Categories: ಲೇಖನ

ದಯವಿಟ್ಟು ನಿಮ್ಮ ಕುಟುಂಬದ ಜೊತೆ ಸಮಾಜದ ಬಗ್ಗೆಯೂ ಸ್ವಲ್ಪ ಯೋಚಿಸಿ

” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. ”

ಮಹಾತ್ಮ ಗಾಂಧಿ……

ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು, ಮಡಿಯುವುದು ತನ್ನ ತಂದೆ ತಾಯಿ ಗಂಡ ಹೆಂಡತಿ ಮಕ್ಕಳಿಗಾಗಿ. ಕೆಲವರಂತು ತನ್ನ ಮುಂದಿನ ಹಲವು ಪೀಳಿಗೆಗೆ ಆಗುವಷ್ಟು ಹಣ ಮಾಡಲು ಪ್ರಯತ್ನಿಸುತ್ತಾರೆ……..

ಆದರೆ ದುರಂತವೆಂದರೆ, ಸಾಮಾನ್ಯವಾಗಿ ತನ್ನವರಿಗಾಗಿ ಅಷ್ಟು ದೊಡ್ಡ ಹಣ ಮಾಡಿದ್ದರೂ ಅವರ ಬಗ್ಗೆ ಹತ್ತಿದವರಿಗೆ ಇನ್ನೂ ಮಾಡಬೇಕಿತ್ತು ಎಂಬ ಅಸಮಾಧಾನ ಅತೃಪ್ತಿ ಇರುತ್ತದೆ. ಕೆಲವು ಸಂದರ್ಭಗಳಲ್ಲಿ ಅವರ ಆಸ್ತಿ ಸಂಪಾದನೆಯ ಸಾಧನೆಯ ಬಗ್ಗೆ ಹೆಮ್ಮೆ ಇದ್ದರೂ ಒಂದೆರಡು ಪೀಳಿಗೆಯ ನಂತರ ಅವರ ಹೆಸರನ್ನೇ ಮರೆಯಲಾಗುತ್ತದೆ.

ಆದರೆ ಗೌತಮ ಬುದ್ಧ, ಮಹಾವೀರ, ಬಸವಣ್ಣ, ವಿವೇಕಾನಂದ, ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್ ಮುಂತಾದ ಅನೇಕ ಮಹತ್ವದ ವ್ಯಕ್ತಿಗಳು ತನ್ನ ಮನೆಯವರಿಗಾಗಿ ಹೆಚ್ಚಾಗಿ ಏನನ್ನೂ ಮಾಡಲಿಲ್ಲ. ಆದರೆ ನಾವುಗಳು ಮತ್ತು ಇಡೀ ದೇಶ ಈಗಲೂ ಅವರನ್ನು ನೆನಪಿಸಿಕೊಳ್ಳುತ್ತದೆ ಮತ್ತು ಅವರ ಹುಟ್ಟು ಹಬ್ಬವನ್ನು ಅತ್ಯಂತ ಅಭಿಮಾನದಿಂದ ಆಚರಿಸಲಾಗುತ್ತದೆ……….

ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿಯವರ ಅನುಭವದ ಹೇಳಿಕೆಯನ್ನು ಗಮನಿಸಬೇಕು ಮತ್ತು ಅರ್ಥೈಸಬೇಕು….

” ಪರೋಪಕಾರಂ ಇದಂ ಶರೀರಂ ” ಬದುಕಿನ ಸಾರ್ಥಕತೆ ಅಡಗಿರುವುದೇ ಇತರರ ಸೇವೆಯಲ್ಲಿ. ಕನಿಷ್ಠ ನಮಗಾಗಿ ಮತ್ತು ನಮ್ಮವರಿಗಾಗಿ ಜೊತೆಯಲ್ಲಿ ಇತರರಿಗಾಗಿ ಎಂಬುದು ಹೆಚ್ಚು ಅರ್ಥಪೂರ್ಣ ಎನಿಸುತ್ತದೆ.

ಹಿರಿಯರೊಬ್ಬರು ಹೇಳುತ್ತಿದ್ದರು‌
” ಹಿಂದೆ ನನ್ನದೆಲ್ಲವೂ ನಿನ್ನದೇ ” ಎನ್ನುತ್ತಿದ್ದರು. ನಂತರದಲ್ಲಿ
” ನನ್ನದು ನನ್ನದೇ ನಿನ್ನದು ನಿನ್ನದೇ ” ಎಂಬಂತಾಯಿತು. ಆದರೆ ಈಗಿನ ಆಧುನಿಕ ಕಾಲದಲ್ಲಿ ” ನನ್ನದು ಮತ್ತು ನಿನ್ನದು ಎರಡೂ ನನ್ನದೇ ” ಎಂಬ ಮನೋಭಾವ ಸಾಕಷ್ಟು ಜನರಲ್ಲಿ ಬೆಳೆಯುತ್ತಿದೆ.

ದೊಡ್ಡವರಾಗುವುದು ಅಥವಾ ಯಶಸ್ವಿಯಾಗುವುದು ಎಂದರೆ ತನ್ನ ವೈಯಕ್ತಿಕ ಹಣ ಅಂತಸ್ತು ಅಧಿಕಾರ ಜಮೀನುಗಳ ಹೆಚ್ಚಾಗುವಿಕೆ ಮತ್ತು ಅದರ ಪ್ರದರ್ಶನ. ಅದನ್ನು ಗಳಿಸಲು ಯಾವುದೇ ಮಾರ್ಗಗಳನ್ನು ಉಪಯೋಗಿಸಲು ಹಿಂಜರಿಯುವುದಿಲ್ಲ.

ನಾಮಕರಣ, ಗೃಹ ಪ್ರವೇಶ, ಮದುವೆ, ಮುಂಜಿ, ನಿಶ್ಚಿತಾರ್ಥ, ತಿಥಿ, ಹುಟ್ಟಿದ ಹಬ್ಬ ಹೀಗೆ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ತಮ್ಮ ಶ್ರೀಮಂತಿಕೆಯ ಪ್ರದರ್ಶನ ಮತ್ತು ಆ ಸಂಭ್ರಮಕ್ಕಾಗಿ ಉಪಯೋಗಿಸುವ ಶ್ರಮ ಮತ್ತು ಹಣವನ್ನು ಯಾವುದೇ ಸಾಮಾಜಿಕ ಕಾರ್ಯಗಳ ವಿಷಯದಲ್ಲಿ ತೋರುವುದಿಲ್ಲ. ಜನರು ಸಹ ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಷ್ಟು ಯಾವುದೇ ಸಮಾಜ ಮುಖಿ ಜನ ಸೇವೆಗಳಲ್ಲಿ ಸೇರುವುದಿಲ್ಲ.

ತನಗೆ ವೈಯಕ್ತಿಕವಾಗಿ ಯಾವುದೋ ತೊಂದರೆಯಾದಾಗ ” ಅಯ್ಯೋ ಯಾರು ನ್ಯಾಯ ಕೇಳುವವರೇ ಇಲ್ಲ. ಅನ್ಯಾಯದ ವಿರುದ್ಧ ಮಾತನಾಡುವವರಿಲ್ಲ. ಸಮಾಜ ಸತ್ತು ಹೋಗಿದೆ ” ಎಂದು ಆಕ್ರೋಶದಿಂದ ಮಾತನಾಡುವ ಇದೇ ಜನ ಇತರರು ಸಂಕಷ್ಟದಲ್ಲಿ ಇರುವಾಗ ಧ್ವನಿ ಎತ್ತುವುದಿಲ್ಲ. ಮೌನವಾಗಿ ತಮಗೆ ಸಂಬಂಧವಿಲ್ಲದವರಂತೆ ಸುಮ್ಮನಿರುತ್ತಾರೆ.

ಮಹಾತ್ಮ ಗಾಂಧಿಯವರ ಮಾತಿನ ಅರ್ಥ ಇದೇ ಎನಿಸುತ್ತದೆ. ನೀವು ಹೇಗೆ ಕುಟುಂಬದ ಒಂದು ಭಾಗವೋ ಹಾಗೆಯೇ ಈ ಸಮಾಜದ, ಈ ಪ್ರಕೃತಿಯ ಒಂದು ಭಾಗ. ಅದರ ಹಿತಾಸಕ್ತಿಗೆ ಧಕ್ಕೆಯಾದಾಗ ಪ್ರತಿಭಟಿಸುವುದು ನಮ್ಮ ನಿಮ್ಮ ಕರ್ತವ್ಯ. ಅದನ್ನು ನಿರ್ವಹಿಸಿದಾಗ ಮನುಷ್ಯ ದೊಡ್ಡವನಾಗುತ್ತಾನೆ.

ಇಂದಿನ ವೇಗದ ಮತ್ತು ಸ್ಪರ್ಧಾ ಜಗತ್ತಿನಲ್ಲಿ ನಾವುಗಳು ಕಳೆದುಹೋಗಿ ಇಡೀ ವ್ಯವಸ್ಥೆ ಕುಸಿದು ಬಿದ್ದು ವಿನಾಶದ ಅಂಚಿನಲ್ಲಿರುವಾಗಲೂ ನಮ್ಮ ಪ್ರತಿಕ್ರಿಯೆ ಶೂನ್ಯ. ಅಷ್ಟು ಸ್ವಾರ್ಥಮಯ ಸಮಾಜ ಎಲ್ಲಾ ದೃಷ್ಟಿಯಿಂದ ಅಭಿವೃದ್ಧಿ ಹೊಂದುವುದು ತುಂಬಾ ಕಷ್ಟ.

ಆದ್ದರಿಂದ ದಯವಿಟ್ಟು ಮಹಾತ್ಮ ಗಾಂಧಿಯವರ ಆಶಯದಂತೆ ಪ್ರತಿಯೊಬ್ಬರ ಮನೆಯಲ್ಲಿ ಮನಸ್ಸಿನಲ್ಲಿ ಊರಿನಲ್ಲಿ ಒಬ್ಬೊಬ್ಬ ಬಾಬಾ ಸಾಹೇಬ್ ಬುದ್ದ ಮಹಾವೀರ ವಿವೇಕಾನಂದ ಬಸವಣ್ಣ ಅಕ್ಕಮಹಾದೇವಿ ಮುಂತಾದ ಮಹಾಮಹಿಮರ ಚಿಂತನೆಗಳು ಸದಾ ಜೀವಂತ ಇರುವಂತೆ ನಮ್ಮ ನಡವಳಿಕೆಗಳನ್ನು ರೂಪಿಸಿಕೊಳ್ಳಬೇಕಿದೆ.

ಆಗ ಮಾತ್ರ ಭಾರತೀಯ ಸಮಾಜ ತನ್ನ ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿಕೊಳ್ಳಲು ಸಾಧ್ಯ. ಇಲ್ಲದಿದ್ದರೆ ಎಲ್ಲರೂ ತನ್ನ ಕುಟುಂಬವೇ ತನ್ನ ಸರ್ವಸ್ವ, ಬದುಕಿನ ಸಾರ್ಥಕತೆ ಅಡಗಿರುವುದು ತನ್ನ ಕುಟುಂಬದ ಏಳಿಗೆಯಲ್ಲಿ ಮಾತ್ರ ಎಂಬ ಸ್ವಾರ್ಥಕ್ಕೆ ತಲುಪಿದರೆ ಇಡೀ ಸಮಾಜ ನಿಧಾನವಾಗಿ ಭೀಕರ ಅನಾಹುತಕ್ಕೆ ಒಳಗಾಗುತ್ತದೆ.

ದಯವಿಟ್ಟು ನಿಮ್ಮ ನಮ್ಮ ಕುಟುಂಬದ ಜೊತೆ ಸಮಾಜದ ಬಗ್ಗೆಯೂ ಸ್ವಲ್ಪ ಯೋಚಿಸಿ ಮತ್ತು ಆಗಾಗ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಹಾಗೂ ಸಮಾಜಕ್ಕಾಗಿ ನಿಮ್ಮ ಬಳಿ ಹೆಚ್ಚುವರಿಯಾಗಿರುವ ಸಂಪನ್ಮೂಲಗಳನ್ನು ಸ್ವಲ್ಪ ಮಟ್ಟಿಗೆ ದಾನ ಮಾಡಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

24 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago