Categories: ರಾಜ್ಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಿಡಿದೆದ್ದ ಸಿದ್ದರಾಮಯ್ಯ

ಕನ್ನಡಿಗರ ಆಸ್ತಿಯಾದ ನಂದಿನಿಯನ್ನು ಗುಜರಾತಿನ ಮಾರ್ವಾಡಿಗಳ ಅಮೂಲ್‌ ಉತ್ಪನ್ನಗಳಿಗೆ ಅಡ ಇಡಲು ಹೊರಟಿರುವ ಕೇಂದ್ರ, ರಾಜ್ಯ ಸರಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮಾಜಿ‌‌ ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ?

ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್ ನದ್ದು, ಬಂದರು, ಏರ್ ಪೋರ್ಟ್ ನುಂಗಿದ್ದ ಅದಾನಿ ಗುಜರಾತ್ ನವರು, ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್ ನದ್ದು.

ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?
ಈ ಗುಜರಾತಿ ಆಕ್ರಮಣ ಇನ್ನು ಸಹಿಸಲು ಸಾಧ್ಯ ಇಲ್ಲ. ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಗೌರವಪೂರ್ವಕವಾಗಿ ನಿಲ್ಲಿಸಿ. ಕನ್ನಡಿಗರ ನಾಡಪ್ರೇಮ, ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ, ಪರಿಣಾಮ ನೆಟ್ಟಗಾಗದು..!

ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ, ಏನಿದು ನಿಮ್ಮ ಕರಾಮತ್ತು? ಇದ್ದಕ್ಕಿದ್ದ ಹಾಗೆ ಮಾರುಕಟ್ಟೆಯಿಂದ ನಂದಿನಿ ಹಾಲು ಮತ್ತಿತರ ಉತ್ಪನ್ನಗಳು ಮಾಯವಾಗುತ್ತಿವೆ.

ಗುಜರಾತ್ ನಿಂದ ನೀವು ಕಳುಹಿಸುತ್ತಿರುವ ಅಮುಲ್ ಹಾಲು ಮತ್ತು ಉತ್ಪನ್ನಗಳ ಮಾರಾಟದ ಬಿರುಸು ಹೆಚ್ಚಾಗಿದೆ. ಇವೆಲ್ಲವೂ ಸಹಜ ಬೆಳವಣಿಗೆಯೇ?
ಭರವಸೆ ನೀಡಿದಂತೆ ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು. ಈಗ ರೈತರ ಹೊಟ್ಟೆಗೆ ಹೊಡೆಯುವ ಹುನ್ನಾರವೇ?

ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕ್ಷೀರಧಾರೆ ಮತ್ತು ಕ್ಷೀರಭಾಗ್ಯ ಯೋಜನೆಗಳು ಅನ್ನಭಾಗ್ಯ ಯೋಜನೆಯ ರೀತಿಯಲ್ಲಿಯೇ ನನಗೆ ಸಂತೃಪ್ತಿ ತಂದ ಯೋಜನೆಗಳು. ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸೆನ್ಸ್ ಕೊಡುವುದೇ ಮೋದಿ ಜೀ?
ಹಾಲಿನ ಸಬ್ಸಿಡಿಯನ್ನು ಲೀಟರಿಗೆ 5 ರೂ.ಹೆಚ್ಚಿಸಿ ನಾನು ಕ್ಷೀರಧಾರೆ ಯೋಜನೆ ಜಾರಿಗೊಳಿಸಿದ್ದೆ. ಇದರಿಂದಾಗಿ 20-12-2013 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು.
ಹಾಲು ಹೆಚ್ಚಾಯಿತು ಎಂದು ನಾವು ಖರೀದಿ ಕಡಿಮೆ ಮಾಡಿರಲಿಲ್ಲ. ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಇದು ಗೋಸಂಪತ್ತು, ರೈತ ಸಂಪತ್ತು ಮತ್ತು ಮಕ್ಕಳ ಸಂಪತ್ತು ಬೆಳೆಸಿದ ನಮ್ಮ ಆಡಳಿತಶೈಲಿ. ನಿಮ್ಮದೇನು?

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. 99 ಲಕ್ಷ ಲೀಟರ್ ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಇದು ನೀವು ಮತ್ತು ಅಮಿತ್ ಶಾ ಕೂಡಿ ಕೆಎಂಎಫ್ ವಿರುದ್ಧ ಮಾಡಿರುವ ಷಡ್ಯಂತ್ರವೇ?
ಕೆಎಂಎಫ್ ಹಾಲು ಖರೀದಿಸುತ್ತಿಲ್ಲ ಎಂದು ಹಳ್ಳಿಗಳಲ್ಲಿ ಪಶುಪಾಲಕರು ಗೋಳಾಡುತ್ತಿದ್ದಾರೆ. ಹಾಲು ಸಂಗ್ರಹದ ಪ್ರಮಾಣ ಕಡಿಮೆಯಾಗಿರುವ ಕಾರಣದಿಂದಾಗಿ ಪ್ರತಿದಿನ ಸುಮಾರು 11 ಕೋಟಿ ರೂಪಾಯಿ ಹಣ ರೈತರ ಕೈತಪ್ಪಿ ಹೋಗುತ್ತಿದೆ. ಇದೇನಾ ನಿಮ್ಮ ರೈತರ ಆದಾಯ ದುಪ್ಟಟ್ಟುಗೊಳಿಸುವ ಯೋಜನೆ?

ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆಎಂಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ  ಹೈನುಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ?
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಬರ್ವಾಲ್‌ಗಳು, ಬಿಂದ್ರಾಗಳು, ಜೈನ್‌ಗಳು, ಶರ್ಮಾಗಳ ಬೀಫ್ ರಫ್ತು ಪ್ರಮಾಣ ಸಾವಿರಾರು ಕೋಟಿಗಳಿಗೆ ಏರಿಕೆಯಾಗಿರುವುದಾಗಿ ವರದಿಗಳಿವೆ.  ಇವರ ಮೇಲಿರುವ ಕೃಪಕಟಾಕ್ಷ ಯಾರದ್ದು?

ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಬ್ಸಿಡಿ ರೂಪದಲ್ಲಿ ರೈತರಿಗೆ ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1,186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1,200 ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಒದಗಿಸಿ ಅನ್ಯಾಯ ಮಾಡಿದೆ.

ಕಳೆದ 5 ವರ್ಷಗಳಲ್ಲಿ ಪಶು ಆಹಾರದ ಬೆಲೆಗಳು ಮೂರು ಪಟ್ಟು ಹೆಚ್ಚಾಗಿವೆ. 2017-18ರಲ್ಲಿ 49 ಕೆ.ಜಿ ಬೂಸಾದ ಬೆಲೆ 450 ರೂ. ಇದ್ದದ್ದು ಈಗ 1,350 ರೂ.ಗಳಿಗೆ ಏರಿಕೆಯಾಗಿದೆ. 30 ಕೆಜಿ ಹಿಂಡಿಯ ಬೆಲೆ 400 ರೂ.ಗಳಿಂದ 1,500 ಕ್ಕೇ ಏರಿದೆ. ಏನಿದು?

ರಾಜ್ಯದ ಬಿಜೆಪಿ ಸರ್ಕಾರ ಸರ್ಕಾರಿ ಕಾವಲು ಜಮೀನುಗಳನ್ನು, ಡಿನೋಟಿಫೈ ಮಾಡಿ ಉಳ್ಳವರಿಗೆ, ಆರ್‌ಎಸ್‌ಎಸ್ ನವರಿಗೆ, ಬಂಡವಾಳಿಗರಿಗೆ ಹಂಚಲು ಪ್ರಾರಂಭಿಸಿದೆ. ಟಿಪ್ಪುಸುಲ್ತಾನನ ದೂರದೃಷ್ಟಿಯ ಫಲವಾದ ಲಕ್ಷಾಂತರ ಎಕರೆ ವಿಸ್ತೀರ್ಣದ ಅಮೃತ್ ಮಹಲ್ ಕಾವಲು ಪ್ರದೇಶ ಮಾಯವಾಗುತ್ತಿರುವುದು ಯಾರಿಂದ?

ಆರ್‌ಎಸ್‌ಎಸ್ ಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡಲಾಗುತ್ತಿದೆ. ನಮ್ಮ ರೈತರ ಜಾನುವಾರುಗಳಿಗೆ ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

11 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

15 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

16 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

21 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago