ವಿಧಾನಸೌಧದಲ್ಲಿ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಖಂಡನಾರ್ಹವಾಗಿದ್ದು, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ನಗರದ ಮೆಕ್ಕೆ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಕೂಡಲೇ ಎನ್ಐ ತನಿಖೆ ನಡೆಸಬೇಕು ಘೋಷಣೆ ಕೂಗುವ ಸಂದರ್ಭದಲ್ಲಿ ಇತರೆ ಕಾಂಗ್ರೆಸ್ ಮುಖಂಡರು ಅಲ್ಲಿದ್ದರೂ ಕೂಡ ಅದನ್ನು ತಡೆಯುವ ಕೆಲಸ ಮಾಡಲಿಲ್ಲ ಜೊತೆಗೆ ಕೆಲವು ರಾಜ್ಯದ ಪ್ರಭಾವಿ ಸಚಿವರು ಘೋಷಣೆಯನ್ನು ಸಮರ್ಥನೆ ಮಾಡಿಕೊಳ್ಳಲು ಹೊರಟಿದ್ದಾರೆ ಇದು ಅವರಿಗೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷವು ದೇಶದಲ್ಲಿ ಸಂವಿಧಾನವನ್ನು ರಕ್ಷಣೆ ಮಾಡುತ್ತೇವೆ ಎಂದು ಗುತ್ತಿಗೆ ಪಡೆದವರ ರೀತಿಯಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೊರಟಿದ್ದಾರೆ. ಆದರೆ, ಅವರೇ ಇವತ್ತು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಗೌರವ ಅಪಮಾನ ಮಾಡಿದ್ದಾರೆ. ಕೂಡಲೇ ನಾಸೀರ್ ಹುಸೇನ್ ಅವರ ರಾಜ್ಯಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು. ಈ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಅವರಿಗೆ ಯಾವುದೇ ಕಾರಣಕ್ಕೂ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕಲ್ಪಿಸಬಾರದು. ಇದನ್ನು ಪ್ರಶ್ನಿಸಿದ ಮಾಧ್ಯಮದವರ ಮೇಲೆ ದರ್ಪ ತೋರಿರುವುದು ಪ್ರಜಾಪ್ರಭುತ್ವದ ನಾಲ್ಕನೇ ಅಂಗಕ್ಕೆ ಮಾಡಿದ ಅಪಮಾನವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಚಿಮುಲ್ ನಿರ್ದೇಶಕ ವಡಗೂರು ಡಿ.ವಿ ಹರೀಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಘೋಷಣೆಯಿಂದ ದೇಶದ 140 ಕೋಟಿ ಜನರಿಗೆ ಮಾಡಿದ ಅವಮಾನವಾಗಿದೆ. ಕೇವಲ ಒಂದು ಸಮುದಾಯವನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸರಕಾರವು ಕೂಡ ಈ ಘೋಷಣೆಯನ್ನು ಸಮರ್ಥನೆ ಮಾಡಿಕೊಳ್ಳಲು ಹೊರಟಿದೆ. ವಿಧಾನಸೌಧದಲ್ಲಿಯೇ ಇಂತಹ ಘಟನೆ ನಡೆದಿದ್ದು, ಸರಕಾರಕ್ಕೆ ಕಣ್ಣು ಕಿವಿ ಇದೆಯೇ ಎಂದು ಪ್ರಶ್ನೆ ಮಾಡಬೇಕಾಗಿದೆ. ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಡಿ.ಕೆ ರಮೇಶ್ ಮಾತನಾಡಿ, ಒಕ್ಕೂಟ ವ್ಯವಸ್ಥೆಯಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಅದರಿಂದಲೇ ಅಶಾಂತಿ ತರುವ ಘಟನೆಗಳನ್ನು ಕಾರ್ಯಕರ್ತರ ಮೂಲಕ ಮಾಡಿಸಲು ಹೊರಟಿದ್ದಾರೆ. ದೇಶದ್ರೋಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ದ ಕ್ರಮ ವಹಿಸಬೇಕು ಮುಂದಿನ ಪ್ರತಿಯೊಂದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡಬೇಕು ಎಂದರು.
ಈ ಪ್ರತಿಭಟನೆ ನೇತೃತ್ವವನ್ನು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಯಲವಾರ ಸೊಣ್ಣೇಗೌಡ, ನಗರಸಭೆ ಸದಸ್ಯರಾದ ರಾಕೇಶ್, ಮಂಜುನಾಥ್, ಮುಖಂಡರಾದ ಬಲಿಜ ಸಂಘದ ತೋಟಗಳ ಅಶೋಕ್, ಕಲಾ ರಮೇಶ್, ವಿಜಿಗೌಡ, ದಿಂಬ ನಾಗರಾಜ್ ಗೌಡ, ಚಂಬೆ ರಾಜೇಶ್, ಪುಸ್ತಿ ನಾರಾಯಣಸ್ವಾಮಿ, ಶಬರೀಷ್, ಜಡೇರಿ ಗೋಪಾಲಗೌಡ, ಸೌದ್ ಶರೀಫ್, ಅಮ್ಮನಲ್ಲೂರು ರಮೇಶ್, ಜಯನಗರ ಕಾರ್ತಿಕ್ ಸೇರಿದಂತೆ ಮುಂತಾದವರು ವಹಿಸಿದ್ದರು