ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ ನಾಳೆ (ಜುಲೈ 5) ಲೋಕಾರ್ಪಣೆ ಮಾಡಲಾಗುತ್ತಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.

ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 14 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಸುಮಾರು ₹1.35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ ಸಾಕಾರಗೊಳ್ಳುತ್ತಿದೆ.

ಪ್ರತಿಮೆ ಅನಾವರಣದ ಬಳಿಕ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರುದುದ್ದನಹಳ್ಳಿ ಸಮೀಪದ ಶಿಕ್ಷಕರ ಬಡಾವಣೆಯಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಕೆ.ಎಚ್. ಮುನಿಯಪ್ಪ, ಸಂಸದರು, ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳು, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ನಾಲ್ಕು ತಾಲೂಕುಗಳ 102 ಗ್ರಾಮ ಪಂಚಾಯಿತಿಗಳಿಂದ ಡಾ. ಅಂಬೇಡ್ಕರ್ ಅವರ ಭಾವಚಿತ್ರ ಹೊಂದಿರುವ ಹೂವಿನ ಪಲ್ಲಕ್ಕಿಗಳು ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಸಿದ್ಧತೆ ಪರಿಶೀಲನೆ : ಕಾರ್ಯಕ್ರಮದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ, ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಜಿಲ್ಲಾಧಿಕಾರಿ ಅನುರಾಧಾ, ಎಸ್ಪಿ ಚಂದ್ರಕಾಂತ್, ಮತ್ತು ಜಿ.ಪಂ. ಸಿಇಒ ವಾಸಂತಿ ಅಮರ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಕಾರ್ಯಕ್ರಮದಲ್ಲಿ ಬೃಹತ್ ವೇದಿಕೆ, ವಾಹನ ನಿಲುಗಡೆ, ಕುಡಿಯುವ ನೀರು, ಉಪಹಾರ, ಆಹ್ವಾನಿತರಿಗೆ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಕನ್ನಡಪರ, ದಲಿತಪರ, ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!