ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಸ್ತಿತ್ವದಿಂದ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು, ಅತೀ ಮುಖ್ಯವಾಗಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ವಿ.ಚುಂಚೆಗೌಡ ತಿಳಿಸಿದರು.
ನಗರದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ನಾಯಕರು ಹಾಗೂ ತಾಲೂಕಿನ ಮಾಜಿ ಶಾಸಕ ಟಿ.ವೆಂಕಟರಮಣಯ್ಯರವರ ಪ್ರಯತ್ನದಿಂದಾಗಿ ಯೋಜನಾ ಪ್ರಾಧಿಕಾರ ಅಧ್ಯಕ್ಷನಾಗಿದ್ದೇನೆ. ನಮ್ಮ ನಗರಕ್ಕೆ ಯೋಜನಾ ಪ್ರಾಧಿಕಾರದ ಅವಶ್ಯಕತೆ ಇದ್ದ ಕಾರಣ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ರಚನೆಯಾಯಿತು. ನಗರ ಅಭಿವೃದ್ಧಿಗಾಗಿ ನಮ್ಮ ಸದಸ್ಯರು ಹಾಗೂ ಟಿ.ವೆಂಕರಮಣಯ್ಯರವರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಲಾಗುವುದು ಎಂದರು.
ನಂತರ ಮಾತನಾಡಿದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಈ ಹಿಂದಿನ ಸಾಲಿನಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ, ಪ್ರಸ್ತುತ ಇರುವ ಶಾಸಕರು ಅನುದಾನ ಪಡೆದು ಅಭಿವೃದ್ಧಿ ಮಾಡಬೇಕು.
ಗ್ಯಾರಂಟಿ ಯೋಜನೆಗಳಿಂದ ಬಡಜನರು, ಕೂಲಿಕಾರ್ಮಿಕರು ಹಾಗೂ ರೈತರಿಗೆ ಬಹಳ ಉಪಯುಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಅಕ್ರೊಶವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ನೂತನ ಸದಸ್ಯರುಗಳಾದ ರಾಮಕೃಷ್ಣಯ್ಯ.ಟಿ, ಅಂಜನಮೂರ್ತಿ, ಅಪ್ಪಿ ವೆಂಕಟೇಶ್ ಸೇರಿದಂತೆ ತಾಲೂಕಿನ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.