ಪ್ರವರ್ಗ-2ಎ ಅಡಿ ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತ ಸಮುದಾಯ ಬೇಡಿಕೆ ವಿಚಾರ: ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು- ಸಿಎಂ ಸಿದ್ದರಾಮಯ್ಯ

ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು.

ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು ಎಂದರು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದು ಹೇಳಿದರು.

ಹಿಂದಿನ ಸರ್ಕಾರ ಸಮುದಾಯದ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ  ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಂಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಂಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.

ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ. ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿದೆ ಎಂದರು.

ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿದೆ ಎಂದು ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್,  ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago