ನಾವು ಸಂವಿಧಾನ, ದೇಶ ವಿರೋಧಿಗಳಲ್ಲ- ಮೂಲಭೂತ ಸೌಕರ್ಯ ಒದಗಿಸದ, ಶುದ್ಧ ಕುಡಿಯುವ ನೀರು, ಕೆರೆಗಳ ಸಂರಕ್ಷಣೆ ಮಾಡದ ಅಧಿಕಾರಿಗಳ ವಿರುದ್ಧ ನಮ್ಮ ಹೋರಾಟ- ಜ.26ರಂದು ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ನಿರ್ಧಾರ

ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರು ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ್ದಾರೆ.

ನಿರ್ಲಕ್ಷ್ಯವಹಿಸುತ್ತಿರುವ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ನಡೆ ಖಂಡಿಸಿ ಜ.26 ರಂದು ಗಣರಾಜ್ಯೋತ್ಸವ ದಿನ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸುವ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲು ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರು ತೀರ್ಮಾನಿಸಿದ್ದಾರೆ.

ಜ.26 ರಂದು ಗಣರಾಜ್ಯೋತ್ಸವ ದಿನ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಿ ಪ್ರತಿಭಟನೆ ಮಾಡುವುದನ್ನು  ಕೈಬಿಡುವಂತೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರು ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಆದರೆ, ಅಧಿಕಾರಿಗಳ ಸಂಧಾನ ಸಭೆ ವಿಫಲವಾಗಿದೆ.

ಈ ಸಂದರ್ಭದಲ್ಲಿ ಕೆರೆ ಸಂರಕ್ಷಣೆ ಹೋರಾಟ ಸಮಿತಿ ಮುಖಂಡ ವಸಂತ್ ಮಾತನಾಡಿ, 10 ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದರು ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ, ಶುದ್ಧ ಕುಡಿಯುವ ನೀರು ಕೊಟ್ಟಿಲ್ಲ. ಈವರೆಗೆ ಅಧಿಕಾರಕ್ಕೆ ಬಂದಿರುವ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಭರವಸೆಯಲ್ಲೇ ಕಾಲಕಳೆದಿದ್ದಾರೆ. ಯಾವ ಭರವಸೆಯು ಕಾರ್ಯರೂಪಕ್ಕೆ ಬಂದಿಲ್ಲ. ನಮ್ಮ ಭಾಗದ ಎಲ್ಲಾ ಕೆರೆಗಳು ಸಂಪೂರ್ಣ ಕಲುಷಿತಗೊಂಡಿವೆ. ಕೊಳವೆ ಬಾವಿಗಳಲ್ಲಿ ಬರುತ್ತಿರುವ ಕುಡಿಯುವ ನೀರು ಯೋಗ್ಯವಾಗಿಲ್ಲ. ಶೀಘ್ರವಾಗಿ ಇದಕ್ಕೆ ಕಾರಣವಾಗಿರುವವರ ಸೂಕ್ತ ಕಾನೂನು ಕ್ರಮ ಕೈಗೊಂಡು ಕೆರೆಗಳ ಶುದ್ದೀಕರಣ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಕೆರೆ ಅಂಚಿನಲ್ಲಿ ವಾಸವಾಗಿರುವ ಎಲ್ಲಾ ಕುಟುಂಬಗಳು ಕೂಲಿ ಮಾಡಿಕೊಂಡು ಜೀವನ ನಡೆಸುವ ಹಿಂದುಳಿದ ವರ್ಗಕ್ಕೆ ಸೇರಿದವರು. ಪ್ರತಿ ಮನೆಯಲ್ಲೂ ಚರ್ಮ ರೋಗಗಳಿಂದ ಬಳಲುತ್ತಿರುವ ಮಕ್ಕಳು ಇದ್ದಾರೆ. ಹಿರಿಯರು ಉಸಿರಾಟದ ತೊಂದರೆ, ಕೈ, ಕಾಲುಗಳ ನೋವುಗಳಿಂದ ಬಳಲುತ್ತಿದ್ದಾರೆ. ನಮಗೆ ಶುದ್ದ ಕುಡಿಯುವ ನೀರು ಕೊಡುವಂತೆ ಹತ್ತು ವರ್ಷಗಳಿಂದಲು ಹೋರಾಟ ನಡೆಸುತ್ತಲೇ ಬರುತ್ತಿದ್ದರು ಸಮಸ್ಯೆ ಮಾತ್ರ ಉಲ್ಬಣವಾಗುತ್ತಲೇ ಇದೆ. ವಾಸ್ತವ ಪರಿಸ್ಥಿತಿ ಹಿಗಿರುವಾಗ ಗಣರಾಜ್ಯೋತ್ಸವ ಆಚರಣೆ ಮಾಡುವುದರಲ್ಲಿ ಅರ್ಥವಿದೆಯೆ ಎಂದು ಪ್ರಶ್ನಿಸಿದರು.

ಜ.26ರಂದು ಎರಡೂ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸುವುದು ಶತಸಿದ್ಧ. ನಾವು ಸಂವಿಧಾನ ವಿರೋಧಿಗಳಲ್ಲ, ದೇಶ ವಿರೋಧಿಗಳಲ್ಲ. ನಮ್ಮ ಹೋರಾಟ ಸಂವಿಧಾನ ವಿರುದ್ಧ ಕೆಲಸ ಮಾಡುತ್ತಿರುವ ಅಧಿಕಾರಗಳ ನಡೆ ಖಂಡಿಸಿ, ಮೂಲಭೂತ ಸೌಕರ್ಯ ಕುಡಿಯುವ ನೀರು, ಕೆರೆಗಳ ಉಳಿವುಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.

ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡ ಸತೀಶ್ ಮಾತನಾಡಿ, ಜ.26 ರಂದು ಎರಡೂ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ಸಮಿತಿಯ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಪಡೆಯಲಾಗಿದೆ. ಸಹಿ ಸಂಗ್ರಹ ಮಾಡುವ ಮೂಲಕ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಸಲ್ಲಿಸಲಾಗಿದೆ. ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ಸಭೆ ನಡೆಸಿ ನೀಡಲಾಗಿದ್ದ ಯಾವುದೇ ಭರವಸೆಯು ಇದುವರೆಗೂ ಈಡೇರಿಲ್ಲ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಿಯ ಕಚೇರಿಯನ್ನು ನಗರಕ್ಕೆ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉರುಳು ಸೇವೆ ಮಾಡಿದರು ಇದುವರೆಗೂ ಸ್ಥಳಾಂತರ ಆಗಿಲ್ಲ.ಇಂತಹ ಕನಿಷ್ಠ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಲ್ಲೂ ಸಹ ಜನಪ್ರತಿನಿಧಿಗಳು, ಜಿಲ್ಲಾಡಳಿತ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದ ಗಣರಾಜ್ಯೋತ್ಸವ ದಿನದಂದು ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲಾಗುವುದು ಎಂದರು.

ನಮ್ಮ ಭಾಗದಲ್ಲಿ ತಿಂಗಳಿಗೆ ಎರಡು‌ ಮೂರು ಸಾವುಗಳು ಆಗುತ್ತಿವೆ. ಈ ಸಾವು ಸಹಜವಾಗಿ ಬರುತ್ತಿಲ್ಲ. ಬದಲಿಗೆ ಕಿಡ್ನಿ‌ ಸಮಸ್ಯೆ, ಕ್ಯಾನ್ಸರ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದುತ್ತಿದ್ದಾರೆ. ಇದಕ್ಕೆ ಕಾರಣ ಅಶುದ್ಧ ಕುಡಿಯುವ ನೀರಿನಿಂದ, ಕೆರೆಗಳ ಮಾಲಿನ್ಯದಿಂದ ಎಂದರು.

ಪ್ರಮುಖ ಬೇಡಿಕೆಗಳು

*ದೊಡ್ಡಬಳ್ಳಾಪುರ ನಗರಸಭೆ ಯುಜಿಡಿ‌ ನೀರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ಯುಜಿಡಿ ನೀರು ಮೂರನೇ ಹಂತದಲ್ಲಿ ಶುದ್ಧೀಕರಣಗೊಂಡು ಕೆರೆಗಳಿಗೆ ಬರುವಂತೆ ಮಾಡಬೇಕು

• ಅಂರ್ಜಲ ಹದಗೆಡದೇ ಇರುವ ಭಾಗದಿಂದ ಜನರಿಗೆ ಶುದ್ಧ ಕುಡಿಯುವ ನೀರು, ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು.

• ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಬೇಕು

• ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿ, ಕೈಗಾರಿಕೆಗಳ ತ್ಯಾಜ್ಯ ನೀರನ್ನು ಶುದ್ಧೀಕರಿಸಿಕೊಂಡು ಅವರೇ ಆ ನೀರನ್ನು ಕೆರೆಗಳಿಗೆ ಬಿಡದೇ ಮರುಬಳಿಕೆ‌ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು

ಈ ಎಲ್ಲಾ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಹೋರಾಟಗಾರರು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 hour ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

8 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

20 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

20 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

21 hours ago