ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಜರುಗಿತು.
ಕ್ರೀಡಾಜ್ಯೋತಿ ಬೆಳಗುವ ಮೂಲಕ ಅಂತರಾಷ್ಟ್ರೀಯ ಕ್ರೀಡಾಪಟು ಆನಂದಕುಮಾರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ಶಾಲೆಯ 985 ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.
ಗುರುಕುಲ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಆರ್.ರಮೇಶ್ ಮಾತನಾಡಿ, ಎಲ್ಲ ಮಕ್ಕಳು ಆಟೋಟದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಇದೇ ಮೊದಲ ಬಾರಿಗೆ 660-680 ಪ್ರಶಸ್ತಿಗಳನ್ನು ನೀಡಲಾಗಿದೆ. ಮಕ್ಕಳ ಬೆಳವಣಿಗೆಯ ಹಿತದೃಷ್ಟಿಯಿಂದ ಕ್ರೀಡೆ ಅತ್ಯಂತ ಮಹತ್ವದ್ದಾಗಿದೆ. ಬಹುಪಾಲು ಮಕ್ಕಳಿಗೆ ಪ್ರಶಸ್ತಿ ನೀಡುವುದರಿಂದ ಅವರಲ್ಲಿ ಕ್ರೀಡಾಸಕ್ತಿ ಉದ್ದೀಪಿಸಬಹುದು ಎಂಬ ದೃಷ್ಟಿಯಿಂದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ. ಮಕ್ಕಳಿಗೆ ಪಾಠದ ಜೊತೆಗೆ ಆಟವೂ ಮುಖ್ಯ. ಇವೆರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಮಕ್ಕಳ ಏಳ್ಗೆಗಾಗಿ ಶಾಲೆಯ ಆಡಳಿತ ಮಂಡಳಿ ಯಾವ ತ್ಯಾಗಕ್ಕೂ ಸದಾ ಸಿದ್ಧವಿರಲಿದೆ ಎಂದು ಹೇಳಿದರು.
ಜಾವೆಲಿನ್ ಥ್ರೋ, ಹರ್ಡಲ್ಸ್, ಭರ್ಜಿಎಸೆತ, ಉದ್ದಜಿಗಿತದಲ್ಲಿ ನಗರದ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕಳೆದ ತಿಂಗಳು 21 ರಂದು ಹೊಸಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೊ, ಭರ್ಜಿ ಎಸೆತ, ಹರ್ಡಲ್ಸ್, ಉದ್ದ ಜಿಗಿತ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳಾದ ಕಿಶನ್ ಚಂದ್ರ, ರುಚಿತಾ, ಸಿಂಚನಾ ಹಾಗೂ ವರ್ಷಿತಾ ಅವರು ನೇರವಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶ್ರಮಿಸಿದ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕ ವೃಂದಕ್ಕೆ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.
ಈ ವೇಳೆ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎ.ಎನ್.ಲೋಕೇಶ್ ಕುಮಾರ್, ಜಂಟಿ ಕಾರ್ಯದರ್ಶಿ ರಿತಿಕ್ ನರೇಂದ್ರ, ಉಪ ಪ್ರಾಂಶುಪಾಲ ಶರಣ್ ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.