ಪ್ರಧಾನಿ ಮೋದಿಯವರೇ… ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ- ಸಿಎಂ ಸಿದ್ದರಾಮಯ್ಯ

‘‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕಿಡಿಕಾರಿದ್ದಾರೆ.

ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ಮಾತ್ರ. ಪ್ರಧಾನಿ ನರೇಂದ್ರ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೇ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.8,616 ಕೋಟಿಯಾಗಿದ್ದರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಯಾದ ವರ್ಷ (2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.15,894 ಕೋಟಿ. ಈ ಮೊತ್ತ ಈಗ ಹೆಚ್ಚು ಕಡಿಮೆ 40,000 ಕೋಟಿ ರೂಪಾಯಿಗೆ ತಲುಪಿದೆ. ಇದು ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ ಎಂದು ಹೇಳಿದ್ದಾರೆ.

ಇಷ್ಟು ಮಾತ್ರವಲ್ಲ, ನಮ್ಮ ಸರ್ಕಾರ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ, ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುತ್ತಿಗೆ ಆಧಾರದ ನೇಮಕಾತಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದರು.

ಕರ್ನಾಟಕದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ. ರಾಜ್ಯದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಛೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರೇ, ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago