ಪತ್ನಿ‌ ಕೊಂದು ಮಿಸ್ಸಿಂಗ್ ಕಂಪ್ಲೇಂಟ್ ಕೊಟ್ಟ ಭೂಪ: ಆ ಒಂದು ಕುರುಹುವಿನಿಂದ ಸಿಕ್ಕಿಬಿದ್ದ ಹಂತಕ ಪತಿ.. ಇಲ್ಲಿದೆ ಈ ಕುರಿತ ಒಂದು ಸ್ಟೋರಿ‌…

ದೊಡ್ಡಬಳ್ಳಾಪುರ: ಅನಾಥ ಯುವತಿಗೆ ಬಾಳು ಕೊಡುವುದಾಗಿ ಮದುವೆಯಾಗಿದ್ದ ಆ ಭೂಪ. ಆದರೆ, ಪರಸ್ತ್ರೀ ವ್ಯಾಮೋಹ ಅನಾಥೆಯ ಎರಡು ವರ್ಷದ ದಾಂಪತ್ಯಕ್ಕೆ ಹುಳಿ ಹಿಂಡಿ, ಗೃಹಿಣಿಯ ಸಾವಿಗೆ ಮುನ್ನುಡಿ ಬರೆಯಿತು.

ಕರೇನಹಳ್ಳಿಯ ನಿವಾಸಿ ವೀಣಾ ತನ್ನ ಪತಿಯಿಂದಲೇ ದಾರುಣವಾಗಿ ಹತ್ಯೆಗೀಡಾದ ದುರ್ದೈವಿ. ಪತಿ‌ ರವಿಚಂದ್ರನೇ ಹಂತಕ.

ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ..?

ವೀಣಾ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ‌ ಮಾಡುತ್ತಿದ್ದರು. ಏ.21 ರಂದು ತನ್ನ ಪತ್ನಿ ಕೆಲಸಕ್ಕೆ ಹೋದವಳು ವಾಪಸ್ ಬರಲಿಲ್ಲ ಎಂದು ಹೇಳಿ ಪತಿ ರವಿಚಂದ್ರ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ. ಮರುದಿನ ಬಂದು ಮಹಿಳಾ ಠಾಣೆಗೆ ದೂರು ನೀಡುವಂತೆ ಪೊಲೀಸರು ತಿಳಿಸಿದ್ದರು. ಆದರೆ, ರವಿಚಂದ್ರ ಏ.25 ರಂದು ಬಂದು ದೂರು ದಾಖಲಿಸಿದ್ದ.

ಇದಾದ ಒಂದು ವಾರಕ್ಕೆ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿಯ ಅರಣ್ಯ ಪ್ರದೇಶದಲ್ಲಿ  ಸುಟ್ಟು ಕರಕಲಾಗಿರುವ ಅಪರಿಚಿತ ಮಹಿಳೆಯ ಶವ ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಸಾದಿಕ್ ಪಾಷ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಯಾವುದೇ ಸಾಕ್ಷ್ಯ‌ ಸಿಗದಂತೆ ಮೃತದೇಹ ಸುಟ್ಟು ಹಾಕಿದ್ದರಿಂದ ತನಿಖೆ ಸವಾಲಾಗಿ ಪರಿಣಮಿಸಿತ್ತು.

ತನಿಖೆ ಆರಂಭಿಸಿದ ಪೊಲೀಸರು ವಿವಿಧ ಠಾಣೆಗಳಲ್ಲಿ ದಾಖಲಾದ ನಾಪತ್ತೆಯಾದ ಪ್ರಕರಣಗಳನ್ನು ಪರಿಶೀಲಿಸಿದಾಗ ಏಪ್ರಿಲ್ 25 ರಂದು ರವಿಚಂದ್ರ ಎಂಬುವರು ನೀಡಿದ್ದ ದೂರು ಗಮನಕ್ಕೆ ಬಂದಿದೆ.

ಅಪರಿಚಿತ‌ ಮಹಿಳೆಯ ಮೃತದೇಹ ಸಿಕ್ಕ ಜಾಗದಲ್ಲಿ ದೊರೆತ ಕಾಲುಂಗುರ, ಕಿವಿ ಓಲೆ, ಕಾಲ್ಗೆಜ್ಜೆಯನ್ನು ನಾಪತ್ತೆಯಾದ ಮಹಿಳೆಯ‌ ಸಂಬಂಧಿಕರಿಗೆ ತೋರಿಸಿದಾಗ ಗುರುತು ಪತ್ತೆಯಾಯಿತು. ನಂತರ ಮೃತಳ ಗಂಡನನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಾಯ್ಬಿಟ್ಟ ಎಂದು ಇನ್ ಸ್ಪೆಕ್ಟರ್ ಸಾದಿಕ್‌ ಪಾಷಾ ವಿವರಿಸಿದರು.

ಪರಸ್ತ್ರೀ ಜೊತೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ

ಆರೋಪಿ ರವಿಚಂದ್ರ ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದ ವಿಷಯ ವೀಣಾಳಿಗೆ ಗೊತ್ತಾಗಿ ನಿತ್ಯ ಗಲಾಟೆ ನಡೆಯುತ್ತಿತ್ತು. ಆದರೆ, ಆಂಟಿಯನ್ನು ಬಿಡಲು ಒಲ್ಲದ ರವಿಚಂದ್ರ, ಮಧ್ಯರಾತ್ರಿ ಹೆಂಡತಿ ಮಲಗಿದ‌ ಮೇಲೆ ರೂಮಿಗೆ ಬೀಗ ಹಾಕಿಕೊಂಡು ಆಂಟಿ ಮನೆ ಸೇರಿಕೊಳ್ಳುತ್ತಿದ್ದ. ಈ ಕುರಿತು ಹಲವಾರು ಬಾರಿ ನ್ಯಾಯ ಪಂಚಾಯಿತಿ ಮಾಡಿ ಗಂಡನಿಗೆ ಬುದ್ಧಿವಾದ ಹೇಳಿದರೂ ಉಪಯೋಗವಾಗಲಿಲ್ಲ. ಇದನ್ನು ಹೀಗೆ ಬಿಟ್ಟರೆ ನನಗೆ ತೊಂದರೆ ಎಂದು ಭಾವಿಸಿ ಹೆಂಡತಿಯನ್ನು ಮುಗಿಸಲು ರವಿ ಸಂಚು ರೂಪಿಸಿದ್ದ.

ಏಪ್ರಿಲ್ 21 ರಂದು ಆಕೆ ಕೆಲಸ ಮಾಡುತ್ತಿದ್ದ ಗಾರ್ಮೆಂಟ್ಸ್ ಫ್ಯಾಕ್ಟರಿ ಹೋಗಿ, ಕೆಲಸ ಬಿಟ್ಟ ನಂತರ ಹೆಂಡತಿಯನ್ನು ಬೈಕ್ ನಲ್ಲಿ ಜೊತೆಯಾಗಿ ಕರೆದುಕೊಂಡು ತೂಬಗೆರೆ ಸಮೀಪದ ನಾರಸಿಂಹನಹಳ್ಳಿಯ ಅರಣ್ಯ ಪ್ರದೇಶಕ್ಕೆ ಹೋಗಿದ್ದ. ಅಲ್ಲಿ ಕೆಲಹೊತ್ತು ಇಬ್ಬರ ನಡುವೆ ಮಾತುಕತೆ, ಗಲಾಟೆ ನಡೆದಿದೆ. ಹೆಂಡತಿ ತನ್ನ ಮಾತು ಕೇಳದಿದ್ದಾಗ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಸಾಕ್ಷಿ ನಾಶ ಮಾಡಲು ಬೈಕಿನಿಂದ ಪೆಟ್ರೋಲ್ ತೆಗೆದು ಶವವನ್ನು ಸುಟ್ಟುಹಾಕಿದ್ದಾನೆ.

ಅಂದು ರಾತ್ರಿ ಮನೆಗೆ ಬಂದವನು ತನಗೇನು ಗೊತ್ತೇ ಇಲ್ಲ ಎಂಬಂತೆ, ಅಕ್ಕಪಕ್ಕದ ಮನೆಯ ಬಳಿ ಹೋಗಿ ವೀಣಾ ಇದ್ದಾಳಾ ಎಂದು ಕೇಳಿದ್ದಾನೆ, ರಾತ್ರಿ 10 ಗಂಟೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹೋಗಿ ಹೆಂಡತಿ ಕಾಣೆಯಾಗಿರುವ ಬಗ್ಗೆ ದೂರು ನೀಡಲು ಬಂದಿದ್ದ. ಗ್ರಾಮಾಂತರ ಠಾಣೆ ಪೊಲೀಸರು ಮಹಿಳಾ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದರು.

ಗಂಡನಿಗೆ ಹರ್ನಿಯಾ ಆಪರೇಷನ್

ಕೊಲೆ ಆರೋಪಿಗೆ ಕೆಲ ದಿನಗಳ ಹಿಂದೆ ಹರ್ನಿಯಾ ಆಪರೇಷನ್ ಆಗಿತ್ತು, ಲೈಂಗಿಕ‌ ಕ್ರಿಯೆಯಲ್ಲಿ ತೊಡಗಬಾರದು ಎಂದು ವೈದ್ಯರು ಸಲಹೆ ನೀಡಿದ್ದರು. ಆಗ ತನ್ನ ಹೆಂಡತಿ ಮೇಲೆ ಸದಾ ಅನುಮಾನ ಪಡುತ್ತಿದ್ದ. ಹೆಂಡತಿಯ ಫೋನ್ ಪರಿಶೀಲನೆ, ಆಕೆಯ ಚಲನವಲನದ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದ. ಆದರೆ ತಾನು‌ ಮಾತ್ರ ಬೇರೊಬ್ಬ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ, ಈತನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಲಾರಿ ಡ್ರೈವರ್ ಆಗಿದ್ದ. ಒಂದೆರಡು ತಿಂಗಳು ಮನೆಯತ್ತ ಬರುತ್ತಿರಲಿಲ್ಲ. ಇದೇ ಅವಕಾಶಕ್ಕಾಗಿ ಕಾದು ಆಕೆಯೊಂದಿಗೆ ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದ.

ಮರ್ಯಾದೆಗೆ ಹೆದರಿ ಕಲ್ಪನಾ ಆತ್ಮಹತ್ಯೆ: 

ವೀಣಾ ಕೊಲೆ ಆರೋಪದಲ್ಲಿ ರವಿಯನ್ನು ಬಂಧನ ಮಾಡಿರುವ ವಿಚಾರ ತಿಳಿದು ಈತನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಕರೇನಹಳ್ಳಿ ನಿವಾಸಿ ಕಲ್ಪನಾ ಕೂಡ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತನ ಕಾಮದ ತೀಟೆಗೆ ಇಬ್ಬರು ಮಹಿಳೆಯರ ದಾರುಣ ಸಾವಾಗಿದೆ. ಇಬ್ಬರು ಮಹಿಳೆಯರಿಗೆ ಒಂದೊಂದು ಮಗು ಇತ್ತು, ಆ ಮಕ್ಕಳು ತಾಯಂದಿರು ಇಲ್ಲದೆ ತಬ್ಬಲಿಗಳಾಗಿವೆ.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

56 minutes ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

11 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

12 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

21 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago