ಪಕ್ಷ ರಾಜಕಾರಣ ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಿ- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಲ್ಲಿ‌ ಸಿಎಂ ಸಿದ್ದರಾಮಯ್ಯ ಮನವಿ

ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ ಎಂದು‌ ಹೇಳಿದ್ದಾರೆ.

ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳುಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ ಎಂದರು.

ನೀರಾವರಿ ವಿಚಾರದಲ್ಲಿ ನ್ಯಾಯ ಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ಸನ್ಮಾನ್ಯ ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ತಿಳಿದುಕೊಂಡಿದ್ದೇನೆ ಎಂದಿ ತಿಳಿಸಿದರು.

ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ (ಡಿಪಿಆರ್ )ಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ 26,925 ಹೆಕ್ಟೇರ್  ಅರಣ್ಯಪ್ರದೇಶದ ಸ್ವಾಧೀನ ಪ್ರಕ್ರಿಯೆ ಗೋವಾ ರಾಜ್ಯದ ಆಕ್ಷೇಪದ ಕಾರಣದಿಂದಾಗಿ ಕುಂಟುತ್ತಾ ಸಾಗಿದೆ. ಪ್ರಸ್ತುತ ಈ ಪ್ರಕ್ರಿಯೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (ಎನ್ ಬಿಡಬ್ಯುಎಲ್ ) ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ)ದ ಪರಿಶೀಲನೆಯಲ್ಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಅನುಮೋದನೆ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡಿರುವ ಕಾರಣ ಶೀಘ್ರವಾಗಿ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಾಗಿದೆ ಎಂದರು.

ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ‍್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ ಎಂದು ಹೇಳಿದರು.

ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ. ಈ ನೀರಿನ ಪಾಲಿನಲ್ಲಿ 130 ಟಿಎಂಸಿಯನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಗೆ ನೀರುಣಿಸುವ ರೂ.51,148 ಸಾವಿರ ವೆಚ್ಚದ ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಆದರೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರತಿವಾದಿ ರಾಜ್ಯಗಳ ಆಕ್ಷೇಪಣಾ ಅರ್ಜಿಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ನಿರಾಕರಿಸುತ್ತಾ ಬಂದಿದೆ. ಈ ಯೋಜನೆಯ ಅನಿವಾರ್ಯತೆಯನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಿದರೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂಬ ಪ್ರಸ್ತಾವವನ್ನು ಸಲ್ಲಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಈ ಘೋಷಣೆಯ ಪ್ರಸ್ತಾವಕ್ಕೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಆದರೆ ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಾ ಕೂತಿದೆ ಎಂದರು.

ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ  ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯ ವಿವರಗಳೆಲ್ಲ ನಿಮಗೆ ಬಾಯಿಪಾಠದಲ್ಲಿರಬಹುದು. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ದೊರಕಿಸಿಕೊಟ್ಟರೆ ಬೆಂಗಳೂರು ನಿವಾಸಿಗಳು ಸದಾ ನಿಮಗೆ ಋಣಿಯಾಗಿರುತ್ತಾರೆ ಎಂದಿದ್ದಾರೆ.

ಕೃಷ್ಣಾ ಮತ್ತು ಕಾವೇರಿ ನದಿಗಳ ಜೋಡಣೆಯ ನೀರಾವರಿ ಯೋಜನೆಯ ಬಗ್ಗೆ ನಿಮ್ಮ ಕಳಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಈ ವಿಷಯದಲ್ಲಿ ನೀವು ನಡೆಸುವ ಹೋರಾಟಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಮಾತ್ರವಲ್ಲ ಸಮಸ್ತ ಕರ್ನಾಟಕ ನಿಮ್ಮ ಜೊತೆ ಇರುತ್ತದೆ. ಆದರೆ ಹೊಸ ನೀರಾವರಿ ಯೋಜನೆಗಳನ್ನು ಪ್ರಾರಂಭಿಸುವ ಮೊದಲು ಅಪೂರ್ಣ ಸ್ಥಿತಿಯಲ್ಲಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿಕೊಳ‍್ಳುತ್ತಿದ್ದೇನೆ ಎಂದರು.

ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯನ್ನು ಸದ್ಯ ನೀರಾವರಿ ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸುತ್ತಿದ್ದೇನೆ. ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ. ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್ ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು ಎಂದು ಹೇಳಿದರು.

ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ತಿಳಿಸಿದ್ದಾರೆ.

ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ ಎಂದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

5 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

10 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago