ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025- ಪ.ಜಾತಿ ಒಳಮೀಸಲಾತಿ ಸಮೀಕ್ಷೆಗೆ ಸ್ಪಷ್ಟ ದತ್ತಾಂಶ ನೀಡಿ ಸಹಕರಿಸಿ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯು ಇಂದಿನಿಂದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ಅವರಿಗೆ ಸ್ಪಷ್ಟ ದತ್ತಾಂಶ ನೀಡುವ ಮೂಲಕ ಸಮೀಕ್ಷೆಗೆ ಸಹಕರಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಚರ್ಚಿಸಲು ದಲಿತಪರ, ಪ್ರಗತಿ ಸಂಘಟನೆಗಳಿಗೆ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿ

ಪರಿಶಿಷ್ಟ ಜಾತಿಗಳನ್ನು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ನಡೆಸುತ್ತಿದೆ. ಹಾಗಾಗಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬಗಳು ತಮ್ಮ ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ನೊಂದಿಗೆ ಅವರು ಕೇಳುವ ಪ್ರಶ್ನೆಗಳಿಗೆ ಸ್ಪಷ್ಟ ದತ್ತಾಂಶ ನೀಡಬೇಕು.

ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲಾಗುತ್ತಿದೆ. ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸೇರಿದಂತೆ ಉಪಜಾತಿಗಳ ವೈಜ್ಞಾನಿಕ ಮಾಹಿತಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದರು.

*ಮೂರು ಹಂತದಲ್ಲಿ ವೈಜ್ಞಾನಿಕ ಸಮೀಕ್ಷೆ*

ಗಣತಿದಾರರು ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವರು. ಜಿಲ್ಲೆಯಲ್ಲಿ ಸಮೀಕ್ಷೆಗಾಗಿಯೇ 1141 ಶಿಕ್ಷಕರನ್ನು ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರುತ್ತಾರೆ. ಎಲ್ಲ ಗಣತಿದಾರರಿಗೆ ತರಬೇತಿಯನ್ನು ನೀಡಲಾಗಿದೆ. ಎರಡನೇ ಹಂತದಲ್ಲಿ ಮೇ 19 ರಿಂದ 21 ರವರೆಗೆ ವಿಶೇಷ ಶಿಬಿರಗಳಲ್ಲಿ ಮತಗಟ್ಟೆವಾರು ಸಮೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು. ಮೂರನೇ ಹಂತದಲ್ಲಿ ಮೇ 19 ರಿಂದ 22 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು.

*ಮೊಬೈಲ್ ಆಪ್ ಮೂಲಕ ಸಮೀಕ್ಷೆ*

ಮೊಬೈಲ್ ಆಪ್ ಮೂಲಕ ಆನ್ಲೈನ್ ಸಮೀಕ್ಷೆ ನಡೆಸಲಾಗುವುದು. ಗಣತಿದಾರರು ಬೆಳಗ್ಗೆ 6:30 ರಿಂದ ಸಂಜೆ 6:30 ರವರೆಗೆ ಸಮೀಕ್ಷೆ ನಡೆಸುವರು. ಆ ಸಂದರ್ಭದಲ್ಲಿ ಮಾತ್ರ ಮೊಬೈಲ್ ಆಪ್ ಗೆ ಲಾಗಿನ್ ಸಿಗಲಿದೆ.

ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯ ಎಲ್ಲರೂ ಪೂರ್ಣವಾಗಿ ತೊಡಗಿಸಿಕೊಂಡು ಗಣತಿದಾರರು ಕೇಳುವಂತಹ ದತ್ತಾಂಶಕ್ಕೆ ಸ್ಪಷ್ಟ ಮಾಹಿತಿ ಕೊಡಿ. ಸಮೀಕ್ಷೆಯಲ್ಲಿ ಸಂಘಟನೆಗಳ ಪಾತ್ರ ಬಹಳ ಮುಖ್ಯವಾಗಿದ್ದು, ಆಯಾ ಪ್ರಾಂತ್ಯದ, ವಾರ್ಡ್ ಗಳಲ್ಲಿ ಪ.ಜಾತಿ ಜನರಿಗೆ ಸಮೀಕ್ಷೆ ಬಗ್ಗೆ ವಿವರಿಸಿ ಗಣತಿದಾರರು ಮನೆ ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಸಮೀಕ್ಷೆಗೆ ಸ್ಪಷ್ಟ ಮಾಹಿತಿ ನೀಡಲು ಸಂಘಟನೆಗಳ ಮುಖಂಡರನ್ನು ಕೋರಿದರು.

*ಗೊಂದಲಗಳಿಗೆ ಕಿವಿ ಕೊಡಬೇಡಿ: ಸಿಇಒ ಡಾ.ಕೆ.ಎನ್ ಅನುರಾಧಾ*

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ಅವರು ಮಾತನಾಡಿ, ಸಮೀಕ್ಷೆಯಲ್ಲಿ ಮನೆ, ಕಾರು, ಬೈಕ್, ಜಮೀನು, ಉದ್ಯೋಗದ ಬಗ್ಗೆ ಮಾಹಿತಿ ನೀಡಿದರೆ ಸರ್ಕಾರದಿಂದ ಸಿಗುವ ಸೌಲಭ್ಯ ನಿಲ್ಲಿಸುತ್ತಾರೆ ಎನ್ನುವ ತಪ್ಪು ತಿಳುವಳಿಕೆ ಇದೆ. ಸಮೀಕ್ಷೆಗೆ ಮಾಹಿತಿ ನೀಡುವುದರಿಂದ ಯಾವುದೇ ರೀತಿಯ ಸೌಲಭ್ಯ ಕಡಿತಗೊಳಿಸುವುದಿಲ್ಲ. ಹಾಗಾಗಿ ಯಾವುದೇ ಗೊಂದಲಕ್ಕೆ ಈಡಾಗದೆ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡಿ ಎಂದರು. ಈ ಒಳ ಮೀಸಲಾತಿ ಸಮೀಕ್ಷೆಯು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅಭಿವೃದ್ಧಿಗೆ ಮುನ್ನುಡಿ ಆಗಿದ್ದು, ಇದೊಂದು ಮಹತ್ವದ್ದಾಗಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ ಸಾರ್ವಜನಿಕರು, ಮುಖಂಡರು, ಸಂಘಟನೆಗಳು ಸಹಕಾರ ನೀಡಿ ಸಮೀಕ್ಷೆಯನ್ನು ಯಶಸ್ಸ್ವಿಗೊಳಿಸಬೇಕು ಎಂದರು.

*ಸಹಾಯವಾಣಿ ಸಂಪರ್ಕಿಸಿ*

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ರಾಜ್ಯ ಮಟ್ಟದ ಸಮಾಜ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ:9482300400 ಹಾಗೂ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್, ರವರ ವಿಚಾರಣಾ ಆಯೋಗ ಸಹಾಯವಾಣಿ :9481359000 ಸಂಪರ್ಕಿಸಬಹುದಾಗಿದೆ.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

59 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago