ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಬಿಜೆಪಿಯವರು ಕಿರುಕುಳ ಆರೋಪ: ಎಸ್‌ಸಿ ಎಸ್‌ಟಿ ಕಾಂಗ್ರೆಸ್ ಘಟಕ ಖಂಡನೆ

ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷದಲ್ಲಿರುವ ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಕಿರುಕುಳ ನೀಡುತ್ತಿರುವುದು ಖಂಡನೀಯ. ಇದನ್ನು ಎಸ್‌ಸಿ ಎಸ್‌ಟಿ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಸದಸ್ಯರಾದ ಜಿ.ಲಕ್ಷ್ಮೀಪತಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ ಬ್ಲಾಕ್ ಮತ್ತು ಎಸ್‌ಸಿ ಎಸ್‌ಟಿ ಘಟಕದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇಡಿ, ಐಟಿ ಮುಂತಾದ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿ ಪ್ರಭಾವಿ ದಲಿತ ನಾಯಕರ ಮನೆ ಮೇಲೆ ದಾಳಿ ಮಾಡಿಸಿ ಅವರನ್ನು ಕುಂದಿಸುವ ಕೆಲಸ ನಿರಂತವಾಗಿ ನಡೆಯುತ್ತಿದೆ. ಇದನ್ನು ಖಂಡಿಸಿ ರಾಜ್ಯದೆಲ್ಲಡೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬಿಜೆಪಿ ವಿರುದ್ಧ ತೀವ್ರವಾದ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಸಬಾ ಎಸ್‌ಸಿ ಎಸ್ಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಂಪಣ್ಣ ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಾಂಕ್ ಖರ್ಗೆಯವರನ್ನು ನಾಯಿಗೆ ಹೋಲಿಸಿರುವುದು ಸರಿಯಲ್ಲ, ರಾಜಕಾರಣದಲ್ಲಿ ಯಾರೂ ಶಾಶ್ವತವಲ್ಲ, ಅವರ ಕುಟುಂಬದೊಂದಿಗೆ ಇದ್ದು, ಬೆಳೆದು ಇದೀಗ ಕೋಮುವಾದಿ ಬಿಜೆಪಿ ಪಕ್ಷಗದೊಂದಿಗೆ ಸೇರಿ ಅವರ ತಾಳಕ್ಕೆ ತಕ್ಕಂತೆ ಕುಣಿದು ನಾಯಿಗೆ ಹೋಲಿಕೆ ಮಾಡಿರುವುದು ಖಂಡನೀಯ, ಛಲವಾದಿ ನಾರಾಯಣಸ್ವಾಮಿ ಅವರು ಕೂಡಲೆ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ನಗರ ಎಸ್‌ಸಿ ಘಟಕದ ಅಧ್ಯಕ್ಷರಾದ ಮುನಿರಾಜ್ ಅವರು ಮಾತನಾಡಿ ಬಿಜೆಪಿ ನಾಯಕರನ್ನು ಮೆಚ್ಚಿಸುವ ಒಂದೇ ಕಾರಣಕ್ಕೆ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆಯವರನ್ನು ಅವಾಚ್ಯ ಶಬ್ದಗಳಿಂದ ನಿಂದನೇ ಮಾಡಿರುವುದು ಖಂಡನೀಯ, ಕೂಡಲೇ ಛಲವಾದಿ ನಾರಾಯಣಸ್ವಾಮಿ ಕ್ಷಮೆ ಕೋರಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿ ಮುಖಕ್ಕೆ ಮಸಿ ಬಳಿಯ ಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ಪರಿಶಿಷ್ಟ ಜನಾಂಗದ ರಾಜ್ಯ ಸಚಿವರಾದ ಪ್ರಿಯಾಂಕ್ ಖರ್ಗೆಯವರ ವಿರುದ್ಧ ಅದೇ ಸಮುದಾಯದವರಾದ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಾರ್ಹ ಪದಬಳಕೆ ಮಾಡಿ ಬಿಜೆಪಿಯವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಕುರುಬ ಸಂಘದ ರಾಜ್ಯ ಖಜಾಂಚಿ ಕಂಟನಕುಂಟೆ ಕೃಷ್ಣ ಮೂರ್ತಿ ಆರೋಪಿಸಿದರು.

ಇನ್ನು ರಾಜಕಾರಣದಲ್ಲಿ ಇದುವರೆಗೂ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ಬೆಳೆದ ರಾಜಕಾರಣಿ ಗೃಹ ಸಚಿವ ಜಿ.ಪರಮೇಶ್ವರ್ ಅವರ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸುತ್ತಿರುವುದುನ್ನು ನಮ್ಮ ಪಕ್ಷ ಖಂಡಿಸುತ್ತದೆ. ಇದೇ ರೀತಿ ಮುಂದುವರೆದರೇ ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುವ ಕೆಲಸ ಮಾಡಲಾಗುವುದು ಎಂದರು.

ನಗರಸಭಾ ಸದಸ್ಯರಾದ ಶಿವಣ್ಣ ಮಾತನಾಡಿ, ಪ್ರಿಕಾಂಕ್ ಖರ್ಗೆಯವರ ಏಳಿಗೆಯನ್ನು ಸಹಿಸದೇ ಛಲವಾದಿ ನಾರಾಯಣಸ್ವಾಮಿ ನಾಯಿಗೆ ಹೋಲಿಕೆ ಮಾಡಿರುವುದು ಸರಿಯಲ್ಲ. ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಸ್ಥಾನ ಪಡೆದುಕೊಂಡಿರಿವುದು ಪ್ರಿಯಾಂಕ್ ಖರ್ಗೆಯನ್ನ ಟಾರ್ಗೆಟ್ ಮಾಡಿ ಖಂಡಸೋಕೆ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಭೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ದಲಿತ ಮುಖಂಡ ಟಿ.ಮಂಜುನಾಥ್, ಶ್ರೀನಿವಾಸ್ ಮಂಜುನಾಥ್‌ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *