Categories: ಲೇಖನ

ನೈಜ ಮಾರ್ಗದರ್ಶಕರ ಕೊರತೆ……… ಮಾದರಿ ವ್ಯಕ್ತಿತ್ವಗಳ ಅವಶ್ಯಕತೆ…..

ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, ಅನಕ್ಷರಸ್ಥ ಮಹಿಳೆಯರು ಇವರುಗಳಿಗೆ
ಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ…….

ಅದರಲ್ಲೂ ಮುಖ್ಯವಾಗಿ 15 ರಿಂದ 35 ವರ್ಷ ವಯಸ್ಸಿನ ಯುವ ಜನಾಂಗ ಈ ವಿಷಯದಲ್ಲಿ ಉತ್ತಮ ಗುಣಮಟ್ಟದ ಕೊರತೆ ಎದುರಿಸುತ್ತಿದೆ.

ಶಿಕ್ಷಣ – ಉದ್ಯೋಗ – ಆರೋಗ್ಯ – ಮದುವೆ – ಕುಟುಂಬದ ನಿರ್ವಹಣೆ ‌- ಸಾಮಾಜಿಕ ಜವಾಬ್ದಾರಿ – ಮಾನವೀಯ ಮೌಲ್ಯಗಳ ನಿರ್ವಹಣೆ – ವೈಯಕ್ತಿಕ ಮಾನಸಿಕ ಒತ್ತಡ ಇವುಗಳಲ್ಲಿ ಸ್ಪಷ್ಟವಾದ ತೀರ್ಮಾನ ಕೈಗೊಳ್ಳುವಲ್ಲಿ ಯುವ ಜನಾಂಗ ವಿಫಲವಾಗುತ್ತಿದೆ.

ಕೆಲವು ಕಾರ್ಪೊರೇಟ್ ಸಂಸ್ಥೆಗಳು ವ್ಯಕ್ತಿತ್ವ ವಿಕಸನದ ಕೆಲವು ಸಲಹಾ ಕೇಂದ್ರಗಳನ್ನು ಅಲ್ಲಲ್ಲಿ ‌ಸ್ಥಾಪಿಸಿವೆ. ಆದರೆ ಅವುಗಳು ಸಂಪೂರ್ಣ ವಾಣಿಜ್ಯೀಕರಣವಾಗಿವೆ ಮತ್ತು ಅದರಲ್ಲಿ ಭಾರತೀಯ ಸಂಸ್ಕೃತಿಯ – ಈ ಮಣ್ಣಿನ ಮೂಲದ್ರವ್ಯವೇ ಇರುವುದಿಲ್ಲ.

ಎಸ್ಎಸ್ಎಲ್ ಸಿ , ಪಿಯುಸಿ ನಂತರದ ಶಿಕ್ಷಣದ ಆಯ್ಕೆಗಳ ಬಗ್ಗೆ ಪೋಷಕರಲ್ಲಿ ಆತಂಕ ಮತ್ತು ಗೊಂದಲ ಉಂಟಾಗುತ್ತದೆ. ಮಗ ಅಥವಾ ಮಗಳು ತೆಗೆದುಕೊಳ್ಳುವ ಅಂಕಗಳು, ಆ ಮಕ್ಕಳ ಆಸಕ್ತಿ, ಅದಕ್ಕಿರುವ ಅವಕಾಶ ಯಾವುದನ್ನೂ ಸರಿಯಾಗಿ ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಪರೀಕ್ಷೆಗಳಲ್ಲಿ ಅನುತ್ತೀರ್ಣವಾದರೆ ಆಗ ಇರುವ ಅವಕಾಶದ ಬಗ್ಗೆಯೂ ಮಾಹಿತಿ ಇರುವುದಿಲ್ಲ. ಆ ಮಕ್ಕಳ ಬದುಕೇ ಮುಗಿದು ಹೋದಂತೆ ಆಡುತ್ತಾರೆ.

ಆರೋಗ್ಯದಲ್ಲಿ ಆಗುವ ಬದಲಾವಣೆಗಳು – ಅದರ ಚಿಕಿತ್ಸಾ ವಿಧಾನಗಳ ಬಗ್ಗೆಯೂ ಸರಿಯಾದ ಗುಣಮಟ್ಟದ ಮಾರ್ಗದರ್ಶನ ದೊರಕದೆ ಮಾಧ್ಯಮಗಳ ಜಾಹೀರಾತುಗಳಿಗೆ ಮರುಳಾಗುವುದನ್ನು ಗಮನಿಸಬಹುದು.

ಉದ್ಯೋಗದ ಆಯ್ಕೆ, ತದನಂತರ ಗಂಡ ಅಥವಾ ಹೆಂಡತಿಯ ಆಯ್ಕೆ, ಆ ಸಂದರ್ಭದಲ್ಲಿ ಪೋಷಕರ ಜವಾಬ್ದಾರಿ, ಸಾಮಾನ್ಯ ಕೌಟುಂಬಿಕ ಕಲಹಗಳ ನಿರ್ವಹಣೆ ಈ ವಿಷಯಗಳಲ್ಲಿ ತುಂಬಾ ಎಡುವುತ್ತಿದ್ದಾರೆ. ಪೋಲೀಸು, ಕೋರ್ಟು, ಕಚೇರಿ ಎಂದು ಅಲೆದಾಡುತ್ತಾ ಸಣ್ಣ ವಿಷಯಗಳಿಗೂ ಒತ್ತಡವನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಿದ್ದಾರೆ.

ವ್ಯಾಪಾರ, ವ್ಯವಹಾರ, ಸಂಗೀತ, ಸಾಹಿತ್ಯ, ಕಲೆ, ಕ್ರೀಡೆ, ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಆಸಕ್ತಿ ಇರುವವರು, ಬೆರಳೆಣಿಕೆಯಷ್ಟು ಯಶಸ್ವಿ ಜನರನ್ನು ಅನುಕರಣೆ ಮಾಡಲು ಹೋಗಿ ಸರಿಯಾದ ಮಾರ್ಗದರ್ಶವಿಲ್ಲದೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.
ಜಾಗತೀಕರಣದ ಈ ಸಂದರ್ಭದಲ್ಲಿ ಬದಲಾದ ವ್ಯವಸ್ಥೆಯನ್ನು ಗುರುತಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ.

ಮೊದಲಿದ್ದ ಹಿತೈಷಿಗಳ – ಗುರು ಹಿರಿಯರ ಮಾರ್ಗದರ್ಶನಕ್ಕೆ ಪರ್ಯಾಯವಾಗಿ ಈಗ ಇಂಟರ್ ನೆಟ್ ನಲ್ಲಿ ಎಲ್ಲಾ ಮಾಹಿತಿಗಳೂ ಸಿಗುತ್ತಿವೆ. ಕೃತಕ ಬುದ್ಧಿಮತ್ತೆಯ ಅಭಿವೃದ್ಧಿಯೂ ಆಗಿದೆ. ಇದು ಮೇಲ್ನೋಟಕ್ಕೆ ಉತ್ತಮ ಬೆಳವಣಿಗೆ. ಆದರೆ ನಿಜವಾದ ಅಂತಃಸತ್ವ ಇಲ್ಲದ ಯಾಂತ್ರಿಕ ಮತ್ತು ನಿರ್ಜೀವ ಸ್ಥಿತಿಯತ್ತ ಯುವ ಜನಾಂಗವನ್ನು ಕೊಂಡೊಯ್ಯುತ್ತಿದೆ.

ಮಾಹಿತಿಯೇ ಜ್ಞಾನ ಎಂಬ ತಪ್ಪು ಅಭಿಪ್ರಾಯ ಸಾಕಷ್ಟು ಜನರಲ್ಲಿ ಮನೆ ಮಾಡಿದೆ. ಇದು ವ್ಯಕ್ತಿಯ ಕ್ರಿಯಾತ್ಮಕತೆಯನ್ನು ಕೊಲ್ಲುತ್ತಿದೆ. ಹರಿಯುವ ನೀರಿನಂತೆ ಜ್ಞಾನವು ಸಹ ಸದಾ ಚಲಿಸುತ್ತಲೇ ಇರುತ್ತದೆ. ಅದು ನಿಂತ ನೀರಾದಾಗ ಕೊಳೆಯಲಾರಂಭಿಸುತ್ತದೆ. ನಮ್ಮೊಳಗಿನ ಅಜ್ಞಾನವನ್ನು ಹುಡುಕಿ ಹೋಗಲಾಡಿಸುವುದು ಸಹ ಜ್ಞಾನದ ಒಂದು ಭಾಗ. ಅದರ ಆಳಕ್ಕೆ ಇಳಿಯುವ ತಾಳ್ಮೆ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ವಾತಾವರಣ ಇಲ್ಲವಾಗಿದೆ.

ಇದು ಅಪಾಯಕಾರಿ ಎನ್ನುವುದಕ್ಕಿಂತಲೂ ಇದೊಂದು ಸವಾಲು ಎಂದು ಪರಿಗಣಿಸಿ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುವ ಮತ್ತು ಆ ಮಕ್ಕಳಿಗೆ ಪ್ರಬುದ್ದತೆಯ ಗುಣಮಟ್ಟದ ಮಾರ್ಗದರ್ಶನ ಸಿಗುವಂತೆ ಮಾಡುವ ಜವಾಬ್ದಾರಿ ಹಿರಿಯರು ತೆಗೆದುಕೊಳ್ಳಬೇಕಾಗಿದೆ.

ಏಕೆಂದರೆ………

ಕಳೆದು ಹೋಗಿವೆ ಮಕ್ಕಳು ಈಗಾಗಲೇ………

ಶಾಲೆಯ ಪುಸ್ತಕಗಳಲ್ಲಿ,
ಅಂಕಗಳ ಪೈಪೋಟಿಯಲ್ಲಿ,
ಮನೆಯ ಟಿವಿ, ಮೊಬೈಲ್, ವಿಡಿಯೋ ಗೇಮುಗಳಲ್ಲಿ,

ಕಳೆದು ಹೋಗಿವೆ ಮಕ್ಕಳು ಈಗಾಗಲೇ…………..

ಹಿರಿಯರ ಹಣದ ‌ದಾಹದಲ್ಲಿ,
ಪೋಷಕರ ಸಮಯದ ಅಭಾವದಲ್ಲಿ,

ಕಳೆದು ಹೋಗಿವೆ ಮಕ್ಕಳು
ಈಗಾಗಲೇ ‌…………..

ವಿಷಪೂರಿತ ಕಲಬೆರಕೆ ಆಹಾರ ನೀರು ಗಾಳಿ ಸೇವಿಸುವ ಪರಿಸರದಲ್ಲಿ,
ಅಸಹನೆ ಆತಂಕ ಅನಾಹುತಕಾರಿ ವಾತಾವರಣದಲ್ಲಿ,

ಕಳೆದು ಹೋಗಿವೆ ಮಕ್ಕಳು ಈಗಾಗಲೇ……………..

ಮೌಲ್ಯಗಳು, ಸಂಬಂಧಗಳು ಶಿಥಿಲವಾದ ಕಾಲದಲ್ಲಿ,
ಭಾವನೆಗಳು, ಆತ್ಮೀಯ ಒಡನಾಟಗಳು, ಸಂಸ್ಕಾರಗಳು ಮರೆಯಾದ ಸಮಯದಲ್ಲಿ,

ಕಳೆದು ಹೋಗಿವೆ ಮಕ್ಕಳು ಈಗಾಗಲೇ……………

ಭಯೋತ್ಪಾದಕರ, ಮತಾಂಧರ, ಜಾತಿವಾದಿಗಳ ವಿಷ ಚಕ್ರದಲ್ಲಿ,
ಭ್ರಷ್ಟ ರಾಜಕೀಯ, ಆಡಳಿತಶಾಹಿ ಮೌಢ್ಯ ತುಂಬಿದ ಮನಸ್ಸುಗಳಲ್ಲಿ.

ಇಂತಹ ಸಂದರ್ಭಗಳಲ್ಲಿ, ಹೀಗೆ ನಮ್ಮ ಕಣ್ಣ ಮುಂದೆಯೇ ಮಕ್ಕಳು ಕಳೆದು ಹೋಗುತ್ತಿರುವಾಗ ಯಾರೋ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಭ್ರಮೆಗೆ ಒಳಗಾಗಿ ಆತಂಕಕ್ಕೆ ಒಳಗಾಗಿದ್ದೇವೆ.

ಕಳ್ಳರ ಸಂತೆಯಲ್ಲಿ ಮಕ್ಕಳನ್ನು ಆಟವಾಡಲು ಬಿಟ್ಟು, ಅಜಾಗರೂಕತೆಯಿಂದ – ಬೇಜವಾಬ್ದಾರಿಯಿಂದ –
ದುರಾಸೆಯಿಂದ –
ಮತಿಹೀನತೆಯಿಂದ ವರ್ತಿಸಿ,
ಈಗ ಮಕ್ಕಳ ಕಳ್ಳರೆಂದು ಎಲ್ಲರನ್ನೂ ಅನುಮಾನಿಸುತ್ತಾ ಭಯಗೊಂಡಿದ್ದೇವೆ.

ವ್ಯವಸ್ಥೆಯೇ ಹಾದಿ ತಪ್ಪಿದಾಗ ನಾವು, ನೀವು, ಅವರು, ಇವರು ಎಲ್ಲರೂ ಕಳ್ಳರೇ. ಎಲ್ಲರ ಬಗ್ಗೆಯೂ ಅನುಮಾನವೇ.
ಎಲ್ಲವೂ ಆತಂಕಕಾರಿಯೇ .

ಬದಲಾಗಬೇಕಿದೆ – ಬದಲಾಗೋಣ,
ಹೊಸ ನಾಗರಿಕ ಸಮಾಜಕ್ಕೆ ಮುನ್ನುಡಿ ಬರೆಯೋಣ.
ಕಳೆದು ಹೋದ ಮಕ್ಕಳನ್ನು ಹುಡುಕಿ ತರೋಣ.
ನೆಮ್ಮದಿಯ ಸಮಾಜ ಕಟ್ಟೋಣ.

ಆಗ ಮುಂದಿನ ಪೀಳಿಗೆ ಉತ್ತಮ ಗುಣಮಟ್ಟದ ಜೀವನ ಶೈಲಿಯನ್ನು ರೂಪಿಸಿಕೊಳ್ಳಲು ಸಹಾಯವಾಗುತ್ತದೆ.

ಆ ದಿನಗಳ ನಿರೀಕ್ಷೆಯಲ್ಲಿ…………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

6 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

10 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

17 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

18 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago