಔಷಧಿ ಕೊರತೆ ಉಂಟಾದ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಎಂದರು.

*ಕೇಂದ್ರ ವಸತಿ ಶಾಲೆ, ನಿಲಯಗಳಿಗೆ ಪ್ರಸ್ತಾವನೆ ಸಲ್ಲಿಸಿ*

ಕೆಂದ್ರ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆ ಇಲ್ಲ. ಜಿಲ್ಲೆಯಿಂದ ಇದುವರೆಗೆ ಯಾವ ಇಲಾಖೆಯಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ. ವಸತಿ ಶಾಲೆ,ನಿಲಯಗಳ ಸ್ಥಾಪನೆ, ವೃದ್ಧಾಪ್ಯ ವೇತನ, ಅನಾಥಾಶ್ರಮ, ಮನೆ ನಿರ್ಮಾಣ, ಶೀಥಲ ಶೇಖರಣಾ ಕೇಂದ್ರ, ಮಲ್ಟಿ ಟಾಸ್ಕಿಂಗ್ ಮಾರ್ಕೆಟಿಂಗ್ ಸೆಂಟರ್ ಈ ಎಲ್ಲವನ್ನೂ ಸ್ಥಾಪಿಸಲು ಅವಕಾಶವಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪ್ರಸ್ತಾವನೆ ಸಲ್ಲಿಸಿ, ನಾನು ಕೇಂದ್ರದಲ್ಲಿ ಅನುಮೋದನೆ ಮಾಡಿಸುತ್ತೇನೆ ಎಂದರು. ಆದರ್ಶ ಗ್ರಾಮ ಯೋಜನೆಯಡಿ ಜಿಲ್ಲೆಯಲ್ಲಿ 14 ಗ್ರಾಮ ಆಯ್ಕೆ ಆಗಿದ್ದು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರ ಆದಾಯ ದ್ವಿಗುಣಗೊಳಿಸುವುದು, ಮಹಿಳೆಯರ ಸಬಲೀಕರಣ, ಆರೋಗ್ಯ ಕ್ಷೇತ್ರ, ತಂತ್ರಜ್ಞಾನ, ವೈಜ್ಞಾನಿಕ ಕ್ಷೇತ್ರ ಹಾಗೂ ಇತರೆ ಕ್ಷೇತ್ರಗಳನ್ನು ಗಮನದಲ್ಲಿ ಇಟ್ಟುಕೊಂಡು ವಿಕಸಿತ ಭಾರತ ನಿರ್ಮಾಣಕ್ಕೆ ಹಲವು ಜನಪರ ಯೋಜನೆಗಳು ಜಾರಿಗೆ ತರಲಾಗಿದೆ. ಅಂತಹ ಕೇಂದ್ರ ಪುರಸ್ಕೃತ ಸರ್ಕಾರದ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಫಲಾನುಭವಿಗೆ ತಲುಪಲು ಅಧಿಕಾರಿಗಳ ಸಮನ್ವಯತೆ ಮತ್ತು ಕಾರ್ಯಕ್ಷಮತೆ ಮುಖ್ಯ. ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ವಿವಿಧ ಹಂತಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧಾ, ಉಪಕಾರ್ಯದರ್ಶಿ ಶಿವಕುಮಾರ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

24 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago