ಪ್ರವರ್ಗ-2ಎ ಅಡಿ ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತ ಸಮುದಾಯ ಬೇಡಿಕೆ ವಿಚಾರ: ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು- ಸಿಎಂ ಸಿದ್ದರಾಮಯ್ಯ

ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು.

ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು ಎಂದರು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದು ಹೇಳಿದರು.

ಹಿಂದಿನ ಸರ್ಕಾರ ಸಮುದಾಯದ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ  ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಂಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಂಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.

ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ. ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿದೆ ಎಂದರು.

ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿದೆ ಎಂದು ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್,  ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago