ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ 9 ಮಂದಿ ಯುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದು, ಯುವ ಸಮುದಾಯಕ್ಕೆ ಸೂಕ್ತಸ್ಥಾನ ನೀಡಿ ದೇಶದ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಭ್ರಷ್ಟಚಾರವಿಲ್ಲದೆ ಸುಭದ್ರ ಆಡಳಿತ ನೀಡುವುದರ ಜೊತೆಗೆ ಬಡವರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 28 ಲೋಕ ಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ವಿಶ್ವಾಸ ಮಾತುಗಳನ್ನಾಡಿದರು.
ನಗರದ ಒಕ್ಕಲಿಗರ ಭವನದಲ್ಲಿ ಅಯೋಜನೆ ಮಾಡಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಜನಸೇವಕನಾಗಿದ್ದು, ಜನಸೇವೆಗಾಗಿ ಆಸ್ಪತ್ರೆ, ವಿದ್ಯಾಮಂದಿರಗಳ ನಿರ್ಮಾಣ ಸೇರಿದಂತೆ ವಿವಿಧ ರೀತಿಯ ಸೇವೆಗಳನ್ನ ಜನರಿಗೆ ಒದಗಿಸಿದ್ದಾರೆ. ರಕ್ಷಾ ರಾಮಯ್ಯ ದೂರ ದೃಷ್ಟಿಯುಳ್ಳ ಉತ್ತಮ ಪ್ರತಿಭಾನ್ವಿತ ನಾಯಕ. ಕ್ಷೇತ್ರದ ಅಭಿವೃದ್ಧಿಗಾಗಿ ಇವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ರಕ್ಷಾರಾಮಯ್ಯ ಮಾತನಾಡಿ, ಲೋಕಸಭಾ ಚುನಾವಣೆಯು ಮಹತ್ವವಾದ ಚುನಾವಣೆಯಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುಸುತ್ತಿರುವ ಬಿಜೆಪಿ ಸರಕಾರ ಈ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿದರೆ ಸಂವಿಧಾನವನ್ನು ಬದಲಾವಣೆಯನ್ನ ಮಾಡಲಾಗುವುದು ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಹಿನ್ನಲೆಯಲ್ಲಿ ಬಿಜೆಪಿ ಸರಕಾರ ಸಂವಿಧಾನದ ಆಶಯಗಳಿಗೆ ಮಾರಕವಾಗಿದೆ ಎಂದರು.
ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರಕಾರ ಯಾವುದೇ ಜನಪರ ಯೋಜನೆಗಳನ್ನು ನೀಡಿಲ್ಲ ,ಕೋವಿಡ್ ಸಮಯದಲ್ಲಿ ಕೇಂದ್ರ ಸರಕಾರ ತೆಗೆದುಕೊಂಡ ರ್ತೀಮಾನಗಳು ಜನ ಸಾಮನ್ಯರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿಗೆ ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಗೋಬ್ಯಾಕ್ ಅಭಿಯಾನವನ್ನು ಸ್ವಂತ ಬಿಜೆಪಿ ಪಕ್ಷದ ಕಾರ್ಯಕರ್ತರೆ ಕೈಗೊಂಡಿದ್ದಾರೆ. ಜತೆಗೆ ಕೋವಿಡ್ ಸಮಯದ ಭ್ರಷ್ಟಾಚಾರವನ್ನು ಬಿಜೆಪಿ ಮುಖಂಡರೇ ಮಾತನಾಡುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ಯರು ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಯನ್ನು ಮುಂದಿಟ್ಟು ಮತ ಕೇಳಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟರಮಣಯ್ಯ ಮಾತನಾಡಿ, ಹತ್ತು ವರ್ಷ ಆಡಳಿತ ನಡೆಸಿದ ಬಿಜೆಪಿ ಸರಕಾರದ ಕೊಡುಗೆ ಏನು? ಎಂದು ಪ್ರಶ್ನಿಸಿದರು. ಮೋದಿ ಸರಕಾರವು ಯಾವುದೇ ಜನಪರ ಕಾರ್ಯಕ್ರಮಗಳನ್ನು ತರದೇ ಸುಳ್ಳು ಭರವಸೆಗಳನ್ನು ನೀಡಿ ಮತದಾರರನ್ನು ವಂಚಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ರವಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ, ಸೇರಿದಂತೆ ಇತರೆ ಮುಖಂಡರು ಕಾರ್ಯಕರ್ತರು ಉಪಸ್ಥತರಿದ್ದರು.