ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜು ದಿನಾಚರಣೆ ಹಾಗೂ 2023-24ನೇ ಸಾಲಿನ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್ಎಸ್ಎಸ್, ಎನ್ಸಿಸಿ, ವಿವಿಧ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಗರಪ್ರದೇಶದ ಖಾಸಗಿ ಕಾಲೇಜುಗಳಲ್ಲಿ ಆಚರಿಸುವಂತೆ, ಸರ್ಕಾರಿ ಕಾಲೇಜುಗಳಲ್ಲಿಯೂ ಸಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶ ಹೊಂದಲಾಗಿದೆ. ವಿವಿಧ ಕ್ಷೇತ್ರಗಳ ತಜ್ಞರು, ಕೈಗಾರಿಕೋದ್ಯಮಿಗಳು, ಕಾಲೇಜಿನ ಹಿತೈಷಿಗಳು ಸೇರಿದಂತೆ ಕಾಲೇಜು ಅಭಿವೃದ್ದಿ ಸಮಿತಿಯನ್ನು ನೂತನವಾಗಿ ರಚಿಸಲಾಗಿದೆ ಎಂದರು.
ಕಾಲೇಜಿನ ಅಭಿವೃದ್ದಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 3 ಎಕರೆ ಪ್ರಸ್ತಾವನೆಯಾಗಿದ್ದು, ವಿದ್ಯಾರ್ಥಿನಿಲಯ, ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ 3 ಎಕರೆಗೆ ಮನವಿ ಸಲ್ಲಿಸಲಾಗಿದೆ ಎಂದರು.
ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಾಕ್ರಮದಲ್ಲಿ ನಗರಸಭಾ ಸದಸ್ಯರಾದ ಆರ್.ಹಂಸಪ್ರಿಯ, ಎಸ್.ಪದ್ಮನಾಭ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಲಲಿತ್ ಚಂಪಾಲಾಲ್, ಪಿ.ಸಿ.ವೆಂಕಟೇಶ್, ಕಾಂತರಾಜ್, ಪುಷ್ಪಾ ಶಿವಶಂಕರ್, ಎಂ.ಕೃಷ್ಣಮೂರ್ತಿ, ಪ್ರವೀಣ್,ಡಿ.ಶ್ರೀಕಾಂತ , ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಖಜಾಂಚಿ ಮಹೇಶ್ ಮೊದಲಾದವರು ಭಾಗವಹಿಸಿದ್ದರು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಯೋಗ ಪ್ರದರ್ಶನ ನಡೆಯಿತು.