ಧರ್ಮದ ಹೆಸರಲ್ಲಿ ದ್ವೇಷಿಸುವುದು ಅಮಾನವೀಯ, ಕೆಟ್ಟ ನಡವಳಿಕೆ- ಸಿಎಂ ಸಿದ್ದರಾಮಯ್ಯ

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಂಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ. ನಾರಾಯಣ ಗುರುಗಳು, ಒಂದೇ ಜಾತಿ-ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಹೇಳಿದ್ದೂ ಇದೇ ಮೌಲ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ “ಮಂಗಳವಾದ್ಯ” ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ. ಯಾವ ಕಾಯಕವು ಮೇಲೂ ಅಲ್ಲ, ಯಾವುದು ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮಹತ್ವ ಮತ್ತು ಸಮಾನ ಘನತೆ ಹೊಂದಿವೆ ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಇದೇ ಕಾರಣಕ್ಕೆ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿಯ ತೋಟ”  ಎಂದು ಕರೆದಿದ್ದಾರೆ ಎಂದು ತಿಳಿಸಿದರು.

ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣಗುರುಗಳು ಹೇಳಿದ್ದಾರೆ. ಇದನ್ನು ಪಾಲಿಸಬೇಕು. ದೇವರಿದ್ದಾನೆ, ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, “ಉಳ್ಳವರು ದೇವಸ್ಥಾನವ ಮಾಡುವರು. ನಾನೇನು ಮಾಡಲಯ್ಯ ಬಡವ” ಎಂದಿದ್ದಾರೆ ಎಂದು ಹೇಳಿದರು.

ನಾನು ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡುತ್ತೇನೆ. ನಾವು ರೂಪಿಸುವ ಕಾರ್ಯಕ್ರಮಗಳು ಬಡವರ ಪರವಾಗಿ ಇರುತ್ತವೆ. ನಮ್ಮ‌ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಬಿಜೆಪಿಯವರ ಟೀಕೆಗೆ ಜನ ಬೆಲೆ ಕೊಡಲ್ಲ. ನಾನೂ ಕೊಡಲ್ಲ. ನಾಡಿನ ಜನ ನಮ್ಮ ಜೊತೆಗಿದ್ದಾರೆ ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರಗತಿಪರ ಚಿಂತಕ ಎಲ್.ಮುಕುಂದರಾಜ್ ಮತ್ತು ಸವಿತ ಸಮಾಜದ ಅಧ್ಯಕ್ಷರಾದ ಕಿರಣ್ ಕುಮಾರ್ ಅವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

7 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

2 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

4 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

5 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago