
ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೊಂದಾಯಿತ ಆಲ್ ಇಂಡಿಯಾ ಜನರಕ್ಷಾ ಪಾರ್ಟಿ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಅಖಿಲ ಭಾರತ ಜನರಕ್ಷಾ ಪಕ್ಷವು ರಾಜಕೀಯ ಪಕ್ಷವಾಗಿ ಈಗಾಗಲೇ ರಿಜಿಸ್ಟರ್ ಮಾಡಿಕೊಂಡಿದ್ದು ಆಯೋಗದ ದಾಖಲೆಗಳ ಪ್ರಕಾರ ಅಖಿಲ ಭಾರತ ಜನರಕ್ಷಾ ಪಕ್ಷವು ಮೂರು ವರ್ಷಗಳಿಂದ ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ನಮೂನೆ ಪತ್ರದ ಮೂಲಕ ಸಲ್ಲಿಸಿರುವುದಿಲ್ಲ.

ನೋಂದಾಯಿತ ಮಾನ್ಯತೆಯನ್ನು ಪಡೆಯದ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸಂವಿಧಾನದ 324ನೇ ವಿಧಿಯಡಿ ಜನ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 29ಎ ನಿಬಂಧನೆಗಳ ಅಡಿಯಲ್ಲಿ ಪಕ್ಷಗಳ ನೋಂದಣಿಯನ್ನು ಏಕೆ ರದ್ದು ಮಾಡಬಾರದು ಎಂದು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಮಾಡಿದೆ.
ನೋಟಿಸ್ ನ ಅನುಸಾರ ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರ ಸರಿಯಾಗಿ ಮಾಹಿತಿಯನ್ನೊಳಗೊಂಡ ಅಫಿಡೆವಿಟ್ನೊಂದಿಗೆ ಹಾಗೂ ಪಕ್ಷವು ಪ್ರಸ್ತಾವಿಸುವ ಎಲ್ಲಾ ಪೋಷಕ ದಾಖಲೆಗಳನ್ನು ಅಕ್ಟೋಬರ್ 14 ರೊಳಗೆ ಚುನಾವಣಾ ಆಯೋಗಕ್ಕೆ ತಲುಪಿಸಬೇಕು. ಹಾಗೇ ಪಕ್ಷದ ವಿಚಾರಣೆಯು ಅದೇ ದಿನದಂದು ನಿಗದಿಪಡಿಸಿದ್ದು, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಮುಖಂಡರು ಕಡ್ಡಾಯವಾಗಿ ಹಾಜರಿರಲು ಚುನಾವಣಾ ಆಯೋಗವು ತಿಳಿಸಿದೆ.