ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ- ಕೇಂದ್ರದ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಅವರೇ, ನರೇಂದ್ರ ಮೋದಿ ನೇತೃತ್ವದ ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ ತಾವು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ. ಜನತೆಯ ಬಾಯಾರಿಕೆಯನ್ನು ತಣಿಸಬೇಕಾದ ಕೇಂದ್ರ ಸರ್ಕಾರ ಬದಲಿಗೆ ತನ್ನ ಸುಳ್ಳುಗಳ ದಾಹ ತಣಿಸಿಕೊಳ್ಳಲು ಮುಂದಾಗಿ ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ನಡೆಸಿರುವುದು ಬೇಸರದ ಸಂಗತಿ. ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿರುವುದು ನೀವು ಮತ್ತು ನಿಮ್ಮ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕರ್ನಾಟಕದ ವಿರುದ್ಧ ದ್ವೇಷ ಸಾಧಿಸುವಂತೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಸರ್ಕಾರದ ಗಮನಸೆಳೆಯಲು ಆನ್ಸರ್ ಮಾಡಿ ಮೋದಿ ಎಂಬ ಅಭಿಯಾನವನ್ನು ಪ್ರಾರಂಭಿಸಿ ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಐದು ಪ್ರಶ್ನೆಗಳನ್ನು ಕೇಳಿದ್ದೆ. ಅವುಗಳಲ್ಲಿ ಎರಡು ಪ್ರಶ್ನೆಗಳಿಗಷ್ಟೇ ಉತ್ತರಿಸಿರುವ ಸಚಿವರು ಉಳಿದಂತೆ ನೀಡಿರುವ ಉತ್ತರಗಳಿಗೂ ನಮ್ಮ ಪ್ರಶ್ನೆಗಳಿಗೂ ಸಂಬಂಧವೇ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ನೀರಾವರಿ ಯೋಜನೆಗಳು ಹೇಗೆ ಕೇಂದ್ರ ಬಿಜೆಪಿ ಸರ್ಕಾರದ ತಿರಸ್ಕಾರ, ಅವಗಣನೆಯಿಂದಾಗಿ ಧೂಳು ಹಿಡಿಯುತ್ತಿವೆ ಎನ್ನುವುದನ್ನು ಮತ್ತೊಮ್ಮೆ ವಾಸ್ತವಾಂಶಗಳ ಮೂಲಕ ನಿಮ್ಮ ಮುಂದಿರಿಸುತ್ತಿದ್ದೇನೆ. ತಾವು ವಿಷಯವನ್ನು ಸರಿಯಾಗಿ ಗ್ರಹಿಸಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ  ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯದ ಧೋರಣೆ ಮತ್ತು ಉದ್ದೇಶಪೂರ್ವಕವಾದ ಅನ್ಯಾಯವನ್ನು ಸರಿಪಡಿಸುತ್ತಿರಿ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಕೃಷ್ಣಾ ಮತ್ತು ಕಾವೇರಿ ಎಂಬ ಎರಡು ಜೀವನದಿಗಳು ಕರ್ನಾಟಕದ ಎರಡು ಕಣ್ಣುಗಳು. ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕಾಗಿ ಕರ್ನಾಟಕ ರಾಜ್ಯಕ್ಕೆ 130 ಟಿಎಂಸಿ ನೀರು ಹಂಚಿಕೆಯಾಗಿದೆ. ಈ ಪ್ರಮಾಣದ ನೀರನ್ನು ಬಳಕೆಗೆ ಲಭ್ಯವಾಗಿಸಬೇಕೆಂದರೆ ಆಲಮಟ್ಟಿ ಜಲಾಶಯದ ಎತ್ತರವನ್ನು ಸಮುದ್ರ ಮಟ್ಟದಿಂದ ಪ್ರಸಕ್ತ ಇರುವ 519.60 ಅಡಿಯಿಂದ 524.256 ಅಡಿಗಳಿಗೆ ಏರಿಸಬೇಕಾಗಿದೆ. ಯೋಜನೆಯ ಮೂರನೇ ಹಂತದ ಅನುಷ್ಠಾನದಿಂದ ಬರಪೀಡಿತ ಉತ್ತರ ಕರ್ನಾಟಕದ 5.94 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ ಎಂದಿದ್ದಾರೆ.

ವಿಪರ್ಯಾಸವೆಂದರೆ, ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ – 2 ತೀರ್ಪು ಘೋಷಿಸಿ ಒಂದು ದಶಕವೇ ಕಳೆದರೂ ತೀರ್ಪಿನ ಗೆಜೆಟ್‌ ಸೂಚನೆಯನ್ನು ಕೇಂದ್ರ ಸರ್ಕಾರ ಹೊರಡಿಸಿಲ್ಲ. ಇದಕ್ಕಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸೂಕ್ತ ಅರ್ಜಿ ದಾಖಲಿಸುವಂತೆ ರಾಜ್ಯ ಸರ್ಕಾರವು ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದ ಹೊರತಾಗಿಯೂ ಈ ಕುರಿತು ಕೇಂದ್ರ ಮುಂದಾಗಿಲ್ಲ. ಇದು ಯೋಜನೆಯ ಜಾರಿಗೆ ತೊಡಕಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಕಳಸಾ ಮತ್ತು ಬಂಡೂರ ಯೋಜನೆ ವಿಚಾರದಲ್ಲಿಯೂ ಕೂಡ ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ವಿವಿಧ ಅನುಮತಿಗಳನ್ನು ದೊರಕಿಸಿಕೊಡುವಲ್ಲಿ ಕೇಂದ್ರ ಸರ್ಕಾರ ಸೋತಿದೆ. ಅರಣ್ಯ ಮತ್ತು ಪರಿಸರ ಇಲಾಖೆಯಿಂದ ದೊರೆಯಬೇಕಾದ ತಿರುವಳಿ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಅನುಮತಿ, 2006ರ ಇಐಎ ಅಧಿಸೂಚನೆಯಿಂದ ವಿನಾಯಿತಿ, ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಕಳಸಾ ಯೋಜನೆಗೆ ಅಗತ್ಯವಾಗಿರುವ ವನ್ಯಜೀವಿ/ಹುಲಿ ಕಾರಿಡಾರ್ ವಿಚಾರವಾಗಿ ದೊರೆಯಬೇಕಾದ‌ ಅನುಮತಿ, ಭೀಮಗಡ ವನ್ಯಜೀವಿ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತಾದ ವಿಚಾರಗಳು ಕೇಂದ್ರ ಸರ್ಕಾರದ ಕಡೆಯಿಂದ ಬಾಕಿ ಉಳಿದಿವೆ ಎಂದು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಮಧ್ಯ ಕರ್ನಾಟಕದ ಪ್ರಮುಖ ಏತ ನೀರಾವರಿ ಯೋಜನೆಯಾಗಿದ್ದು 29.90 ಟಿಎಂಸಿ ನೀರಿನ ಬಳಕೆಯೊಂದಿಗೆ ಸೂಕ್ಷ್ಮ ನೀರಾವರಿ ಯೋಜನೆ ಮೂಲಕ 2,25,515 ಹೆಕ್ಟೇರ್‌ ಕೃಷಿ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಯೋಜನೆಯನ್ನು ‘ರಾಷ್ಟ್ರಿಯ ಯೋಜನೆ’ ಎಂದು ಘೋಷಿಸಲು ಅಗತ್ಯವಾದ ಎಲ್ಲ ಸಕ್ಷಮ ಪ್ರಾಧಿಕಾರಿಗಳ ಅನುಮತಿ, ಅನುಮೋದನೆಗಳ ಹೊರತಾಗಿಯೂ ಕೇಂದ್ರ ಸರ್ಕಾರವು ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ ಎಂದು ಘೋಷಿಸದೆ ವಿಳಂಬ ಧೋರಣೆ ಅನುಸರಿಸುತ್ತಿದೆ. ಸದರಿ ಯೋಜನೆಗಾಗಿ 2023-24ರ ಕೇಂದ್ರ ಆಯವ್ಯಯದಲ್ಲಿ ರೂ.5,300 ಕೋಟಿ ಸಹಾಯಧನ ಘೋಷಿಸಿರುವುದರ ಹೊರತಾಗಿಯೂ ಈವರೆಗೆ ಯೋಜನೆಗೆ ಯಾವುದೇ ಸಹಾಯಧನವನ್ನು ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷದ ಬಗೆಗಿನ ನಮ್ಮ ಪ್ರಶ್ನೆಗೆ ಉತ್ತರಿಸಿರುವ ಸಚಿವರು ಆ ಯೋಜನೆಯ ಪ್ರಸ್ತಾವವನ್ನು ಸಭೆಯ ಅಜೆಂಡಾದಲ್ಲಿ ಸೇರಿಸಲಾಗಿತ್ತು ಎಂದು ಉತ್ತರಿಸಿದ್ದಾರೆ. ಸಭೆಯ ಅಜೆಂಡಾದಲ್ಲಿ ಸೇರಿಸುವುದಷ್ಟೇ ಪ್ರಧಾನ ಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರ ಕೆಲಸವೇ? ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮಕೈಗೊಳ್ಳುವುದು ಕೂಡಾ ಪ್ರಧಾನಿ ಮತ್ತು ಸಚಿವರ ಕರ್ತವ್ಯ ಅಲ್ಲವೇ? ಈ ಕೆಲಸದಲ್ಲಿ ಇಬ್ಬರೂ ವಿಫಲವಾಗಿದ್ದಾರೆ ಎಂದು ಕನ್ನಡಿಗರಿಗೆ ಅನಿಸಿದರೆ ತಪ್ಪಾದೀತೇ? ಕಾವೇರಿ ಜಲಾನಯನ ಪ್ರದೇಶದಲ್ಲಿನ ಸಂಕಷ್ಟ ಪರಿಸ್ಥಿತಿಯ ನಿವಾರಣೆಗೆ ಮೇಕೆದಾಟು ಯೋಜನೆಯು ದೀರ್ಘಕಾಲೀನ ಶಾಶ್ವತ ಪರಿಹಾರ ಯೋಜನೆಯಾಗಿರುತ್ತದೆ. ಈ ಯೋಜನೆಯನ್ನು CWMA/CWC ಪರಿಗಣಿಸಿ ಅಗತ್ಯ ಅನುಮತಿ ಹಾಗೂ ಸಮ್ಮತಿಗಳನ್ನು ನೀಡುವ ಮೂಲಕ ಬೆಂಗಳೂರು ಮತ್ತು ಸುತ್ತಮುತ್ತಲಿನ ಊರುಗಳ ಕುಡಿಯುವ ನೀರಿನ ಸಮಸ್ಯೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪರಿಹರಿಸುತ್ತದೆ ಎಂದು ನಾನು ನಂಬಿದ್ದೇನೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಆಶ್ರಯ ನಿವೇಶನ ಹಂಚಿಕೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ಕರವೇ ಪ್ರತಿಭಟನೆ

ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ಹಾಗೂ ವಸತಿ ಯೋಜನೆಯಡಿ ಮಂಜೂರಾಗಿರುವ ಸರ್ಕಾರಿ ಜಮೀನಿನಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಗ್ರಾಮ…

2 hours ago

ಜು. 5 ಕ್ಕೆ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ- ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯು ಜುಲೈ 5 ಕ್ಕೆ…

2 hours ago

ರಾಮನಗರ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, 5 ಮಂದಿಗೆ ಗಂಭೀರ ಗಾಯ

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್‌ನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ…

9 hours ago

‘ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ’……..

ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ........ ವೈದ್ಯರ ದಿನದ ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ.…

12 hours ago

ಎತ್ತಿನಹೊಳೆ ಡ್ಯಾಂಗೆ ರೈತರ ವಿರೋಧ: ಕಾಮಗಾರಿ ತಡೆಗೆ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಶಾಸಕ ಧೀರಜ್ ಮುನಿರಾಜ್ ಮನವಿ

ದೊಡ್ಡಬಳ್ಳಾಪುರ: ಜಲಸಂಪನ್ಮೂಲ ಇಲಾಖೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ದಕ್ಷಿಣ ಮತ್ತು…

13 hours ago

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…

1 day ago