ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ಈಗ ಏನು ಪ್ರತಿಕ್ರಿಯೆ ಕೊಡುತ್ತಾರೆ ಎನ್ನುವುದನ್ನು ನೋಡಬೇಕು ಎಂದರು.

ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆಯೇರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ಬೆಲೆ ಏರಿಕೆಯ ಕ್ರಮವನ್ನು ನಮ್ಮ ಸರ್ಕಾರ ಖಂಡಿಸುವುದಲ್ಲದೇ, ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿದ್ದ ಗೃಹಬಳಕೆಯ ಎಲ್ ಪಿ ಜಿ ದರ,  ಈಗ 1000 ರೂ.ಗಳನ್ನು ದಾಟಿದೆ. ಈ ಬೆಲೆಯೇರಿಕೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಇನ್ನಷ್ಟು ಅಸ್ತವ್ಯಸ್ತಗೊಳಿಸಲಿದೆ ಎಂದರು.

ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಎಸ್ ಐ ಆರ್ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದಕ್ಕೆ ಬೇಕಾದ ಸಿದ್ದತೆಯನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ತಲಾ 3 ರೂ. ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಇದು ಬೆಲೆ ಏರಿಕೆಯಲ್ಲ, ಭಾರತದ ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೆ ನಡೆಸಿದ ನೇರ ದಾಳಿಯಾಗಿದೆ ಎಂದು ಕಿಡಿಕಾರಿದರು.

ನಾವು ಅಂದುಕೊಂಡಂತೆ ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯ ವೈಫಲ್ಯ, ಕಳಪೆ ಆರ್ಥಿಕ ನಿರ್ವಹಣೆ ಮತ್ತು ಅಜಾಗರೂಕ ಹಣದುಬ್ಬರದ ನಿರ್ವಹಣೆಯ ಪರಿಣಾಮಗಳನ್ನು ಬಲವಂತವಾಗಿ ದೇಶದ ಜನತೆಯ ತಲೆಯ ಮೇಲೆ ಹೇರುತ್ತಿದೆ. ದೇಶದ ಜನತೆಯ ಹಿತಾಸಕ್ತಿಗಳನ್ನು ಕಾಪಾಡುವ ಬದಲು ಅವರಿಂದಲೇ ಹಣ ಕಿತ್ತುಕೊಂಡು ತನ್ನ ವೈಫಲ್ಯದ ನಷ್ಟ ಭರಿಸುತ್ತಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀ. ಒಂದಕ್ಕೆ 106 ರೂ. ದಾಟಿದೆ. ಡೀಸೆಲ್‌ ದರವು 94 ರೂ. ಆಗಿದೆ. ಈ ಏರಿಕೆಯು ಕೇವಲ ಬಂಕ್‌ಗಳಿಗೆ ಸೀಮಿತಗೊಳ್ಳುವುದಿಲ್ಲ. ಇದರೊಂದಿಗೆ ಸಾರಿಗೆ ವೆಚ್ಚ, ತರಕಾರಿ, ಹಣ್ಣು, ಹಾಲು, ಸೇರಿದಂತೆ ಪ್ರತಿಯೊಂದು ದಿನಬಳಕೆ ವಸ್ತುಗಳ ದರ ಏರಿಕೆಯಾಗುತ್ತದೆ. ಇದರಿಂದ ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು, ಮನೆಯ ಜವಾಬ್ದಾರಿ ಹೊತ್ತ ಮಹಿಳೆಯರು ಹಾಗೂ ಮಧ್ಯಮ ವರ್ಗದವರು  ದೈನಂದಿನ ಬದುಕು ನಡೆಸುವುದು ಮತ್ತಷ್ಟು ದುಸ್ತರವಾಗಲಿದೆ ಎಂದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕಡಿಮೆಯಿದ್ದಾಗ ಅದರ ಲಾಭವನ್ನು ಮೋದಿ ಸರ್ಕಾರ ಎಂದಿಗೂ ಜನತೆಗೆ ಬಿಟ್ಟುಕೊಡಲೇ ಇಲ್ಲ. ಆಗಲೂ ಜನತೆಯಿಂದ ದೊಡ್ಡ ಮೊತ್ತದ ತೆರಿಗೆಯನ್ನು ಸಂಗ್ರಹಿಸಿ ತನ್ನ ಬೊಕ್ಕಸವನ್ನು ತುಂಬಿಕೊಂಡಿತ್ತು. ಇನ್ನು ದರ ಏರಿಕೆಯಾದಾಗ ಅದರ ಸಂಪೂರ್ಣ ಭಾರವನ್ನು ಜನಸಾಮಾನ್ಯರ ಮೇಲೆ ಹೊರಿಸಿ ಕೈತೊಳೆದುಕೊಳ್ಳುತ್ತಿದೆ. ಇದು ಆಡಳಿತ ನಡೆಸುವ ಕ್ರಮವಲ್ಲ, ಇದು ದೇಶದ ಜನತೆಯ ಮೇಲಿನ ಘೋರ ಶೋಷಣೆಯಾಗಿದೆ ಎಂದು ಹೇಳಿದರು.

ಮೋದಿ ಸರ್ಕಾರವು ಹಣದುಬ್ಬರ ನಿಯಂತ್ರಣ ಮಾಡುವಲ್ಲಿ, ಡಾಲರ್‌ ಎದುರು ರೂಪಾಯಿ ಮೌಲ್ಯದ ಕುಸಿತವನ್ನು ತಡೆಯುವಲ್ಲಿ, ದೇಶದ ಆರ್ಥಿಕ ನಿರ್ವಹಣೆಯಲ್ಲಿ ಹಾಗೂ ಒಟ್ಟಾರೆ ಸಾಮಾನ್ಯ ಜನರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ತನ್ನ ಉದ್ಯಮಿ ಮಿತ್ರರ ರಕ್ಷಣೆಗೆ ತೋರುವ ಆತುರ, ಕಾಳಜಿ ಹಾಗೂ ಬದ್ಧತೆಯಲ್ಲಿ ಸ್ವಲ್ಪವಾದರೂ ದೇಶದ ಜನತೆಯ ಮೇಲೆ ತೋರಿಸಲಿ ಎಂಬುದು ನಮ್ಮ ಮನವಿ ಎಂದರು.

ಪೆಟ್ರೋಲ್‌, ಡೀಸೆಲ್‌ ದರ ತಲಾ 3 ರೂ. ಏರಿಕೆಯ ಜನವಿರೋಧಿ ನಡೆಯನ್ನು ನಾನು ಕಠಿಣವಾಗಿ ವಿರೋಧಿಸುತ್ತಿದ್ದೇನೆ. ತಕ್ಷಣವೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದೇನೆ. ನಿರಂತರವಾಗಿ ಬೀಳುತ್ತಿರುವ ರೂಪಾಯಿ ಮೌಲ್ಯ, ಆರ್ಥಿಕ ನಿರ್ವಹಣೆಯ ವೈಫಲ್ಯ ಮತ್ತು ಸಾಮಾನ್ಯ ನಾಗರಿಕರ ಕುಟುಂಬಗಳನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದರ ಹೊಣೆಯನ್ನು ಹೊತ್ತು ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

20 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

22 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

23 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

2 days ago