ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ. ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಬೈಕ್ ನ್ನು ಪೊಲೀಸರು ದಿಢೀರ್ ಅಡ್ಡಗಟ್ಟಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಈ ವೇಳೆ ಬೈಕ್ ನಲ್ಲಿದ್ದ ಮಗು ಕೆಳಗೆ ಜಾರಿ ಬಿದ್ದಿದ್ದು, ಮಗು ಮೇಲೆ ಹಿಂದಿನಿಂದ ಬಂದ ಟೆಂಪೋ ಹರಿದಿದೆ. ಗಂಭೀರ ಪೆಟ್ಟಾಗಿ ಮಗು ಸಾವನ್ನಪ್ಪಿದೆ.
ಮಗುವಿನ ಸಾವಿಗೆ ಪೊಲೀಸರ ನೇರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಗುವಿನ ಮೃತದೇಹವನ್ನು ರಸ್ತೆ ಮಧ್ಯೆ ಇಟ್ಟು ಪೊಷಕರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್ಐಗಳನ್ನು ಅಮಾನತು ಮಾಡಿದ್ದಾರೆ.
ಈ ಬಗ್ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಎಎಸ್ಐಗಳಾದ ಜಯರಾಮ್, ನಾಗರಾಜ್, ಗುರುದೇವ್ ಅಮಾನತುಗೊಂಡವರಾಗಿದ್ದಾರೆ ಎಂದು ತಿಳಿಸಿದ್ದಾರೆ.