ಪ್ರಧಾನಿ ಮೋದಿಯವರೇ… ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ- ಸಿಎಂ ಸಿದ್ದರಾಮಯ್ಯ

‘‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕಿಡಿಕಾರಿದ್ದಾರೆ.

ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ಮಾತ್ರ. ಪ್ರಧಾನಿ ನರೇಂದ್ರ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೇ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.8,616 ಕೋಟಿಯಾಗಿದ್ದರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಯಾದ ವರ್ಷ (2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.15,894 ಕೋಟಿ. ಈ ಮೊತ್ತ ಈಗ ಹೆಚ್ಚು ಕಡಿಮೆ 40,000 ಕೋಟಿ ರೂಪಾಯಿಗೆ ತಲುಪಿದೆ. ಇದು ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ ಎಂದು ಹೇಳಿದ್ದಾರೆ.

ಇಷ್ಟು ಮಾತ್ರವಲ್ಲ, ನಮ್ಮ ಸರ್ಕಾರ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ, ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುತ್ತಿಗೆ ಆಧಾರದ ನೇಮಕಾತಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದರು.

ಕರ್ನಾಟಕದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ. ರಾಜ್ಯದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಛೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರೇ, ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

3 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

5 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

11 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

14 hours ago