ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆನಂದ್ ಅಲಿಯಾಸ್ ಕಬಾಬ್ ಆನಂದ್‌ಗೆ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶರಾದ ನಿರ್ಮಲಾ ಕೆ. ಅವರು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 302ರಡಿ ಆರೋಪಿಯನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ನಾಲ್ಕು ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

2019ರ ಜನವರಿ 8ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಐಪಿಸಿ ಕಲಂ 302 (ಕೊಲೆ), 324 (ಅಪಾಯಕಾರಿ ಆಯುಧದಿಂದ ಹಲ್ಲೆ) ಹಾಗೂ 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹಣಕಾಸಿನ ವಿಚಾರದಿಂದ ವೈಮನಸ್ಸು

ಪೊಲೀಸ್ ತನಿಖೆ ಹಾಗೂ ದಾಖಲೆಗಳ ಪ್ರಕಾರ, ಮೃತ ಗಂಗಾಧರ್ ಮತ್ತು ಆರೋಪಿ ಆನಂದ್ ನಡುವೆ ಹಣಕಾಸಿನ ವಿಚಾರವಾಗಿ ಹಿಂದಿನಿಂದಲೂ ವೈಮನಸ್ಸು ಇತ್ತು. ಘಟನೆ ನಡೆದ ದಿನ ರಾತ್ರಿ ಸುಮಾರು 9.45ರ ವೇಳೆಗೆ ಪ್ರೀತಿ ವೈನ್ಸ್ ವೃತ್ತದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಗಂಗಾಧರ್ ಮಚ್ಚು ಹಾಗೂ ಖಾರದ ಪುಡಿಯನ್ನು ತೆಗೆದುಕೊಂಡು ಹಲ್ಲೆ ಮಾಡಲು ಮುಂದಾಗಿದ್ದಾನೆ ಎನ್ನಲಾಗಿದ್ದು, ಆತ್ಮರಕ್ಷಣೆ ವೇಳೆ ಆರೋಪಿ ಅದೇ ಮಚ್ಚನ್ನು ಪಡೆದು ಗಂಗಾಧರ್ ಮೇಲೆ ಹಲ್ಲೆ ನಡೆಸಿದ್ದಾನೆ..

ಗಂಭೀರವಾಗಿ ಗಾಯಗೊಂಡ ಗಂಗಾಧರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

36 ಸಾಕ್ಷಿದಾರರ ವಿಚಾರಣೆ

ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ 36 ಸಾಕ್ಷಿದಾರರನ್ನು ಪರೀಕ್ಷಿಸಿತು. ವೈದ್ಯಕೀಯ ವರದಿಗಳು, ದಾಖಲೆ ಸಾಕ್ಷ್ಯಗಳು ಹಾಗೂ ವಸ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ಆರೋಪಿಯ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ತನಿಖಾ ತಂಡದ ಪಾತ್ರ

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ನಟರಾಜ್ ಟಿ.ಎನ್. ಸರ್ಕಾರದ ಪರ ವಾದ ಮಂಡಿಸಿದರು. ತನಿಖಾಧಿಕಾರಿಯಾಗಿದ್ದ ಸಿಪಿಐ ಸಿದ್ದರಾಜು, ಕೋರ್ಟ್ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಎ.ಜಿ. ಹಾಗೂ ಚಿತ್ರಲಿಂಗ ಬಿ. ಅವರು ತನಿಖೆಗೆ ಸಹಕರಿಸಿರುತ್ತಾರೆ.

ಏಳು ವರ್ಷಗಳ ಕಾಲ ನ್ಯಾಯಾಲಯದಲ್ಲಿ ನಡೆದಿದ್ದ ವಿಚಾರಣೆಗೆ ಇದೀಗ ಅಂತಿಮ ತೆರೆ ಬಿದ್ದಿದ್ದು, ದೊಡ್ಡಬಳ್ಳಾಪುರದಲ್ಲಿ ಬಹುಚರ್ಚೆಗೆ ಕಾರಣವಾಗಿದ್ದ ಈ ಕೊಲೆ ಪ್ರಕರಣಕ್ಕೆ ನ್ಯಾಯಾಂಗ ಅಂತಿಮ ತೀರ್ಪು ನೀಡಿದೆ.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

2 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

4 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

18 hours ago