ತೆಲಂಗಾಣ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ- ಸಿಎಂ ಸಿದ್ದರಾಮಯ್ಯ

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರೆಲ್ಲರೂ ಸೋಲಿನ ಭೀತಿಗೀಡಾಗಿದ್ದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಹತಾಶ ಪ್ರಯತ್ನ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತೆಲಂಗಾಣ ಚುನಾವಣೆ ಎನ್ನುವುದು ವಚನಬದ್ದ ಕಾಂಗ್ರೆಸ್ ಮತ್ತು ವಚನಭ್ರಷ್ಟ ಬಿಜೆಪಿ ನಡುವಿನ ಸಮರ ಮಾತ್ರವಲ್ಲ ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿಯ ಸುಳ್ಳುಗಳ ನಡುವಿನ ಸಂಘರ್ಷವೂ ಆಗಿದೆ. ಒಂಬತ್ತುವರೆ ವರ್ಷಗಳ ಅವಧಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯ ಶೇಕಡಾ ಹತ್ತರಷ್ಟು ಭರವಸೆಗಳನ್ನು ಕೂಡಾ ಈಡೇರಿಸಿಲ್ಲ ಎನ್ನುವುದು ಅಲ್ಲಿನ ಮತದಾರರಿಗೆ ಅರಿವಾಗಿದೆ. ಇದರಿಂದ ಅಲ್ಲಿ ಪ್ರಧಾನಿ ಮೋದಿಯವರ ಪ್ರಚಾರದಿಂದ ಆ ಪಕ್ಷಕ್ಕೆ ನಷ್ವವೇ ಹೊರತು ಲಾಭ ಇಲ್ಲ ಎಂದಿದ್ದಾರೆ.

ನುಡಿದಂತೆ ನಡೆದ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಬದ್ಧತೆಯಿಂದ ತೆಲಂಗಾಣದ ಕಾಂಗ್ರೆಸ್ ಪಕ್ಷದ ಭರವಸೆಗಳನ್ನು ಅಲ್ಲಿನ ಮತದಾರರು ನಂಬುವಂತಾಗಿದೆ. ಇದರಿಂದ ತೆಲಂಗಾಣದ ಮತದಾರರ ವಿಶ್ವಾಸಾರ್ಹತೆಯನ್ನು ನಮ್ಮ ಪಕ್ಷ ಗಳಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಕರ್ನಾಟಕದವರೇ ಆಗಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣಗಳಲ್ಲಿ ‘‘ಕರ್ನಾಟಕ ಮಾದರಿ’’ ಆಡಳಿತವನ್ನು ಉಲ್ಲೇಖಿಸಿ ಮತದಾರರನ್ನು ಸೆಳೆಯತೊಡಗಿದ್ದಾರೆ ಎಂದು ಹೇಳಿದ್ದಾರೆ.

2013-18 ರ ಅವಧಿಯ ನಮ್ಮ ಹಿಂದಿನ ಸರ್ಕಾರ ಮತ್ತು  ಆರು ತಿಂಗಳ ಅವಧಿಯ ಸರ್ಕಾರದ ಸಾಧನೆಗಳನ್ನು ಆ ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮನೆಮನೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಮರೆತುಬಿಟ್ಟಿರುವ ರಾಜ್ಯದಲ್ಲಿ ಬಿಆರ್ ಎಸ್ ಪಕ್ಷ ಮತ್ತು ಕಳೆದೆರಡು ಲೋಕಸಭಾ ಚುನಾವಣೆಗಳಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎದುರಲ್ಲಿ ತೆಲಂಗಾಣದ ಮತದಾರರಿಗೆ ಕಾಂಗ್ರೆಸ್ ಪಕ್ಷ ಭರವಸೆಯ ಆಶಾಕಿರಣದಂತೆ ಕಾಣಿಸುತ್ತಿರುವ ಕಾರಣದಿಂದಾಗಿಯೇ ಕಾಂಗ್ರೆಸ್ ಪಕ್ಷದ ಪರವಾದ ಅಲೆ ಎದ್ದಿದೆ ಎಂದಿದ್ದಾರೆ.

ನರೇಂದ್ರಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ಇದು ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ತೆಲಂಗಾಣ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲಿ ಮರುಸಾಬೀತಾಗಲಿದೆ. ತಮ್ಮ ನಾಯಕತ್ವಕ್ಕೆ ಅಡ್ಡಗಾಲು ಆಗಬಾರದೆಂಬ ದುರುದ್ದೇಶದಿಂದ ಬಿಜೆಪಿಯಲ್ಲಿರುವ ಪ್ರಾದೇಶಿಕ ನಾಯಕರನ್ನೆಲ್ಲ ನರೇಂದ್ರಮೋದಿ ಮತ್ತು ಅಮಿತ್ ಶಾ ಜೋಡಿ ತುಳಿದುಹಾಕಿರುವುದರಿಂದ ಯಾವ ರಾಜ್ಯದಲ್ಲಿಯೂ ಜನತೆ ನಂಬಿಕೆ ಇಡಬಲ್ಲಂತಹ ಯಾವ ಸ್ಥಳೀಯ ನಾಯಕರು ಇಲ್ಲದಾಗಿದೆ ಎಂದರು.

ಪ್ರತ್ಯೇಕ ರಾಜ್ಯವಾಗಿ ತೆಲಂಗಾಣ ರೂಪುಗೊಳ್ಳಲು ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದನ್ನು ಆ ರಾಜ್ಯದ ಮತದಾರರು  ವಿಳಂಬವಾಗಿಯಾದರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಆಶೋತ್ತರದ ಹೆಸರಲ್ಲಿ ಜನರನ್ನು ಮರುಳು ಮಾಡುತ್ತಾ ಬಂದಿರುವ  ಬಿಆರ್ ಎಸ್ ಪಕ್ಷದ ನಾಟಕ ಅಲ್ಲಿನ ಮತದಾರರಿಗೆ ಅರಿವಾಗಿದೆ. ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಮಿತಿಮೀರಿದ ಭ್ರಷ್ಟಾಚಾರದಿಂದಾಗಿ ಬಿಆರ್ ಎಸ್ ಪಕ್ಷ ಜನತೆಯ ವಿಶ್ವಾಸವನ್ನು ಸಂಪೂರ್ಣ ಕಳೆದುಕೊಂಡಿದೆ. ಬಿಜೆಪಿ ಮತ್ತು ಬಿಆರ್ ಎಸ್  ಎರಡೂ ಪಕ್ಷಗಳನ್ನು ಹಿಂದಕ್ಕಟ್ಟಿ ಮುಂದೋಡುತ್ತಿರುವ ಕಾಂಗ್ರೆಸ್ ಪಕ್ಷ ಅಚ್ಚರಿಯ ಗೆಲುವನ್ನು ದಾಖಲಿಸಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

17 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

22 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago