
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ, ಎಸ್.ಡಿ. ಮುನಿರಾಜು, ಬೈರೇಗೌಡ ಎಂ. ಹಾಗೂ ಕೆ.ಎಂ. ಕೃಷ್ಣಮೂರ್ತಿ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.
ನೂತನ ಸದಸ್ಯರಾಗಿ ನೇಮಕಗೊಂಡಿರುವ ಎಸ್.ಡಿ. ಮುನಿರಾಜು ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನದಿಂದ ಈ ಜವಾಬ್ದಾರಿ ದೊರೆತಿದೆ. ಈ ಅವಕಾಶ ಕಲ್ಪಿಸಲು ಸಹಕರಿಸಿದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ದೇವನಹಳ್ಳಿ ವಿಧಾನಸಭಾ ಕ್ಷೇತ್ರ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಮುಖಂಡರು, ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಯೋಜನಾ ಪ್ರಾಧಿಕಾರದ ಮೂಲಕ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ ಹಾಗೂ ಯೋಜಿತ ನಗರಾಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಅವರು ಹೇಳಿದರು.
ನೂತನ ಜವಾಬ್ದಾರಿ ನೀಡಿರುವ ಸರ್ಕಾರ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಇದೇ ಸಂದರ್ಭದಲ್ಲಿ ಎಸ್.ಡಿ. ಮುನಿರಾಜು ಧನ್ಯವಾದ ಸಲ್ಲಿಸಿದರು.