ದೇಶದಲ್ಲಿ ಬೆಲೆಯೇರಿಕೆಯಾಗಿದ್ದರೆ ಅದಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಕಾರಣ- ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಭರವಸೆಗಳನ್ನು ನಮ್ಮ ಸರ್ಕಾರ ಜಾರಿ ಮಾಡಿದೆ. ಗ್ಯಾರಂಟಿಗಳನ್ನು ಜಾರಿಮಾಡಲು ಸಾಧ್ಯವಿಲ್ಲ ಹಾಗೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಬಿಜೆಪಿಯವರು ಟೀಕೆ ಮಾಡಿದರು. ಆದರೆ, ನಮ್ಮ ಪಕ್ಷ ಕೊಟ್ಟ ಮಾತಿನಂತೆ ನಡೆಯುತ್ತದೆ ಎಂಬುದನ್ನು ಜನರು ಅರಿತಿದ್ದಾರೆ. ಆದ್ದರಿಂದಲೇ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ರಾಜ್ಯದ ಜನ ನಮ್ಮನ್ನು ಬೆಂಬಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿಪಕ್ಷಗಳು ಗ್ಯಾರಂಟಿ ಯೋಜನೆ ಜಾರಿ ಮಾಡಿ ಅಭಿವೃದ್ಧಿ ಕೆಲಸಗಳಿಗೆ ತಿಲಾಂಜಲಿ ಇಟ್ಟಿದ್ದಾರೆ ಎಂದು ಆರೋಪಿಸುತ್ತಾರೆ. ಬಿಜೆಪಿಯ ಆರ್.ಅಶೋಕ್, ನಾರಾಯಣಸ್ವಾಮಿ ಹಾಗೂ ವಿಜಯೇಂದ್ರ ಅವರು ಬೀದರ್‌ಗೆ ಬಂದು ನೋಡಲು ಆಹ್ವಾನ ನೀಡುತ್ತೇನೆ. ಸರ್ಕಾರ ದಿವಾಳಿಯಾಗಿದ್ದರೆ ₹2,025 ಕೋಟಿಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಸಾಧ್ಯವಾಗುತ್ತಿತ್ತೆ? ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ, ಕಿಂಚಿತ್ತಾದರೂ ಜನಪರವಾದ ಕಾಳಜಿ ಇದ್ದರೆ ಸುಳ್ಳು ನಾಟಕವನ್ನು ಬಂದ್ ಮಾಡಬೇಕು. ದೇಶದಲ್ಲಿ ಬೆಲೆಯೇರಿಕೆಯಾಗಿದ್ದರೆ ಕೇಂದ್ರದ ಬಿಜೆಪಿ ಸರ್ಕಾರ ಕಾರಣ ಎಂದರು.

ಮನ್ ಮೋಹನ್ ಸಿಂಗ್ ಅವರ ಸರ್ಕಾರವಿದ್ದಾಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 118 ರಿಂದ 120 ರೂ.ವರೆಗಿದ್ದಾಗಲೂ ಪೆಟ್ರೋಲ್ ಬೆಲೆ 73 ರೂ. ಹಾಗೂ ಡೀಸೆಲ್ ಬೆಲೆ ₹46.59 ಇತ್ತು. ಇಂದು ಎಷ್ಟಾಗಿದೆ? ಅಚ್ಚೆ ದಿನ್ ಬರುತ್ತದೆ ಎಂದು ನರೇಂದ್ರ ಮೋದಿ ಹೇಳಿದ್ದರು. ಅಚ್ಚೆ ದಿನ್ ಬಂದಿದೆಯೇ? ಅಬಕಾರಿ ಸುಂಕ ಡೀಸೆಲ್ ಮೇಲೆ 10.45 ರೂ.ಗಳಿತ್ತು. 9.40 ರೂ ಪೆಟ್ರೋಲ್ ಮೇಲಿತ್ತು ಇಂದು ಎಷ್ಟಾಗಿದೆ? ಮೊನ್ನೆಯವರೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. 35 ಡಾಲರ್ ಗಳಿಗೆ ಇಳಿದಿದೆ. 120 ಡಾಲರ್ ಇರುವಾಗ ಪೆಟ್ರೋಲ್ ಬೆಲೆ 73, ಡೀಸಲ್ ಬೆಲೆ 46 ರೂ.ಗಳಿದ್ದರೆ, ಇಂದು 90 ರೂ.ಗಳಿಗಿಂತ ಹೆಚ್ಚು ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ. ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಇದ್ದನ್ನು ಕೇಳಬೇಕು ಎಂದು ಹೇಳಿದರು.

ಗ್ಯಾಸ್ ಸಿಲಿಂಡರ್ ಬೆಲೆ 420 ರೂ ಇತ್ತು, ಈಗ ಸಾವಿರ ರೂಪಾಯಿಗೆ ಏರಿದೆ. ಅವರ ಆಡಳಿತದ ತಪ್ಪುಗಳನ್ನು ಮುಚ್ಚಿಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜನಾಕ್ರೋಶ ಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿ ಲಜ್ಜೆಗೆಟ್ಟವರು. 2008, 2018 ರಲ್ಲಿ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಆಪರೇಶನ್ ಕಮಲ ಮಾಡಿ ಅಧಿಕಾರಕ್ಕೆ ಬಂದವರು ನಮಗೆ ಪಾಠ ಹೇಳಲು ಬರುತ್ತಾರೆ. ಇವರು ಜನವಿರೋಧಿ ಸರ್ಕಾರ ಎಂದು ಹಣೆಪಟ್ಟಿ ಹಚ್ಚಲು ಹೊರಟಿದ್ದಾರೆ ಎಂದು ತಿಳಿಸಿದರು.

ಕಳೆದ ವರ್ಷ 3 ಲಕ್ಷ 71ಸಾವಿರ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದು, ಈ ವರ್ಷ 4 ಲಕ್ಷದ 9 ಸಾವಿರ ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಆರ್ಥಿಕವಾಗಿ ಸದೃಢವಿದ್ದುದ್ದಕ್ಕೆ ಬಜೆಟ್ ಗಾತ್ರ ₹38 ಸಾವಿರ ಕೋಟಿ ಹೆಚ್ಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಕಳೆದ ವರ್ಷ 56 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದರೆ, ಈ ವರ್ಷ 83 ಸಾವಿರ ಕೋಟಿ. ಗಳ ಬಂಡವಾಳ ವೆಚ್ಚ ಮಾಡಲಾಗುವುದು. ದಿವಾಳಿಯಾಗಿರುವ ಸರ್ಕಾರ ಬಂಡವಾಳ ವೆಚ್ಚ ಮಾಡಲು ಸಾಧ್ಯವಿಲ್ಲ. 2002 ರಲ್ಲಿ ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿ ಮಾಡಿದ್ದು, ಅದರ ಮೂರು ಮಾನದಂಡಗಳ ಪ್ರಕಾರ ಬಜೆಟ್ ಮಂಡನೆ ಮಾಡುವಾಗ ಹಣಕಾಸಿನ ಪರಿಸ್ಥಿತಿ ಚೆನ್ನಾಗಿದ್ದರೆ ರಿವನ್ಯೂ ಸರ್ಪ್ಲಸ್ ಇರಬೇಕು. ಸಾಲ ಮಾಡುವಾಗ ಜಿಡಿಪಿ ಯ 25% ಒಳಗಿರಬೇಕು. ನಾವು ಈ ಮಾನದಂಡಗಳ ಒಳಗೆ ಇದ್ದೇವೆ. ನಾವು ಅಭಿವೃದ್ಧಿಗೆ, ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಮೀಸಲಿಟ್ಟಿದ್ದೇವೆ ಎಂದರು.

ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಅವರ ಮನೆದೇವರು. ರಾಜ್ಯದ ಜನರನ್ನು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ, ಹಾಗೂ ನನ್ನ ಮೇಲೆ ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ. ಆದರೂ ಮೂರೂ ಉಪಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *