ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ ಮಧ್ಯಪ್ರವೇಶಿಸಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಪಿಎ ಅಧ್ಯಕ್ಷ ಸ್ಥಾನಕ್ಕೆ ಸರ್ಕಾರಿ ಶಿಷ್ಟಾಚಾರ ಅನ್ವಯಿಸುವುದಿಲ್ಲ. ಇದು ನಗರಾಭಿವೃದ್ಧಿ ಇಲಾಖೆಯ ಒಂದು ಭಾಗವಾಗಿದ್ದು, ಸರ್ಕಾರದ ಆಯೋಗ, ನಿಗಮ, ಮಂಡಳಿ ಹಾಗೂ ಸಂಘ-ಸಂಸ್ಥೆಗಳ ಅಧ್ಯಕ್ಷ ಸ್ಥಾನಗಳಿಗೆ ಅನ್ವಯಿಸುವ ಶಿಷ್ಟಾಚಾರವನ್ನು ಡಿಪಿಎ ಅಧ್ಯಕ್ಷ ಸ್ಥಾನಕ್ಕೆ ಅನ್ವಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ತಾಲ್ಲೂಕಿನಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳ ರೂಪುರೇಷೆ ಹಾಗೂ ಅಧ್ಯಕ್ಷತೆಯ ವಿಚಾರದಲ್ಲಿ ತಮ್ಮ ಹಕ್ಕುಗಳಿಗೆ ಚ್ಯುತಿ ಉಂಟುಮಾಡುವ ರೀತಿಯಲ್ಲಿ ನಡೆದುಕೊಂಡರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗುವುದು. ಇದೇ ರೀತಿಯ ನಡವಳಿಕೆ ಮುಂದುವರಿದರೆ ಕಾನೂನು ಕ್ರಮಕ್ಕೂ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸ್ನೇಹದಿಂದ ಬಂದರೆ ಎಲ್ಲವನ್ನೂ ಸ್ವೀಕರಿಸುತ್ತೇನೆ. ಆದರೆ ದಬ್ಬಾಳಿಕೆ ಮಾಡಿದರೆ ಬಗ್ಗುವ ಪ್ರಶ್ನೆಯೇ ಇಲ್ಲ ಎಂದು ಧೀರಜ್ ಮುನಿರಾಜು ಹೇಳಿದರು.

ಸರ್ಕಾರಿ ಅಧಿಕಾರಿಗಳ ಮೇಲೂ ದಬ್ಬಾಳಿಕೆ ನಡೆಸುತ್ತಿರುವುದು ಕಂಡುಬರುತ್ತಿದೆ ಎಂದು ಆರೋಪಿಸಿದ ಅವರು, ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅವರಿಗೆ ತಿದ್ದಿ-ಬುದ್ಧಿ ಹೇಳಿ ಕೆಲಸ ಮಾಡಿಸಿಕೊಳ್ಳಬೇಕು. ಆದರೆ ಅವರ ಮೇಲೆ ದಬ್ಬಾಳಿಕೆ ನಡೆಸುವುದು ಸರಿಯಲ್ಲ ಎಂದರು.

ಭೂ ಮಂಜೂರು ಸಮಿತಿ ಸಭೆ ನಡೆಯುವ ದಿನವೇ ತಹಶೀಲ್ದಾರ್ ಹಾಗೂ ಸಮಿತಿ ಸದಸ್ಯರನ್ನು ಮನೆಗೆ ಕರೆಸಿಕೊಂಡು ಸಭೆ ನಡೆಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಶಾಸಕ, ಸರ್ಕಾರಿ ವ್ಯವಸ್ಥೆಯಲ್ಲಿ ನಿಯಮ ಹಾಗೂ ಶಿಷ್ಟಾಚಾರಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಮಾಜಿ ಶಾಸಕ ವೆಂಕಟರಮಣಯ್ಯ ಅವರ ಇಂತಹ ನಡವಳಿಕೆ ಅವರಿಗೆ ಶೋಭೆ ತರುವುದಿಲ್ಲ. ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿಯಾಗುವ ಯಾವುದೇ ಬೆಳವಣಿಗೆಯನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂದು ಧೀರಜ್ ಮುನಿರಾಜು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ಮುಖಂಡರಾದ ಪುಷ್ಪ ಶಿವಶಂಕರ್, ವತ್ಸಲಾ ಸೇರಿದಂತೆ ನಗರಸಭಾ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!