
ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ ಇಂದು ನಡೆದಿದೆ. ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆಯುವ ಮೂಲಕ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಚುಂಚೇಗೌಡ ವಿರುದ್ಧ ಕಿಡಿಕಾರಿದ್ದಾರೆ….
ನ.2 ರಂದು ಟಿಎಪಿಎಂಸಿಎಸ್ ಚುನಾವಣೆ ನಡೆಯಲಿದ್ದು, ಈಗಾಗಲೇ 45ಕ್ಕೂ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂದು ನಾಮಪತ್ರ ಹಿಂತೆಗೆದುಕೊಳ್ಳುವುದಕ್ಕೆ ಕೊನೆ ದಿನವಾಗಿದೆ. ಈ ಹಿನ್ನೆಲೆ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಚುಂಚೇಗೌಡರ ಜೆಡಿಎಸ್ ಜೊತೆಗಿನ ನಂಟನ್ನು ವಿರೋಧಿಸಿ ತೂಬಗೆರೆ ಕಾಂಗ್ರೆಸ್ ಮುಖಂಡ ಸಮ್ಮುಖದಲ್ಲಿ ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆದು ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ….

ನಾಮಪತ್ರ ಹಿಂತೆಗೆತ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರಂಗಪ್ಪ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತೂಬಗೆರೆ ಕಾಂಗ್ರೆಸ್ ಮುಖಂಡರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ, ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳದೇ ಪರೋಕ್ಷವಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಜೊತೆಗೆ ಕರೆದುಕೊಂಡು ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರುವ ವಿಚಾರವಾಗಿದೆ. ಇದು ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.
ಚುಂಚೇಗೌಡರು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವ ಏಕೈಕ ಕಾರಣಕ್ಕೆ ಜೆಡಿಎಸ್ ಅಭ್ಯರ್ಥಿ ಜೊತೆ ಕೈಜೋಡಿಸಿದ್ದಾರೆ…. ಇದಕ್ಕೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯನವರ ಸಹಮತವಿದೆ… ಕಳೆದ ಬಾರಿ ಟಿಎಪಿಎಂಸಿಎಸ್ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದರು. ಆದರೆ, ಸಹಕಾರ ಕ್ಷೇತ್ರದ ಗಂಧಗಾಳಿ ಗೊತ್ತಿಲ್ಲದವರನ್ನು ಅಧ್ಯಕ್ಷರನ್ನಾಗಿ ಮಾಡಿ ನಮಗೆ ಅನ್ಯಾಯ ಮಾಡಿದ್ದಾರೆ. ತೂಬಗೆರೆಯನ್ನು ಪದೇ ಪದೇ ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತು ನಾಮಪತ್ರ ಹಿಂತೆಗೆದುಕೊಳ್ಳಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ನೇತೃತ್ವದಲ್ಲಿ, ಮಾರ್ಗದರ್ಶನದಲ್ಲಿ ತೂಬಗೆರೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಪಡಿಸುತ್ತೇವೆ ಎಂದರು..
ಈ ವೇಳೆ ತೂಬಗರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ಕಾಂಗ್ರೆಸ್ ಮುಖಂಡರಾದ ಗೋಪಾಲ ನಾಯ್ಕ್, ಗಂಗಸಂದ್ರ ಶ್ರೀಧರ್, ಮುರುಳಿ, ಆರ್.ವಿ ಮಹೇಶ್ ಕುಮಾರ್, ಮುನಿರಾಜು, ಆರ್ ವಿ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು..