ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ಕ್ರಿಯಾಶೀಲಗೊಳಿಸಲು ಹಾಗೂ ಪ್ರತಿಯೊಂದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಎಷ್ಟು ಸಾಧ್ಯವೋ ಅಷ್ಟು ಸಮಸ್ಯೆಗಳ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮವನ್ನ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದಾರೆ.
ಜನತಾ ದರ್ಶನ ಆರಂಭವಾದ ನಂತರ ಮೊದಲ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೇತೃತ್ವದಲ್ಲಿ ಸಾರ್ವಜನಿಕವಾಗಿ ನಡೆಸಲಾಗುತ್ತಿರುವ ಪ್ರಥಮ ಜನತಾ ದರ್ಶನ ಸಭೆಯನ್ನ ನಗರದ ಡಿ.ಕ್ರಾಸ್ ಸಮೀಪದಲ್ಲಿನ ಬಾಬು ಜಗಜೀವನ ರಾಮ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಬೇಕಿತ್ತು. ಆದರೆ ಎರಡು ಗಂಟೆ ತಡವಾಗಿ ಆರಂಭವಾಯಿತು.
ಕೋಟಿ ವೆಚ್ಚದ ಜಿಲ್ಲಾಸ್ಪತ್ರೆ ಕಾಮಗಾರಿಗೆ 2023ರಲ್ಲೇ ಸರ್ಕಾರ ಅಧಿಸೂಚನೆ ಹೊರಡಿಸಿದರೂ ಈವರೆಗೆ ಕಾಮಗಾರಿ ಆರಂಭಿಸಿಲ್ಲ. ಕೂಡಲೇ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ತಕ್ಷಣವೇ ಚಾಲನೆ ನೀಡಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪನವರಿಗೆ ಒತ್ತಾಯಿಸಿದರು.
ನಗರದಲ್ಲಿ ಯುಜಿಡಿ ಸಮಸ್ಯೆ ವಿಪರೀತವಾಗಿದೆ. ನಾಗರಕೆರೆ, ಚಿಕ್ಕತುಮಕೂರು ಸೇರಿ ಹಲವು ಕೆರೆಗಳಿಗೆ ವಿಷಯುಕ್ತ ತ್ಯಾಜ್ಯ ನೀರು ಹರಿಸಲಾಗುತ್ತಿದೆ. ಇದರಿಂದ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಒಳಚರಂಡಿ ಹಾಗೂ ತ್ಯಾಜ್ಯ ನೀರು ಶುದ್ದೀಕರಣ ಘಟಕಕ್ಕಾಗಿ ಸರ್ಕಾರ 136 ಕೋಟಿ ಮೀಸಲಿರಿಸಿದ್ದು, ಜಿಲ್ಲಾಧಿಕಾರಿಗಳು ಕೂಡಲೇ ಸೂಕ್ತ ಜಾಗ ಗುರುತಿಸಿ ಸಮಸ್ಯೆ ಇತ್ಯರ್ಥ ಮಾಡಬೇಕು. ನಗರೋತ್ಥಾನ ಹಾಗೂ 15ನೇ ಹಣಕಾಸು ಯೋಜನೆಯಡಿ ಹೆಚ್ಚಿನ ಅನುದಾನ ನೀಡಿ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣ ಮಾಡಬೇಕು. ರಸ್ತೆ ಅಗಲೀಕರಣ, ಹೊಸ ರಿಂಗ್ ರಸ್ತೆ ನಿರ್ಮಿಸಬೇಕು ಎಂದು ಪ್ರಸ್ತಾಪಿಸಿದರು.
ಕಂದಾಯ, ನಗರಸಭೆ, ತಾ.ಪಂ. ಬಗ್ಗೆ ಹೆಚ್ಚಿನ ದೂರುಗಳು ಕೇಳಿ ಬರುತ್ತಿವೆ. ಜಾತಿ, ಆದಾಯ ಪ್ರಮಾಣ ಪತ್ರ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ. ಪೌತಿ ಖಾತೆಗಳು ಆಗುತ್ತಿಲ್ಲ. ಸಣ್ಣ ಸಮಸ್ಯೆಗಳಿಗಾಗಿ ಸಾರ್ವಜನಿಕರು ದೂರದ ಊರುಗಳಿಂದ ಬಂದು ಬರಿಗೈಯಲ್ಲಿ ವಾಪಸ್ ಹೋಗಬೇಕಾಗಿದೆ. ರೈತರು, ಸಾರ್ವಜನಿಕರು ಬಂದಾಗ ಸಹಕಾರ ನೀಡಬೇಕು. ಸಣ್ಣ ಸಮಸ್ಯೆಗಳು ಸಕಾಲದಲ್ಲಿ ಬಗೆಹರಿಸಿಕೊಡಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು. ದೊಡ್ಡಬಳ್ಳಾಪುರಕ್ಕೆ 5ಸಾವಿರ ಮನೆಗಳನ್ನು ಮಂಜೂರು ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಸಾಸಲು ಹೋಬಳಿಯ ಚಿಗರೇನಹಳ್ಳಿ ಸಮೀಪ 2014ರಿಂದ ಬಿಬಿಎಂಪಿ ವ್ಯಾಪ್ತಿಯಿಂದ ಮಿತಿಮೀರಿ ಕಸ ತಂದು ರಾಶಿಹಾಕಲಾಗುತ್ತಿದೆ. ಕಸದಿಂದ ಹೊರಬರುವ ಕೊಳಚೆ ನೀರು ಅಂತರ್ಜಲ ಸೇರಿ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ರಿಯಲ್ಲಿನ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸಹ ಕಲುಷಿತವಾಗಿರುವುದರಿಂದ ನೀರು ಶುದ್ದೀಕರಿಸಲಾಗದೆ ಕೆಟ್ಟು ನಿಂತಿವೆ. ಈ ಭಾಗದ ಗ್ರಾಮಗಳ ಜನರು ಕುಡಿಯುವ ನೀರಿಗಾಗಿ ದೂರದ ಗ್ರಾಮಗಳಿಂದ ತರುವಂತಹ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಆ ಭಾಗದ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು ಎಂದರು.
ನಂತರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಕಾನೂನು ಬದ್ಧವಾಗಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನ ಆರಂಭ ಮಾಡಲಾಗಿದೆ. ಈ ಒಂದು ಜನತಾ ದರ್ಶನದಲ್ಲಿ ಕೋರ್ಟ್ ಅಂಗಳದಲ್ಲಿರುವ ಸಮಸ್ಯೆ ಹೊರತುಪಡಿಸಿ ಉಳೆದಲ್ಲಾ ಸಮಸ್ಯೆಗಳಿಗೆ ಒಂದು ತಿಂಗಳಲ್ಲಿ ಉತ್ತರವನ್ನು ಮನೆ ಬಾಗಿಲುಗೆ ತಲುಪಿಸಲಾಗುವುದು ಎಂದರು.
ಜಿಲ್ಲಾಸ್ಪತ್ರೆಯ ಕಾಮಗಾರಿ ಆರಂಭಿಸುವಲ್ಲಿ ವಿಳಂಬ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರ ಬಳಿ ಚರ್ಚಿಸಿ ಕಾಮಗಾರಿ ಆರಂಭಿಸಲು ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗುವುದು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರದ ಬಗ್ಗೆ ಗೊಂದಲ ಸೃಷ್ಟಿಸುವುದು ಬೇಡ, ಈ ಕುರಿತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಕೂಲಕಂಷವಾಗಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.
ಸರ್ಕಾರದ ನಿರ್ದೇಶನದಂತೆ ಪ್ರತಿ 15 ದಿನಕ್ಕೊಮ್ಮೆ ಜನತಾದರ್ಶನವನ್ನು ಹಮ್ಮಿಕೊಳ್ಳಲಾಗುವುದು ಜನತಾ ದರ್ಶನದಲ್ಲಿ ಸಲ್ಲಿಸಲಾದ ಅರ್ಜಿಗಳನ್ನು ಐ.ಪಿ.ಜಿ.ಆರ್.ಎಸ್(IPGRS) ಪೊರ್ಟಲ್ ನಲ್ಲಿ ನೋಂದಾಯಿಸಿ, ವಿಲೇವಾರಿ ಆದ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ದೇವನಹಳ್ಳಿಯಲ್ಲಿ ನಡೆದ ಜನತಾ ದರ್ಶನದಲ್ಲಿ 277 ಅಹವಾಲು ಸ್ವೀಕರಿಸಲಾಗಿತ್ತು ಅದರಲ್ಲಿ 145 ವಿಲೇವಾರಿ ಆಗಿದೆ. ಹೊಸಕೋಟೆ ಯಲ್ಲಿ ನಡೆದ ಜನತಾ ದರ್ಶನದಲ್ಲಿ 318 ಅರ್ಜಿಗಳು ಸ್ವೀಕರಿಸಿ 180 ಅರ್ಜಿ ವಿಲೇವಾರಿ ಮಾಡಲಾಗಿದೆ. ಇನ್ನು ಕೆಲವು ನ್ಯಾಯಾಲಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಕುಲಂಕುಶವಾಗಿ ಪರಿಶೀಲಿಸಬೇಕಾಗಿರುವುದರಿಂದ ತಡವಾಗುತ್ತದೆ . ಒಟ್ಟಾರೆ ಶೇಕಡ 70% ರಷ್ಟು ಅರ್ಜಿಗಳು ವಿಲೇವಾರಿ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
297 ಅರ್ಜಿ ಸ್ವೀಕಾರ
ಪೋಡಿ ಪ್ರಕರಣ, ಜಮೀನು ತಕರಾರು, ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, ಜಮೀನು ಸರ್ವೆ, ಸ್ಮಶಾನ ಜಾಗ ಹಾಗೂ ರಸ್ತೆ ವ್ಯವಸ್ಥೆ, ಗೋಮಾಳ ಒತ್ತುವರಿ, ಹಕ್ಕು ಪತ್ರ ಹಂಚಿಕೆ, ಕೆರೆ ಕಟ್ಟೆ ಸಂರಕ್ಷಣೆ, ಪಡಿತರ ಚೀಟಿ ಹಂಚಿಕೆ, ನಿವೇಶನ ಹಂಚಿಕೆ, ಚರಂಡಿ ನಿರ್ಮಾಣ, ಮೂಲಭೂತ ಸಮಸ್ಯೆಗಳು ಸೇರಿದಂತೆ ಒಟ್ಟು 297 ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.
ಈ ವೇಳೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಅನುರಾಧ, ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.