ತೆಲಂಗಾಣ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ- ಸಿಎಂ ಸಿದ್ದರಾಮಯ್ಯ

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರೆಲ್ಲರೂ ಸೋಲಿನ ಭೀತಿಗೀಡಾಗಿದ್ದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಹತಾಶ ಪ್ರಯತ್ನ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತೆಲಂಗಾಣ ಚುನಾವಣೆ ಎನ್ನುವುದು ವಚನಬದ್ದ ಕಾಂಗ್ರೆಸ್ ಮತ್ತು ವಚನಭ್ರಷ್ಟ ಬಿಜೆಪಿ ನಡುವಿನ ಸಮರ ಮಾತ್ರವಲ್ಲ ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿಯ ಸುಳ್ಳುಗಳ ನಡುವಿನ ಸಂಘರ್ಷವೂ ಆಗಿದೆ. ಒಂಬತ್ತುವರೆ ವರ್ಷಗಳ ಅವಧಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯ ಶೇಕಡಾ ಹತ್ತರಷ್ಟು ಭರವಸೆಗಳನ್ನು ಕೂಡಾ ಈಡೇರಿಸಿಲ್ಲ ಎನ್ನುವುದು ಅಲ್ಲಿನ ಮತದಾರರಿಗೆ ಅರಿವಾಗಿದೆ. ಇದರಿಂದ ಅಲ್ಲಿ ಪ್ರಧಾನಿ ಮೋದಿಯವರ ಪ್ರಚಾರದಿಂದ ಆ ಪಕ್ಷಕ್ಕೆ ನಷ್ವವೇ ಹೊರತು ಲಾಭ ಇಲ್ಲ ಎಂದಿದ್ದಾರೆ.

ನುಡಿದಂತೆ ನಡೆದ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಬದ್ಧತೆಯಿಂದ ತೆಲಂಗಾಣದ ಕಾಂಗ್ರೆಸ್ ಪಕ್ಷದ ಭರವಸೆಗಳನ್ನು ಅಲ್ಲಿನ ಮತದಾರರು ನಂಬುವಂತಾಗಿದೆ. ಇದರಿಂದ ತೆಲಂಗಾಣದ ಮತದಾರರ ವಿಶ್ವಾಸಾರ್ಹತೆಯನ್ನು ನಮ್ಮ ಪಕ್ಷ ಗಳಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಕರ್ನಾಟಕದವರೇ ಆಗಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣಗಳಲ್ಲಿ ‘‘ಕರ್ನಾಟಕ ಮಾದರಿ’’ ಆಡಳಿತವನ್ನು ಉಲ್ಲೇಖಿಸಿ ಮತದಾರರನ್ನು ಸೆಳೆಯತೊಡಗಿದ್ದಾರೆ ಎಂದು ಹೇಳಿದ್ದಾರೆ.

2013-18 ರ ಅವಧಿಯ ನಮ್ಮ ಹಿಂದಿನ ಸರ್ಕಾರ ಮತ್ತು  ಆರು ತಿಂಗಳ ಅವಧಿಯ ಸರ್ಕಾರದ ಸಾಧನೆಗಳನ್ನು ಆ ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮನೆಮನೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಮರೆತುಬಿಟ್ಟಿರುವ ರಾಜ್ಯದಲ್ಲಿ ಬಿಆರ್ ಎಸ್ ಪಕ್ಷ ಮತ್ತು ಕಳೆದೆರಡು ಲೋಕಸಭಾ ಚುನಾವಣೆಗಳಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎದುರಲ್ಲಿ ತೆಲಂಗಾಣದ ಮತದಾರರಿಗೆ ಕಾಂಗ್ರೆಸ್ ಪಕ್ಷ ಭರವಸೆಯ ಆಶಾಕಿರಣದಂತೆ ಕಾಣಿಸುತ್ತಿರುವ ಕಾರಣದಿಂದಾಗಿಯೇ ಕಾಂಗ್ರೆಸ್ ಪಕ್ಷದ ಪರವಾದ ಅಲೆ ಎದ್ದಿದೆ ಎಂದಿದ್ದಾರೆ.

ನರೇಂದ್ರಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ಇದು ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ತೆಲಂಗಾಣ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲಿ ಮರುಸಾಬೀತಾಗಲಿದೆ. ತಮ್ಮ ನಾಯಕತ್ವಕ್ಕೆ ಅಡ್ಡಗಾಲು ಆಗಬಾರದೆಂಬ ದುರುದ್ದೇಶದಿಂದ ಬಿಜೆಪಿಯಲ್ಲಿರುವ ಪ್ರಾದೇಶಿಕ ನಾಯಕರನ್ನೆಲ್ಲ ನರೇಂದ್ರಮೋದಿ ಮತ್ತು ಅಮಿತ್ ಶಾ ಜೋಡಿ ತುಳಿದುಹಾಕಿರುವುದರಿಂದ ಯಾವ ರಾಜ್ಯದಲ್ಲಿಯೂ ಜನತೆ ನಂಬಿಕೆ ಇಡಬಲ್ಲಂತಹ ಯಾವ ಸ್ಥಳೀಯ ನಾಯಕರು ಇಲ್ಲದಾಗಿದೆ ಎಂದರು.

ಪ್ರತ್ಯೇಕ ರಾಜ್ಯವಾಗಿ ತೆಲಂಗಾಣ ರೂಪುಗೊಳ್ಳಲು ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದನ್ನು ಆ ರಾಜ್ಯದ ಮತದಾರರು  ವಿಳಂಬವಾಗಿಯಾದರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಆಶೋತ್ತರದ ಹೆಸರಲ್ಲಿ ಜನರನ್ನು ಮರುಳು ಮಾಡುತ್ತಾ ಬಂದಿರುವ  ಬಿಆರ್ ಎಸ್ ಪಕ್ಷದ ನಾಟಕ ಅಲ್ಲಿನ ಮತದಾರರಿಗೆ ಅರಿವಾಗಿದೆ. ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಮಿತಿಮೀರಿದ ಭ್ರಷ್ಟಾಚಾರದಿಂದಾಗಿ ಬಿಆರ್ ಎಸ್ ಪಕ್ಷ ಜನತೆಯ ವಿಶ್ವಾಸವನ್ನು ಸಂಪೂರ್ಣ ಕಳೆದುಕೊಂಡಿದೆ. ಬಿಜೆಪಿ ಮತ್ತು ಬಿಆರ್ ಎಸ್  ಎರಡೂ ಪಕ್ಷಗಳನ್ನು ಹಿಂದಕ್ಕಟ್ಟಿ ಮುಂದೋಡುತ್ತಿರುವ ಕಾಂಗ್ರೆಸ್ ಪಕ್ಷ ಅಚ್ಚರಿಯ ಗೆಲುವನ್ನು ದಾಖಲಿಸಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago