ಪೋಕ್ಸೋ ಪ್ರಕರಣದಲ್ಲಿ ಬಂಧನದ ಭಯ ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್.ವೈಗೆ ಹೈಕೋರ್ಟ್ ಸ್ವಲ್ಪ ಮಟ್ಟಿಗೆ ರಿಲೀಫ್ ನೀಡಿದೆ. ಇಂದು ಯಡಿಯೂರಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಬಿಎಸ್ವೈಗೆ ಜಾಮೀನು ನೀಡಿದೆ.
ಇದಲ್ಲದೇ ಮಾಜಿ ಸಿಎಂ ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅದೇರೀತಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಹೈಕೋರ್ಟ್ ನ್ಯಾಯಪೀಠ ತಾಕೀತು ಕೂಡ ಮಾಡಿದೆ.
ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿಯೇ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂ.17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಯಡಿಯೂರಪ್ಪಗೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕಿದೆ. ಹೀಗಾಗಿ ಯಡಿಯೂರಪ್ಪನವರಿಗೆ ವಿಚಾರಣೆಗೆ ಬರುವಂತೆ ನಿನ್ನೆ ಸಿಐಡಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ಇದಕ್ಕೆ ಬಿಎಸ್ ಯಡಿಯೂರಪ್ಪ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ನಿನ್ನೆ ಪೊಲೀಸರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವಂತೆ ಮನವಿ ಮಾಡಿದ್ದರು.